Breaking: ಯಡಿಯೂರಪ್ಪ, ಎಸ್ ಟಿ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಭ್ರಷ್ಟಾಚಾರದ ಕೇಸ್
ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮತ್ತೊಮ್ಮೆ ಭ್ರಷ್ಟಾಚಾರದ ಪ್ರಕರಣ ಕೊರಳು ಸುತ್ತಿಕೊಳ್ಳುವ ಸೂಚನೆ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ಎಂದು ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚನೆ ನೀಡಿದೆ. ಇದೇ ವೇಳೆ ಸಚಿವ ಎಸ್ ಟಿ ಸೋಮಶೇಖರ್ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
ರಾಮಲಿಂಗಂ ಕನಸ್ಟ್ರಕ್ಷನ್ ಕಂಪನಿಯಿಂದ 12 ಕೋಟಿ:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ( ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಿ.ಎಸ್. ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ಸೇರಿದಂತೆ ಅವರ ಕುಟುಂಬಸ್ಥರು ರಾಮಲಿಂಗಂ ಕನಸ್ಟ್ರಕ್ಷನ್ ಕಂಪನಿಯಿಂದ 12 ಕೋಟಿ ರೂ. ನಗದು ಸ್ವೀಕರಿಸಿದ ಆರೋಪ ಸಂಬಂಧ ದಾಖಲಾಗಿದ್ದ ಖಾಸಗಿ ದೂರನ್ನು ಮರು ವಿಚಾರಣೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.
ಇದರಿಂದ ಬಿಎಸ್ ವೈ ಮಾತ್ರವಲ್ಲ ಅವರ ಪುತ್ರ ವಿಜಯೇಂದ್ರ, ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ ಬಿಎಸ್ ವೈ ಅಳಿಯ, ಮೊಮ್ಮಗ ಸೇರಿ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ, ಪ್ರಕರಣವನ್ನು ವಿಶೇಷ ತನಿಖಾ ದಳದ (ಎಸ್ಐಟಿ) ತನಿಖೆಗೆ ಆದೇಶಿಸುವಂತೆ ಕೋರಿ ದಾಖಲಿಸಿದ್ದ ಖಾಸಗಿ ದೂರನ್ನು ರದ್ದುಪಡಿಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೂರುದಾರರಾದ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.












Click it and Unblock the Notifications