ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಕಾಮಗಾರಿಗಳಿಗೆ ತಡೆ!
ಬೆಂಗಳೂರು, ಮೇ 22; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ. ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಸರ್ಕಾರ ಮುನ್ನಡೆಸುತ್ತಿದ್ದಾರೆ.
ಮಾರ್ಚ್ 22ರ ಸೋಮವಾರ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ (ಆ ಮತ್ತು ಸಂ) ಡಾ. ಏಕ್ರೂಪ್ ಕೌರ್ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಅನ್ವಯ ಈ ಸುತ್ತೋಲೆ ಪ್ರಕಟವಾಗಿದೆ.

ಸರ್ಕಾರದ ಎಲ್ಲಾ ಇಲಾಖೆಗಳು/ ನಿಗಮಗಳು/ ಮಂಡಳಿ/ ಪ್ರಾಧಿಕಾರಗಳ ಹಿಂದಿನ ಕಾಮಗಾರಿಗಳನ್ನು ತಡೆಹಿಡಿಯುವ ಬಗ್ಗೆ ಎಂಬ ವಿಚಾರವನ್ನು ಸುತ್ತೋಲೆ ಒಳಗೊಂಡಿದೆ. ಈ ಮೂಲಕ ಹಿಂದಿನ ಸರ್ಕಾರದ ಕಾಮಗಾರಿಗಳನ್ನು ತಡೆ ಹಿಡಿಯಲು ಸೂಚನೆ ನೀಡಲಾಗಿದೆ.
ಸುತ್ತೋಲೆಯ ವಿವರ; ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಹೇಳಿದೆ.

ಈ ಸುತ್ತೋಲೆ ಪ್ರತಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ/ ಕಾರ್ಯದರ್ಶಿಗಳು,
ಆಯುಕ್ತರು, ಖಜಾನೆ ಆಯುಕ್ತಾಲಯ, 6ನೇ ಮಹಡಿ, ಕೆ. ಪಿ. ಸಿ. ಎಲ್, ಗ್ರೀನ್ ಬಿಲ್ಡಿಂಗ್, ಔಷಧ ನಿಯಂತ್ರಣ ಕಛೇರಿ ಕಟ್ಟಡದ ಆವರಣ, ಅರಮನೆ ರಸ್ತೆ, ಬೆಂಗಳೂರು-1 ಇವರಿಗೆ ಕಳಿಸಲಾಗಿದೆ.
ಅಲ್ಲದೇ ಎಲ್ಲಾ ಇಲಾಖಾ ಮುಖ್ಯಸ್ಥರುಗಳು, ರಾಜ್ಯದ ಎಲ್ಲಾ ನಿಗಮ/ ಮಂಡಳಿ/ ಪ್ರಾಧಿಕಾರಗಳು, ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು/ ಮುಖ್ಯ ಲೆಕ್ಕಾಧಿಕಾರಿಗಳು, ಆರ್ಥಿಕ ಇಲಾಖೆಯ ಅಪರ/ ಜಂಟಿ/ ಉಪ ಕಾರ್ಯದರ್ಶಿಗಳು ಮತ್ತು ಶಾಖಾ ರಕ್ಷಾ ಕಡತ/ ಹೆಚ್ಚುವರಿ ಪ್ರತಿಗಳು ಇವರಿಗೆ ರವಾನೆ ಮಾಡಲಾಗಿದೆ.
ಹೊಸ ಸರ್ಕಾರ ಬಂದಾಗಿದೆ; ಕರ್ನಾಟಕದಲ್ಲಿ ಚುನಾವಣೆ ಮುಗಿದು ಸಿದ್ದರಾಮಯ್ಯ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಗೊಂಡಿದೆ. ಶನಿವಾರ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಇನ್ನೂ ಖಾತೆ ಹಂಚಿಕೆ ಆಗಿಲ್ಲ.
ರಾಜ್ಯದಲ್ಲಿ ಪ್ರತಿ ಬಾರಿಯೂ ಹೊಸ ಸರ್ಕಾರ ರಚನೆಗೊಂಡಾಗ ಹಿಂದಿನ ಸರ್ಕಾರದ ಕಾಮಗಾರಿಗಳನ್ನು ತಡೆ ಹಿಡಿಯಲಾಗುತ್ತದೆ. ಸಚಿವರಾಗಿ ನಿಯೋಜನೆಗೊಂಡವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ ಅತ್ಯಗತ್ಯ ಇರುವುದಕ್ಕೆ ಮಾತ್ರ ಒಪ್ಪಿಗೆ ನೀಡುತ್ತಾರೆ.
ಪಕ್ಷಗಳು ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ಹಲವು ಭರವಸೆ ನೀಡಿರುತ್ತದೆ. ಅವುಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುತ್ತವೆ. ಅಲ್ಲದೇ ಹಿಂದಿನ ಸರ್ಕಾರದ ಅನಗತ್ಯ ಕಾಮಗಾರಿಗಳಿದ್ದರೆ ಅದನ್ನು ತಡೆಹಿಡಿಯಲಾಗುತ್ತದೆ.
ಕರ್ನಾಟಕದಲ್ಲಿ ಇನ್ನೂ ಖಾತೆ ಹಂಚಿಕೆ ಆಗಿಲ್ಲ. ಹಣಕಾಸು ಖಾತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಯೇ ಇರುವ ನಿರೀಕ್ಷೆ ಇದೆ. ಆದ್ದರಿಂದ ಹಿಂದಿನ ಸರ್ಕಾರದ ಯೋಜನೆಗಳಿಗೆ ತಡೆ ನೀಡಲಾಗಿದೆ. ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಯೋಜನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡುವುದಿಲ್ಲ.
ಹೊಸ ಸರ್ಕಾರ ರಚನೆಯಾದಾಗ ಅವರು ಹೊಸದಾಗಿ ಬಜೆಟ್ ಮಂಡನೆ ಮಾಡುತ್ತಾರೆ. ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಅನುಗುಣವಾಗಿ ಬಜೆಟ್ ತಯಾರಿ ನಡೆಯುತ್ತದೆ. ಜುಲೈನಲ್ಲಿ ಹೊಸ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಘೋಷಣೆ ಮಾಡಿದ್ದಾರೆ.












Click it and Unblock the Notifications