ಕೊರೊನಾಭೀತಿ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಮಾರ್ಚ್ 22: ಕರ್ನಾಟಕದಲ್ಲಿ ಕೊರೊನಾವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪ್ರಮುಖ ನಿರ್ಧಾರವನ್ನು ಜನತಾ ಕರ್ಫ್ಯೂ ದಿನದಂದು ತೆಗೆದುಕೊಂಡಿದೆ. ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲಾ ಪ್ರಮುಖ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸಿಎಂ ಯಡಿಯೂರಪ್ಪ ಅವರು ಡಾಲರ್ಸ್ ಕಾಲೋನಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆ ಮತ್ತು ಇತರ ಎಲ್ಲಾ ಪರೀಕ್ಷೆ ಮುಂದೂಡಲು ನಿರ್ಧರಿಸಲಾಗಿದೆ ಎಂದರು.
ಮಾರ್ಚ್ 27ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ವಿದ್ಯಾರ್ಥಿಗಳಾ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನು ಸಾರ್ವಜನಿಕ ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಸಿಬಿಎಸ್ ಸಿ, ಐಸಿಎಸ್ ಸಿ ಪರೀಕ್ಷೆಗಳು ಮುಂದೂಡಲಾಗಿದೆ. ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಪೋಷಕರು ಮನವಿ ಮಾಡಿಕೊಂಡಿದ್ದರು.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಶಿಕ್ಷಣ ಸಚಿವರು ಮಾತುಕತೆ ನಡೆಸಿದ್ದರು. ಇದಕ್ಕೂ ಮುನ್ನ ಇಂದು ಬೆಳಗ್ಗೆ 6 ಗಂಟೆಗೆ ತಮ್ಮ ನಿವಾಸದಲ್ಲಿ ಕೊರೊನಾ ತಡೆ ಟಾಸ್ಕ್ ಫೋರ್ಸ್ ಸದಸ್ಯರ ಜೊತೆ ಮಹತ್ವ ಚರ್ಚೆ ನಡೆಸಿ, ಇನ್ನೂ ಒಂದು ವಾರ ಕೈಗೊಳ್ಳುವ ಮುಂಜಾಗ್ರತಾ ಕ್ರಮದ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.
ಚರ್ಚೆಯಲ್ಲಿ ಟಾಸ್ಕ್ ಫೋರ್ಸ್ ಸದಸ್ಯ ಸಚಿವರಾದ ಡಾ. ಸುಧಾಕರ್, ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವಥ್ ನಾರಾಯಣ್ ಭಾಗಿಯಾಗಿದ್ದರು.
ಜನತಾ ಕರ್ಫ್ಯೂ ಸಂದರ್ಭದಲ್ಲಿ ರಾಜ್ಯದ ನಿವಾಸಿಗಳು ಮನೆಯಲ್ಲೇ ಉಳಿದು ಕರ್ಫ್ಯೂ ಆಚರಣೆಗೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ಕೋರಿದರು. ಮಾರ್ಚ್ 22ರಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆ ತನಕ ಜನತಾ ಕರ್ಫ್ಯೂ ಆಚರಣೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.












Click it and Unblock the Notifications