ಕುಡಿಯುವ ನೀರಿನ ಕೊರತೆ ಇದೆಯೇ? ಕರೆ ಮಾಡಿ
ಬೆಂಗಳೂರು, ಏ. 29 : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗರಹರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಗ್ರಾಮಗಳಲ್ಲಿ ನೀರಿನ ಕೊರತೆ ಇದ್ದರೆ, ಕರೆ ಮಾಡಿ ಮಾಹಿತಿ ನೀಡಲು ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ದೂರು ಬಂದ ಎಂಟು ಗಂಟೆಯೊಳಗೆ ಟ್ಯಾಂಕರ್ ಮೂಲಕವಾದರೂ ನೀರು ಪೂರೈಕೆ ಮಾಡಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್, ರಾಜ್ಯದ 702 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಅಲ್ಲಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೆ 1800-425-8666 ಸಂಖ್ಯೆಗೆ ಶುಲ್ಕರಹಿತವಾಗಿ ಕರೆ ಮಾಡಿ ದೂರು ಸಲ್ಲಿಸಬಹುದು ಎಂದರು.

ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ ಎಂದು ದೂರು ಬಂದರೆ, 8 ಗಂಟೆ ಒಳಗೆ ಟ್ಯಾಂಕರ್ ಮೂಲಕವಾದರೂ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು. [ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ]
ಗ್ರಾಮಗಳಲ್ಲಿ ಜನರಿಗೆ ಮಾತ್ರವಲ್ಲ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸರ್ಕಾರ ಸಿದ್ಧವಾಗಿದೆ. ಕುಡಿಯುವ ನೀರು ಒದಗಿಸಲು ಹಣಕಾಸಿನ ಕೊರತೆ ಇಲ್ಲ. ಈ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗಾಗಿಯೇ ಒಟ್ಟಾರೆ 516 ಕೋಟಿ ರೂ. ಹಣ ಲಭ್ಯವಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು ಸರ್ಕಾರದ ಆದ್ಯತೆಯಾಗಿದೆ. ನೀರು ಪೂರೈಕೆಗೆ ಸಮಸ್ಯೆ ಉಂಟಾಗದಂತೆ ಯಾವುದೇ ಅಧಿಕಾರಿಗೆ ಜೂನ್ 15ರವರೆಗೆ ರಜೆ ನೀಡುವಂತಿಲ್ಲ ಎಂದು ತಿಳಿಸಲಾಗಿದೆ. ರಜೆ ಮೇಲೆ ಹೋಗಿರುವ ಅಧಿಕಾರಿಯನ್ನು ವಾಪಸ್ ಕರೆಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ವಿದ್ಯುತ್ ಸಂಪರ್ಕವಿಲ್ಲ : ರಾಜ್ಯದ 3487 ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕವಿಲ್ಲದ ಕಾರಣ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಕೆಲವು ಭಾಗಗಳಲ್ಲಿ ಸಮಸ್ಯೆ ಉಂಟಾಗುತ್ತಿದೆ. ಕೊಳವೆ ಬಾವಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸುವಂತೆ ಕೋರಿ ಇಂಧನ ಇಲಾಖೆಗೆ ಪತ್ರ ಬರೆದಿದ್ದು, 15 ದಿನದೊಳಗಾಗಿ ಎಲ್ಲ ಕೊಳವೆಬಾವಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು.












Click it and Unblock the Notifications