ವಿಧಾನ ಪರಿಷತ್ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಮೇಲುಗೈ?
ಬೆಂಗಳೂರು, ಡಿಸೆಂಬರ್ 14: ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ನಡೆದ ಚುನಾವಣೆಯ ಫಲಿತಾಂಶ ಇಂದು (ಮಂಗಳವಾರ) ಪ್ರಕಟವಾಗಲಿದೆ. 75 ಸದಸ್ಯರ ಮೇಲ್ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿ ಈ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ಗೆ ಈ ಚುನಾವಣಾ ಫಲಿತಾಂಶ ಮಹತ್ವದ್ದಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ವಿಧಾನ ಪರಿಷತ್ ರಚನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮೇಲ್ಮನೆಯಲ್ಲಿ 32 ಸ್ಥಾನಗಳನ್ನು ಹೊಂದಿರುವ ಆಡಳಿತಾರೂಢ ಬಿಜೆಪಿ, 12 ಸದಸ್ಯರನ್ನು ಹೊಂದಿರುವ ಜೆಡಿಎಸ್ ಬೆಂಬಲವನ್ನು ಅವಲಂಬಿಸದೆ, ಸ್ಪಷ್ಟ ಬಹುಮತವನ್ನು ಪಡೆಯಲು ಪ್ರಯತ್ನಿಸುತ್ತಿದೆ.
ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ ಕಳೆದ ತಿಂಗಳು ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿತ್ತು. ಆ ಸೋಲಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯಕ್ಕೆ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಮಹತ್ವದ್ದಾಗಿದೆ.

25 ಚುನಾಯಿತ ಸದಸ್ಯರ ಆರು ವರ್ಷಗಳ ಅವಧಿಯು ಜನವರಿ 5, 2022ರಂದು ಕೊನೆಗೊಳ್ಳುವ ಕಾರಣ ವಿಧಾನ ಪರಿಷತ್ನ ಚುನಾವಣೆಯನ್ನು ನಡೆಸಲಾಯಿತು. ಜನವರಿ 5ರಂದು ಅಧಿಕಾರಾವಧಿ ಮುಕ್ತಾಯ ಆಗುವ ಸದಸ್ಯರಲ್ಲಿ ಕಾಂಗ್ರೆಸ್ 15, ಬಿಜೆಪಿ 6 ಮತ್ತು ಜೆಡಿಎಸ್ನ 4 ಸದಸ್ಯರಿದ್ದಾರೆ. ಬಿಜೆಪಿಯು ಕಾಂಗ್ರೆಸ್ನಿಂದ ಒಂದಷ್ಟು ಸ್ಥಾನಗಳನ್ನು ಕಸಿದುಕೊಳ್ಳಲು ನೋಡುತ್ತಿದೆ. ಆದರೆ ಕಾಂಗ್ರೆಸ್- ಜೆಡಿಎಸ್ ಎರಡೂ ಪಕ್ಷಗಳು ಸದ್ಯ ಇರುವ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ.
ಬೆಂಗಳೂರಿನಲ್ಲಿ ಮತ ಎಣಿಕೆ ಕೇಂದ್ರವಾದ ಮಹಾರಾಣಿ ಕಾಲೇಜು ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ಬಾರ್, ಪಬ್ ಮುಚ್ಚಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಮತ ಎಣಿಕೆ ನಡೆಯುತ್ತಿದೆಯೋ ಅಲ್ಲಿ ಈಗಾಗಲೇ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಕ್ರಮಗಳನ್ನು ಕೈಗೊಂಡಿದೆ. ಮಧ್ಯಾಹ್ನದ ವೇಳೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.

ಪರಿಷತ್ ಚುನಾವಣೆಯ ಮತದಾರರು ಯಾರು?
ರಾಜ್ಯದ 20 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ 1 ಲಕ್ಷಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಶಾಸಕರು ಹಾಗೂ ಸಂಸದರು ಮತ ಚಲಾಯಿಸಿದ್ದಾರೆ. ಜನಪ್ರತಿನಿಧಿಗಳೇ ವೋಟ್ ಹಾಕಿದ್ದರಿಂದ ಶೇ.99ರಷ್ಟು ಪ್ರಮಾಣದಲ್ಲಿ ಮತದಾನ ನಡೆದಿದೆ.
ಎಷ್ಟು ಅಭ್ಯರ್ಥಿಗಳಿದ್ದಾರೆ
25 ಸ್ಥಾನಗಳಿಗೆ ನಡೆದಿರುವ ವಿಧಾನ ಪರಿಷತ್ ಚುನಾವಣಾ ಕಣದಲ್ಲಿ 90 ಅಭ್ಯರ್ಥಿಗಳು ಇದ್ದಾರೆ. ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡ ಕಣದಲ್ಲಿರುವ ಏಕೈಕ ಮಹಿಳಾ ಅಭ್ಯರ್ಥಿಯಾಗಿದ್ದಾರೆ.
ಈ ವಿಧಾನ ಪರಿಷತ್ ಚುನಾವಣೆ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮತ್ತೊಬ್ಬ ಸದಸ್ಯ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಮಾಜಿ ಸಚಿವ ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಇನ್ನು ಸದ್ಯ ಬಿಜೆಪಿಯಲ್ಲಿರುವ ಮಾಜಿ ಸಚಿವ ಎ. ಮಂಜು ಪುತ್ರ ಮಥರ್ ಗೌಡ ಕಾಂಗ್ರೆಸ್ನಿಂದ ಕೊಡಗು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಈ ಬಾರಿ ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂದರೆ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ (ಕೆಜಿಎಫ್ ಬಾಬು). ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಇವರು 1,744 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ನಾಮಪತ್ರ ವೇಳೆ ದಾಖಲೆ ಸಲ್ಲಿಸಿದ್ದಾರೆ.












Click it and Unblock the Notifications