ಕೊರೊನಾ ವೈರಸ್ ಕಿತ್ತಾಟ; ಸರ್ಕಾರಕ್ಕೆ ಕುಮಾರಸ್ವಾಮಿ ಟ್ವೀಟ್ ಪಾಠ
ಬೆಂಗಳೂರು, ಮಾರ್ಚ್.15: ಕೊರೊನಾ ವೈರಸ್ ಭೀತಿಯಲ್ಲಿ ಕರುನಾಡು ಸ್ತಬ್ಧಗೊಂಡಿದೆ. ಕಲುಬುರಗಿಯಲ್ಲಿ ಮಾರಕ ಸೋಂಕಿಗೆ ದೇಶದಲ್ಲಿ ಮೊದಲ ವ್ಯಕ್ತಿ ಬಲಿಯಾಗಿದ್ದು, ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟುಹಾಕಿದೆ. ಇದನ್ನೆಲ್ಲ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯಪ್ರವೃತ್ತವಾಗಿದೆ.
ರಾಜ್ಯದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಶಾಲಾ-ಕಾಲೇಜು, ಸಿನಿಮಾ ಥಿಯೇಟರ್, ಪಬ್-ಕ್ಲಬ್, ಮಾಲ್ ಗಳೆಲ್ಲ ಬಂದ್ ಆಗಿವೆ. ಜನರು ಹೊರಗೆ ಕಾಲಿಡುವುದಕ್ಕೂ ಭಯಪಡುವಂತಾ ವಾತಾವರಣ ನಿರ್ಮಾಣವಾಗಿ ಬಿಟ್ಟಿದೆ.
ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯಬಹುದು
ಕರ್ನಾಟಕದ ಪ್ರತಿಯೊಂದು ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ತಪಾಸಣೆಗಾಗಿ ಪ್ರತ್ಯೇಕವಾದ ಐಸೋಲೇಟೆಡ್ ವಾರ್ಡ್ ಗಳನ್ನು ತೆರೆಯಲಾಗುವುದು ಎಂದು ಸರ್ಕಾರ ಘೋಷಿಸಿದೆ. ಇದರ ಮಧ್ಯೆ ರಾಜ್ಯ ಸರ್ಕಾರ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಇತರೆ ರೋಗಿಗಳ ಜೊತೆಗೆ ಸೋಂಕಿತರಿಗೆ ಚಿಕಿತ್ಸೆ ಒಳಿತಲ್ಲ
"ಕೊರೊನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು" ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸರ್ಕಾರದ ಖಾಲಿ ಕಟ್ಟಡಗಳನ್ನೇಕೆ ಬಳಸಬಾರದು ಎಂದ ಹೆಚ್ ಡಿಕೆ
"ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು" ಎಂದು ಸಲಹೆ ನೀಡಿದ್ದಾರೆ.
ಸಚಿವರಲ್ಲಿ ಒಮ್ಮತ ಕಾರ್ಯಧೋರಣೆ ಇರಲಿ ಎಂದು ಟ್ವೀಟ್
ಕೊರೊನಾ ವೈರಸ್ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ.
ಸರ್ಕಾರದ ಪಾಲಿಗೆ ಸುರಕ್ಷತಾ ಕ್ರಮ ಪ್ರಚಾರದ ಸರಕಾಗದಿರಲಿ
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜನರಲ್ಲಿ ಅರಿವು ಮೂಡಿಸಬೇಕಿದೆ. "ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.