ಸಂಪುಟ ವಿಸ್ತರಣೆ : ಕಾಂಗ್ರೆಸ್ ಮುಂದಿರುವ ಮತ್ತೊಂದು ಸವಾಲು!
Recommended Video

ಬೆಂಗಳೂರು, ಸೆಪ್ಟೆಂಬರ್ 12 : ಜಾರಕಿಹೊಳಿ ಸಹೋದರರ ರಾಜಕೀಯ ಚಟುವಟಿಕೆಯಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಲ್ಲಣ ಉಂಟಾಗಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ಸಂಪುಟ ವಿಸ್ತರಣೆ ನಡೆಯಲಿದ್ದು, ವಿಸ್ತರಣೆ ಬಳಿಕ ಅಸಮಾಧಾನ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಮತ್ತು 1 ಸ್ಥಾನ ಜೆಡಿಎಸ್ ಪಕ್ಷಕ್ಕೆ ಮೀಸಲು. 20 ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನಡೆಯಬೇಕಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶದಿಂದ ವಾಪಸ್ ಬಂದ ಬಳಿಕ ಈ ಪ್ರಕ್ರಿಯೆ ಆರಂಭವಾಗಲಿದೆ. ಹಲವು ಹಿರಿಯ ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಎನ್ನುವುದು ಇನ್ನೂ ನಿಗೂಢವಾಗಿದೆ.
ಜಾರಕೊಹೊಳಿ ಸಹೋದರರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಮತ್ತೊಂದು ಕಡೆ ಬಳ್ಳಾರಿಗೆ ಒಂದು ಸಚಿವ ಸ್ಥಾನ ನೀಡಬೇಕಿದೆ. ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಗಳು. ಇರುವ ಆರು ಸ್ಥಾನಗಳಿಗೆ ಪ್ರಬಲ ಪೈಪೋಟಿ ನಡೆಯುತ್ತಿದೆ....

ಮೈತ್ರಿ ಸರ್ಕಾರ
ಮೇ ತಿಂಗಳಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ 22 ಸಚಿವ ಸ್ಥಾನಗಳು, ಉಪ ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಪಾಲಾಗಿತ್ತು. 12 ಸಚಿವ ಸ್ಥಾನಗಳು ಜೆಡಿಎಸ್ಗೆ ಒಲಿದು ಬಂದಿತ್ತು. ಈಗ 7 ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಕಾಂಗ್ರೆಸ್, 1 ಜೆಡಿಎಸ್ಗೆ ಸಿಗಲಿವೆ.
ಸಂಪುಟ ವಿಸ್ತರಣೆ ಜೊತೆಗೆ 20 ನಿಗಮ-ಮಂಡಳಿಗಳಿಗೆ ನೇಮಕಾತಿ ನಡೆಯಬೇಕಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಈ ಪ್ರಕ್ರಿಯೆ ಆರಂಭವಾಗಲಿದೆ. ಆದ್ದರಿಂದ ಕಾಂಗ್ರೆಸ್ ಮುಂದೆ ದೊಡ್ಡ ಸವಾಲು ಇದೆ.

ಹಿರಿಯ ಶಾಸಕರ ಸಮಸ್ಯೆ
ಕಾಂಗ್ರೆಸ್ನಲ್ಲಿ ಅನೇಕ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ. ರಾಮಲಿಂಗಾ ರೆಡ್ಡಿ ಅವರು ಜಯನಗರದ ಚುನಾವಣೆಯಲ್ಲಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ಬಾಗಲಕೋಟೆ-ವಿಜಯಪುರ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಸಹೋದರರನ್ನು ಗೆಲ್ಲಿಸಿಕೊಂಡು ಬಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಜಾರಕಿಹೊಳಿ ಸಹೋದರರು
ಈಗ ಜಾರಕಿಹೊಳಿ ಸಹೋದರರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಮುಂದಿಟ್ಟಿದ್ದಾರೆ. ವಾಲ್ಮೀಕಿ ಸಮುದಾಯದ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಬೇಡಿಕೆ. ಬಳ್ಳಾರಿ ಮೂಲಕ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಸಿದ್ದರಾಮಯ್ಯ ಅವರು ಸೆ.16ರಂದು ವಿದೇಶ ಪ್ರವಾಸದಿಂದ ವಾಪಸ್ ಆಗಲಿದ್ದಾರೆ. ಆಗ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭವಾಗಲಿದೆ. ನಿಗಮ-ಮಂಡಳಿಗಳ ನೇಮಕದ ಪ್ರಕ್ರಿಯೆಯೂ ಆರಂಭವಾಗಲಿದೆ.

ಕಾಂಗ್ರೆಸ್ ಮುಂದೆ ಸವಾಲು
ಮೇ ತಿಂಗಳಿನಲ್ಲಿ ಸಂಪುಟ ವಿಸ್ತರಣೆ ಮಾಡುವಾಗಲೇ ಕಾಂಗ್ರೆಸ್ ನಾಯಕರು ಹಲವು ಸವಾಲು ಎದುರಿಸಿದ್ದರು. ಈಗ ಸಂಪುಟ ವಿಸ್ತರಣೆಯಾದರೆ ಮತ್ತೆ ಪಕ್ಷಕ್ಕೆ ಸವಾಲು ಎದುರಾಗಲಿದೆ. ವಿಧಾನಪರಿಷತ್ ಸದಸ್ಯರು, ಹಿರಿಯ ನಾಯಕರು, ಜಾರಕಿಹೊಳಿ ಸಹೋದರರು ಹೀಗೆ ಸಚಿವ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದಾರೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ?












Click it and Unblock the Notifications