'ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್ನಲ್ಲೇ ಪಿತೂರಿ'
ಬೆಂಗಳೂರು, ಅಕ್ಟೋಬರ್ 07: ಪ್ರಾಮಾಣಿಕತೆ ಇದ್ದರೆ ಸಿದ್ದರಾಮಯ್ಯನವರು ತಕ್ಷಣವೇ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್ನಲ್ಲೇ ಪಿತೂರಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರಿನ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಸಚಿವ ಬಾಲಕೃಷ್ಣ ಅವರು ಹೇಳಿದ್ದಾರೆ, ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಲ್ಲದೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸದಿಲ್ಲಿಗೆ ಹೋಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲಿ ಏನು ಸಂದೇಶ ಕೊಟ್ಟಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಹಿಂದಿನ ಅಧಿಕಾರದ ಅವಧಿಯಲ್ಲಿ ಜಾತಿ ಗಣತಿ ಅನುಷ್ಠಾನ ಮಾಡುವುದು ಯಾಕೆ ಸಾಧ್ಯವಾಗಿಲ್ಲ? ಇದನ್ನು ನಾನು ಹೇಳುತ್ತಿಲ್ಲ, ಕಾಂಗ್ರೆಸ್ ಪಕ್ಷದ ಮುಖಂಡರೇ ಮಾತನಾಡುತ್ತಿದ್ದಾರೆ. ಮೂಡಾ ನಿವೇಶನಗಳ ಹಗರಣದಲ್ಲಿ ರಾಜೀನಾಮೆ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿರುವ ಸಿದ್ದರಾಮಯ್ಯನವರು ಅದನ್ನು ಬದಿಗೊತ್ತಲು ಜಾತಿಗಣಗಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.












Click it and Unblock the Notifications