ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ತನಿಖೆ ಭೀತಿ
ಬೆಂಗಳೂರು, ಮೇ 12 : ಗಣಿ ಅಕ್ರಮ ಸೇರಿದಂತೆ ವಿವಿಧ ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಲೋಕಾಯುಕ್ತ ತನಿಖೆ ವೇಗ ಪಡೆದುಕೊಳ್ಳುತ್ತಿದೆ. ತನಿಖೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನೀಡಿವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಸೂಚನೆ ರವಾನಿಸಲಾಗಿದೆ.
ಕೆಲವು ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಹಕಾರ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಐಎಎಸ್, ಐಎಫ್ಎಸ್, ಐಪಿಎಸ್ ದರ್ಜೆಯ ಹಿರಿಯ ಅಧಿಕಾರಿಗಳನ್ನೂ ಲೋಕಾಯುಕ್ತ ವಿಚಾರಣೆಯ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡಲಾಗಿತ್ತು.

ಸದ್ಯ ಈ ತನಿಖೆಯನ್ನು ತ್ವರಿತಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಲೋಕಾಯುಕ್ತ ತನಿಖೆಗೆ ಸಹಕಾರ ನೀಡುವಂತೆ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ಕಚೇರಿಯಿಂದ ಸೂಚನೆ ರವಾನಿಸಲಾಗಿದೆ. ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಾಗಿದೆ. [ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಸಿಎಂ]
ತಮ್ಮ ಆದೇಶದಲ್ಲಿ ಕೌಶಿಕ್ ಮುಖರ್ಜಿ ಅವರು, ಎಲ್ಲಾ ಇಲಾಖೆ ಕಾರ್ಯದರ್ಶಿಗಳಿಗೆ ಸರ್ಕಾರದ ಆದೇಶವಿರುವುದರಿಂದ ಯಾವುವೇ ಕಾರಣಕ್ಕೂ ಲೋಕಾಯುಕ್ತ ತನಿಖೆಗೆ ಅಡ್ಡಿ ಉಂಟಾಗಬಾರದು. ಅಧಿಕಾರಿಗಳು, ನೌಕರರು, ಇನ್ನಿತರ ಸಿಬ್ಬಂದಿಗಳ ಕುರಿತ ದಾಖಲೆಗಳನ್ನು ಲೋಕಾಯುಕ್ತರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. [22 ಅಧಿಕಾರಿಗಳ ವಿರುದ್ಧ ತನಿಖೆ]
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಲ್ಲಿಸಿದ್ದ ಅಕ್ರಮ ಗಣಿಗಾರಿಕೆ ಕುರಿತ ವರದಿಯಲ್ಲಿ 677 ಅಧಿಕಾರಿಗಳು, ನೌಕರರು ಭಾಗಿಯಾಗಿದ್ದಾರೆ ಎಂದು ಹೇಳಲಾಗಿತ್ತು. ನಂತರ ಸುಮಾರು 350 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿತ್ತು.
ಸಿಎಂ ಅನುಮತಿ ನೀಡಿದ್ದರು : ಭ್ರಷ್ಟಾಚಾರ ಮತ್ತು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂಬ ಮಾತು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಜೂನ್ ನಲ್ಲಿ 74 ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧದ ಲೋಕಾಯುಕ್ತ ತನಿಖೆಗೆ ಹಸಿರು ನಿಶಾನೆ ತೋರಿಸಿದ್ದರು. ನಂತರ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿಯೂ ನಿರ್ಧಾರ ಕೈಗೊಳ್ಳಲಾಗಿತ್ತು.












Click it and Unblock the Notifications