ಕೊರೊನಾ ಬಗ್ಗೆ ಯಡಿಯೂರಪ್ಪ ತುರ್ತು ಸಭೆ; 18 ಅಂಶಗಳು
ಬೆಂಗಳೂರು, ಮಾರ್ಚ್ 13: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಸಿದರು. ಕರ್ನಾಟಕದಲ್ಲಿ ಕೊರೊನಾ ಸೋಂಕು ತಗುಲಿದ ವ್ಯಕ್ತಿ ಮೃತಪಟ್ಟಿದ್ದು, ದೇಶದಲ್ಲಿಯೇ ಇದು ಕೊರೊನಾಗೆ ಮೊದಲ ಬಲಿಯಾಗಿದೆ.
ಶುಕ್ರವಾರ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ, ಆರೋಗ್ಯ ಸಚಿವ ಬಿ. ಶ್ರೀರಾಮುಲು, ಶಿಕ್ಷಣ ಸಚಿವ ಸುರೇಶ್ ಕುಮಾರ್, ಡಾ. ದೇವಿಶೆಟ್ಟಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ, "ಒಂದು ವಾರಗಳ ಕಾಲ ಮಾಲ್, ಚಿತ್ರಮಂದಿರ, ಪಬ್, ಸರ್ಕಾರಿ ಕಾರ್ಯಕ್ರಮ, ಸಮಾವೇಶ, ಜಾತ್ರೆಯನ್ನು ರಾಜ್ಯಾದ್ಯಂತ ಬಂದ್ ಮಾಡಲಾಗಿದೆ. ಜನರು ಸರ್ಕಾರದ ಜೊತೆ ಸಹಕಾರ ನೀಡಬೇಕು" ಎಂದು ಕರೆ ನೀಡಿದರು.
"ಖಾಸಗಿ ಆಸ್ಪತ್ರೆಗಳು ಎಲ್ಲಾ ರೀತಿಯ ಸಹಕಾರ ನೀಡಬೇಕು. ಖಾಸಗಿ ಆಸ್ಪತ್ರೆಗಳ ಜೊತೆ ಸಮನ್ವಯ ಸಾಧಿಸಲು ಒಂದು ಸಮಿತಿ ರಚಿಸಲಾಗುತ್ತದೆ. ಸೋಂಕು ಪರೀಕ್ಷೆಗೆ ಹೆಚ್ಚುವರಿ ಪ್ರಾಯೋಗಾಲಯವನ್ನು ಸ್ಥಾಪಿಸಲಾಗುತ್ತದೆ" ಎಂದು ಯಡಿಯೂರಪ್ಪ ಹೇಳಿದರು.