KN Rajanna Resigns: ಸಚಿವ ಕೆಎನ್ ರಾಜಣ್ಣ ರಾಜೀನಾಮೆ
ಬೆಂಗಳೂರು, ಆಗಸ್ಟ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಮತ್ತೊಂದು ವಿಕೆಟ್ ಪತನವಾಗಿದೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ಹೇಳಿಕೆಯೊಂದು ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಸಹಕಾರ ಸಚಿಕ ಕೆಎನ್ ರಾಜಣ್ಣ ಅವರ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ರಾಜೀನಾಮೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ ಸಚಿವ ಕೆಎನ್ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಸಂಪುಟದ ಸಚಿವರಾದ ಕೆ ಎನ್ ರಾಜಣ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದ್ದು, ಯಾವ ವಿಚಾರಕ್ಕೆ ಹೈಕಮಾಂಡ್ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದರು. ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.
ಇನ್ನೂ ಕಾಂಗ್ರೆಸ್ ಹಿರಿಯ ನಾಯಕ ಕೆ ಎನ್ ರಾಜಣ್ಣ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದಾರೆ. ರಾಜಣ್ಣ ಅವರು ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.
ಕೆ ಎನ್ ರಾಜಣ್ಣ ಹೇಳಿದ್ದೇನು?
ಮತಗಳ್ಳತನ ಎಂದು ನಾವು ಹೇಳುತಿದ್ದೇವೆ. ಇದು ನಡೆದಿರೋದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೆ ಈಗ ಹೇಳುತ್ತಿರುವುದು ನಮಗೆ ನಾಚಿಕೆ ಆಗಬೇಕು. ನಮ್ಮದೇ ಸರ್ಕಾರ ಇದ್ದಾಗ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ ಎಂದು ಕೆ ಎನ್ ರಾಜಣ್ಣ ಅವರು ತಮ್ಮದೇ ಸರ್ಕಾರದ ವಿರುದ್ದ ಅಸಮಾಧಾನ ಹೊರಹಾಕಿದ್ದರು. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದರು.












Click it and Unblock the Notifications