ಕೊರೊನಾ ಚಿಂತಾಜನಕ ಸ್ಥಿತಿಯಲ್ಲಿ ರಾಜ್ಯ: ಸರಕಾರಕ್ಕೆ ಎಚ್ಡಿಕೆ 7 ಪ್ರಶ್ನೆಗಳು
ಬೆಂಗಳೂರು, ಏಪ್ರಿಲ್ 21: ರಾಜ್ಯಪಾಲರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಲಾಕ್ ಡೌನ್ ಒಂದೇ ಪರಿಹಾರ ಎಂದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರಕ್ಕೆ ಏಳು ಪ್ರಶ್ನೆಗಳನ್ನು ಟ್ವಿಟ್ಟರ್ ಮೂಲಕ ಕೇಳಿದ್ದಾರೆ.
ಆರ್ಥಿಕ ಚಟುವಟಿಕೆಗಳಿಗೆ ಸ್ವಲ್ಪದಿನ ತೊಂದರೆಯಾದರೂ ಪರವಾಗಿಲ್ಲ, ಲಾಕ್ ಡೌನ್ ಮಾಡುವುದೇ ಸರಿ ಎಂದು ಸಭೆಯಲ್ಲಿ ಕುಮಾರಸ್ವಾಮಿ ಹೇಳಿದ್ದರು. ಸದ್ಯ, ಖಾಸಗಿ ಆಸ್ಪತ್ರೆಯಲ್ಲಿರುವ ಕುಮಾರಸ್ವಾಮಿ ಸರಕಾರಕ್ಕೆ ಕೊರೊನಾ ನಿರ್ವಹಣೆ ಸಂಬಂಧ ಏಳು ಪ್ರಶ್ನೆಗಳನ್ನು ಕೇಳಿದ್ದಾರೆ. ಅದು ಹೀಗಿದೆ:
ಪ್ರಶ್ನೆ - 1: ಕೋವಿಡ್ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್ ಸಭೆಗಳನ್ನು ಮಾಡಿದೆ, ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ?
ಪ್ರಶ್ನೆ - 2: ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ?
|
ಕುಮಾರಸ್ವಾಮಿಯ ಏಳು ಪ್ರಶ್ನೆಗಳು - ಪ್ರಶ್ನೆ - 3
ಕೋವಿಡ್ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈ ವರೆಗೆ ಏನು ಮಾಡಿಕೊಂಡಿತ್ತು? ಕೋವಿಡ್ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದ ವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನಾಗಿದ್ದವು?

ಕುಮಾರಸ್ವಾಮಿಯ ಏಳು ಪ್ರಶ್ನೆಗಳು - ಪ್ರಶ್ನೆ - 4
ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನು ಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ?

ಕುಮಾರಸ್ವಾಮಿಯ ಏಳು ಪ್ರಶ್ನೆಗಳು - ಪ್ರಶ್ನೆ - 5
ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್ಡಿಸಿವಿರ್ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ?

ಕುಮಾರಸ್ವಾಮಿಯ ಏಳು ಪ್ರಶ್ನೆಗಳು - ಪ್ರಶ್ನೆ - 6
ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರ ಹೇಳಬೇಕಲ್ಲವೇ?
Recommended Video

ಕುಮಾರಸ್ವಾಮಿಯ ಏಳು ಪ್ರಶ್ನೆಗಳು - ಪ್ರಶ್ನೆ - 7
ಜನರನ್ನು ಯಾವುದೇ ಹಂತದಲ್ಲಿ ಸರ್ಕಾರ ರಕ್ಷಣೆ ಮಾಡುತ್ತದೆ. ಅವರ ಜೀವಕ್ಕೆ ಆಧಾರವಾಗಿರುತ್ತದೆ,' ಎಂಬ ವಿಶ್ವಾಸವನ್ನು ತುಂಬುವುದು ಅಗತ್ಯ. ಅದು ಬಿಟ್ಟು ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡರೂ ಅದು ನಗಣ್ಯ. ಈ ವಿಷಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಕೊರತೆ ನೀಗಿಸುವ ಕ್ರಮಗಳ ಬಗ್ಗೆ ಸರ್ಕಾರ ಮಾತಾಡುವುದು ಯಾವಾಗ?












Click it and Unblock the Notifications