ಕರ್ನಾಟಕ ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ಆಡಿಯೊ ಬಿಡುಗಡೆ: ಯಾರೀ ಶಾಸಕ, ಏನಿದೆ ಆಡಿಯೊದಲ್ಲಿ? ಓದಿ
ಬೆಂಗಳೂರು, ಜನವರಿ 16: ಕರ್ನಾಟಕ ಸರ್ಕಾರದ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿವೆ. 40 ಪರ್ಸೆಂಟ್ ಸರ್ಕಾರವೆಂದೇ ರಾಜ್ಯ ಸರ್ಕಾರ ಕುಖ್ಯಾತಿ ಪಡೆದಿದೆ. ಸರ್ಕಾರದಲ್ಲಿರುವ ಶಾಸಕರು ಹಾಗೂ ಸಚಿವರು ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಗುತ್ತಿಗೆದಾರರ ಸಂಘವು ಆಡಿಯೊವೊಂದನ್ನು ಬಿಡುಗಡೆ ಮಾಡಿದೆ. ಈ ಆಡಿಯೊದಲ್ಲಿ ಬಿಜೆಪಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಅವರು ಗುತ್ತಿಗೆದಾರ ಮಂಜುನಾಥ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಧ್ವನಿ ಇದೆ.
ಈ ಆರೋಪಗಳ ಹಿನ್ನೆಲೆಯಲ್ಲಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಗುತ್ತಿಗೆದಾರರು ನಿರ್ಧರಿಸಿದ್ದಾರೆ. ಅನೇಕ ಸಚಿವರು ಮತ್ತು ಶಾಸಕರು ವಿಪರೀತ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ.
#Karnataka contractors assn release audio of #BJP MLA GH Thippareddy allegedly demanding #bribe from contractor Manjunath. They plan to protest against state govt this Wednesday. Assn alleges many ministers & MLAs (cutting across parties) are demanding bribe & payments r pending pic.twitter.com/pa9xdtwBqW
— Imran Khan (@KeypadGuerilla) January 16, 2023
ಇದೇ ವೇಳೆ. ಚಾಮರಾಜಪೇಠೆಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಬಾಕಿ ಇರುವ 25 ಕೋಟಿ ಹಣವನ್ನು ಗುತ್ತಿಗೆದಾರರಿಗೆ ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂಪಾಯಿ ಬಾಕಿ ಇದೆ. ಬೃಹತ್ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಎಂಟು ಸಾವಿರ ಕೋಟಿ ಬಾಕಿ ಇದೆ. ಬಿಬಿಎಂಪಿ ಮೂರು ಸಾವಿರ ಕೋಟಿ ರೂಪಾಯಿ ಬಿಲ್ ಅನ್ನು ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇದೇ ತಿಂಗಳು 18 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಂಪಣ್ಣ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಒತ್ತಾಯಿಸಲಿದ್ದೇವೆ ಎಂದು ಅವರು ತಿಳಿಸಿದರು.

ಸರ್ಕಾರದಲ್ಲಿರುವ ಸಚಿವರು ಹಾಗೂ ಶಾಸಕರಿಗೆ ಹಲವು ಬಾರಿ ಪತ್ರ ಬರೆದಿದ್ದೇವೆ. ಬಿಲ್ ಪಾವತಿ ಮಾಡಬೇಕೆಂದು ಒತ್ತಾಯಿಸಿದ್ದೇವೆ. ಆದರೂ, ಸರ್ಕಾರವಾಗಲಿ, ಸಚಿವರಾಗಲಿ ಸ್ಪಂದಿಸಿಲ್ಲ. ಸರ್ಕಾರ ನಿರ್ಲಕ್ಷ್ಯ ದೋರಣೆಯನ್ನು ಪ್ರದರ್ಶಿಸುತ್ತಿದೆ. ನೂರಾರು ಪತ್ರಗಳನ್ನು ಬರೆದಿದ್ದರೂ, ಮುಖ್ಯಮಂತ್ರಿಯಾಗಲಿ, ಸಚಿವರಾಗಲಿ ಸ್ಪಂದಿಸಿಲ್ಲ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ.
ಇದರಿಂದ ಹೋರಾಟದ ಹಾದಿ ಅನಿವಾರ್ಯವಾಗಿದೆ. ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದರೆ, ನಾವು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕುತ್ತೇವೆ. ಈಗ ನಡೆಯುತ್ತಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತಹ ಸಂದರ್ಭವನ್ನು ತಂದೊಡ್ಡಬೇಡಿ ಎಂದು ಗುತ್ತಿಗೆದಾರರ ಸಂಘ ಎಚ್ಚರಿಸಿದೆ.

ಕಳೆದ ವರ್ಷ ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪನವರೇ ಸಂತೋಷ್ ಪಾಟೀಲ್ ಸಾವಿಗೆ ಕಾರಣರು ಎಂದು ಆರೋಪಿಸಲಾಗಿತ್ತು. ಈಶ್ವರಪ್ಪ ಅವರ ಹೆಸರನ್ನೂ ಬರೆದಿಟ್ಟು ಸಂತೋಷ್ ಪಾಟೀಲ್ ನೇಣಿಗೆ ಶರಣಾಗಿದ್ದರು. ಇದು ರಾಷ್ಟ್ರ ಪಟ್ಟದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. 40 ಪರ್ಸೆಂಟ್ ಸರ್ಕಾರವೆಂದು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಕರೆಯಲಾಗುತ್ತದೆ. ವಿರೋಧ ಪಕ್ಷಗಳ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಜೆಡಿಎಸ್ ನಾಯಕ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸರ್ಕಾರದ ಮೇಲೆ ಕೇಳಿ ಬರುತ್ತಿರುವ ಮುಜುಗರದ ವಾತಾವರಣವನ್ನು ಸೃಷ್ಟಿಸಿದೆ.












Click it and Unblock the Notifications