ಲಾಕ್ ಆಗುತ್ತಾ ಕರ್ನಾಟಕ; ಸರ್ವಪಕ್ಷ ಸಭೆಯಲ್ಲಿ ಶಾಸಕರು ಹೇಳಿದ್ದೇನು?
ಬೆಂಗಳೂರು, ಜೂನ್.26: ಕೊರೊನಾವೈರಸ್ ಅಟ್ಟಹಾಸದ ನಡುವೆಯೂ ಕರ್ನಾಟಕವನ್ನು ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
Recommended Video
ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನೊಳಗೊಂಡ ಸರ್ವಪಕ್ಷ ಸಭೆ ನಡೆಸಲಾಯಿತು. ಈ ಸಭೆ ನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುನಃ ಲಾಕ್ ಡೌನ್ ಘೋಷಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ಲಾಕ್ ಡೌನ್: ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಹಲವು ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗಿದೆ. ಅಗತ್ಯ ಬಿದ್ದಲ್ಲಿ ಮತ್ತಷ್ಟು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ. ಸೀಲ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಾಗೃತಿ ವಹಿಸಲಾಗುತ್ತದೆ ಎಂದು ಸಿಎಂ ಹೇಳಿದರು. ಇನ್ನು, ಸರ್ವಪಕ್ಷ ಸಭೆಯ ಬಳಿಕ ಸಚಿವರು ಮತ್ತು ಶಾಸಕರ ಅಭಿಪ್ರಾಯ ಹೇಗಿತ್ತು. ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಕುರಿತು ವಿಸ್ತೃತ ವರದಿ ಇಲ್ಲಿದೆ.
ಕರ್ನಾಟಕವು ಉತ್ತಮ ಸ್ಥಿತಿಯಲ್ಲಿದೆ ಎಂದ ಸಿಎಂ
ಅನ್ಯ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಮತ್ತು ಸಾವಿನ ಸಂಖ್ಯೆ ನಿಯಂತ್ರಣದಲ್ಲಿದೆ. ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸದೇ ಅಗತ್ಯ ಪ್ರದೇಶಗಳಲ್ಲಿ ಮಾತ್ರ ಸೀಲ್ ಡೌನ್ ಮಾಡಲಾಗಿತ್ತದೆ. ಆ ಮೂಲಕ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಇನ್ನು, ಕೊರೊನಾವೈರಸ್ ನಿಯಂತ್ರಣದ ಜೊತೆಗೆ ಆರ್ಥಿಕ ಅಭಿವೃದ್ಧಿ ಅಗತ್ಯವಾಗಿದೆ ಎಂಬ ಅಭಿಮತವನ್ನು ಸರ್ಕಾರವು ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಪ್ರತಿನಿತ್ಯ ನಾಲ್ಕು ಸಾವಿರ ಜನರಿಗೆ ತಪಾಸಣೆ
ಕೊರೊನಾವೈರಸ್ ಸೋಂಕು ಹರಡುವಿಕೆಯಲ್ಲಿ ಸಿಲಿಕಾನ್ ಸಿಟಿ ಅಗ್ರಸ್ಥಾನದಲ್ಲಿದೆ. ಪ್ರತಿನಿತ್ಯ ನೂರಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ರಾಜ್ಯ ರಾಜಧಾನಿಯಲ್ಲಿ ಪತ್ತೆಯಾಗುತ್ತಿವೆ. ಈವರೆಗೂ ಬೆಂಗಳೂರಿನಲ್ಲಿ ಪ್ರತಿನಿತ್ಯ ನಾಲ್ಕು ಸಾವಿರ ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಪ್ರತಿನಿತ್ಯ ಏಳೂವರೆ ಸಾವಿರ ಜನರಿಗೆ ಕೊರೊನಾವರೈಸ್ ಸೋಂಕು ತಪಾಸಣೆ ನಡೆಸಲಾಗುತ್ತದೆ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯವೇನು?
ಕರ್ನಾಟಕದಲ್ಲಿ ಲಾಕ್ ಡೌನ್ ಮಾಡದಿದ್ದರೆ ಕಠಿಣ ಸೀಲ್ ಡೌನ್ ಮಾಡಿ ಎಂದು ಕೆಲವರು ಸಲಹೆ ನೀಡಿದ್ದಾರೆ. ಮೆಡಿಕಲ್ ಕಾಲೇಜು ಬೆಡ್ ಗಳನ್ನು ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಮೀಸಲು ಇರಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಣಾಮಕಾರಿಯಾಗಿ ಲಾಕ್ ಡೌನ್ ಅನುಷ್ಟಾನಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದೇನು?
ಸರ್ವಪಕ್ಷಗಳ ಶಾಸಕರ ಸಭೆಯಲ್ಲಿ ಅನೇಕ ಸಲಹೆಗಳನ್ನು ಪಡೆಯಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. 'A' Symptom ಇರುವ ಪ್ರಕರಣಗಳನ್ನು ನೊವೆಲ್ ಕೊರೊನಾವೈರಸ್ ಎಂದು ಪರಿಗಣಿಸಲಾಗಿದ್ದು, ಅಂಥವರನ್ನು ಕೊವಿಡ್-19 ಕೇರ್ ಗೆ ಸ್ಥಳಾಂತರಿಸಲಾಗುತ್ತದೆ. ಎಂಥದ್ದೇ ಪರಿಸ್ಥಿತಿಯಲ್ಲೂ ಕೂಡ ಲಾಕ್ ಡೌನ್ ಮಾಡುವುದಿಲ್ಲ ಸಿಎಂ ತೀರ್ಮಾನ ಮಾಡಿದ್ದಾರೆ. ಬೇರೆ ಬೇರೆ ರಾಜ್ಯದಿಂದ ಬಂದವರಲ್ಲಿ 'A' Symptoms ಕಂಡು ಬಂದಿದ್ದು, ಅವರನ್ನೆಲ್ಲಾ ಕಡ್ಡಾಯವಾಗಿ ಕ್ವಾರಂಟೈನ್ ಮಾಡಬೇಕಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಇನ್ನು, ಕೊರೊನಾ ರೋಗಿಗಳಿಗೆ ಸರಿಯಾದ ಊಟದ ವ್ಯವಸ್ಥೆ ಇರಲಿಲ್ಲ ಎಂಬ ಆರೋಪವನ್ನು ಕಾಂಗ್ರೆಸ್ ಶಾಸಕರು ಮಾಡಿದ್ದರು. ಈ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಉತ್ತಮ ಆಹಾರವನ್ನು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಶೇ.50ರಷ್ಟು ಖಾಸಗಿ ಆಸ್ಪತ್ರೆಗಳ ಬೆಡ್ ಬಳಕೆಗೆ ಆದೇಶ
ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಣ ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವಿರೋಧ ಪಕ್ಷದ ಶಾಸಕರು ಅಮೂಲ್ಯವಾದ ಸಲಹೆಗಳನ್ನು ನೀಡಿದ್ದಾರೆ. ಅದನ್ನು ಜಾರಿಗೊಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಬೆಡ್ ಗಳ ಕೊರತೆ ಎದುರಾಗಿದೆ ಎಂಬ ಆರೋಪವಿತ್ತು. ಈ ಹಿನ್ನೆಲೆ ಗುರುವಾರವೇ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿರುವ ಶೇ.50ರಷ್ಟು ಬೆಡ್ ಗಳನ್ನು ಬಳಸಿಕೊಳ್ಳುವುದಕ್ಕೆ ಆದೇಶಿಸಲಾಗಿದೆ. ಅಗತ್ಯ ಬಿದ್ದಲ್ಲಿ ಎಕ್ಸಿಬಿಷನ್ ಸೆಂಟರ್, ಹೋಟೆಲ್ ಮತ್ತು ಕಲ್ಯಾಣ ಮಂಟಪಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಆಯುರ್ವೇದ ಬಳಕೆ
ನೊವೆಲ್ ಕೊರೊನಾವೈರಸ್ ನಿಯಂತ್ರಿಸಲು ಆಯುರ್ವೇದದಲ್ಲಿ ಪರಿಹಾರವಿದೆ ಎಂಬ ಸಲಹೆಗಳು ಕೇಳಿ ಬಂದಿದೆ. ಮನುಷ್ಯನಲ್ಲಿರುವ ರೋಗ ನಿರೋಧಕ ಶಕ್ತಿ ವೃದ್ಧಿಸುವಲ್ಲಿ ಆಯುರ್ವೇದ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಹಿನ್ನೆಲೆ ಆಯುರ್ವೇದವನ್ನು ಬಳಸಿಕೊಂಡು ರೋಗ ನಿರೋಧಕ ಶಕ್ತಿ ವೃದ್ಧಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
ಶಾಸಕರಿಗೆ ಕ್ಷೇತ್ರವಾರು ಜವಾಬ್ದಾರಿ ನೀಡಿದ ಸರ್ಕಾರ
ಕೊರೊನಾವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಾಸಕರು ಜವಾಬ್ದಾರಿ ವಹಿಸಿಕೊಳ್ಳಬೇಕು. ಗಂಭೀರ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತರಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಎಲ್ಲ ಶಾಸಕರಿಗೂ ಸೂಚನೆ ನೀಡಲಾಗಿದೆ.
ರಾಜಕಾರಣವನ್ನು ಬದಿಗೊತ್ತಿ ಕೆಲಸ ಮಾಡಿಬೇಕಿದೆ
ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಕಾರಣವನ್ನು ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಕೊರೊನಾವೈರಸ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆಯಿಲ್ಲ, ಸರ್ಕಾರವು ಈ ಬಗ್ಗೆ ಗಮನಹರಿಸಬೇಕೆಂದು ನಾನೇ ಮನವಿ ಮಾಡಿದ್ದೆ ಎಂದು ಶಾಸಕ ಬೈರತಿ ಸುರೇಶ್ ತಿಳಿಸಿದ್ದಾರೆ. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚಿಸಬೇಕಿದೆ. ಪಕ್ಷಾತೀತವಾಗಿ ನಾವು ಜೊತೆಗಿದ್ದೇವೆ. ರಾಜಕಾರಣ ಬಿಟ್ಟು ಜೊತೆಗಿರುತ್ತೇವೆ ಎಂದು ಶಾಸಕ ಬೈರತಿ ಸುರೇಶ್ ತಿಳಿಸಿದರು.