ಕೃಷಿ ವಿವಿಗಳಲ್ಲಿನ ವಿದೇಶಿ ವಿದ್ಯಾರ್ಥಿಗಳಿಗೆ ಸುರಕ್ಷಿತ ವ್ಯವಸ್ಥೆ: ಬಿ.ಸಿ. ಪಾಟೀಲ್
ಬೆಂಗಳೂರು, ಮಾ. 23: ಕೊರೊನಾ ವೈರಸ್ ತಡೆಗಟ್ಟುವ ಮುಂಜಾಗ್ರತೆ ಕ್ರಮವಾಗಿ ರಾಜ್ಯದಲ್ಲಿನ ಎಲ್ಲ 4 ಕೃಷಿ ವಿಶ್ವಿವಿದ್ಯಾಲಯಗಳನ್ನು ಮುಚ್ಚಲು ಆದೇಶ ಮಾಡಿರುವ ಸರ್ಕಾರವೀಗ ಸಿಬ್ಬಂದಿಗೆ ವೇತನ ಸಹಿತ ರಜೆ ಘೋಷಣೆ ಮಾಡಿದೆ. ಇದೇ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಕೃಷಿಸಚಿವ ಬಿ.ಸಿ. ಪಾಟೀಲ್ ಅವರು, ಕೇಂದ್ರ ಸರ್ಕಾರ ಮಾರ್ಗಸೂಚಿ ಅನ್ವಯ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ.
ನಾಲ್ಕೂ ಕೃಷಿ ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗೆ ಮಾ. 23 ರಿಂದ ಮಾ. 31 ರವರೆಗೆ ರಜೆ ಕೊಡಲಾಗಿದೆ ಎಂದು ಹೇಳಿದ್ದಾರೆ.
ಈಗಾಗಲೇ ಮಾ. 14 ರಿಂದ 31ರವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ರಜಾ ಸಮಯದಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಶೋಧನೆಗೆ ಸಂಬಂಧಿಸಿದ ಸಂಶೋಧನ ಅಧ್ಯಯನ ಪಠ್ಯಕ್ರಮವನ್ನು ಆನ್ಲೈನ್ ಮೂಲಕ ಅಭಿವೃದ್ಧಿ ಪಡಿಸುವಂತೆ, ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪ್ರಶ್ನೆ ಬ್ಯಾಂಕ್ ತಯಾರಿಸಲು, ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಸುರಕ್ಷಿತ ವಸತಿ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.