ಜೈಲಿನಲ್ಲಿಯೇ ಎಂ.ಎಂ.ಕಲಬುರ್ಗಿ ಹಂತಕರ ವಿಚಾರಣೆ
ಬೆಂಗಳೂರು, ಆಗಸ್ಟ್ 24 : ಎಂ.ಎಂ.ಕಲಬುರ್ಗಿ ಹಂತಕರನ್ನು ಜೈಲಿನಲ್ಲಿಯೇ ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆಸಿರುವ ವಿಚಾರತ ತನಿಖೆಯಿಂದ ಬಹಿರಂಗವಾಗಿತ್ತು.
ಸಿಐಡಿ ಪೊಲೀಸರು ಹಂತಕರನ್ನು ವಿಚಾರಣೆ ನಡೆಸಲು ಒಪ್ಪಿಗೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆ.27 ರಿಂದ 31ರ ತನಕ ಆರೋಪಿಗಳ ವಿಚಾರಣೆಯನ್ನು ಜೈಲಿನಲ್ಲಿ ನಡೆಸಲು ಒಪ್ಪಿಗೆ ನೀಡಿದೆ.
ಎಂ.ಎಂ.ಕಲಬುರ್ಗಿ ಕೊಂದವರೇ ಗೌರಿ ಲಂಕೇಶ್ ಹತ್ಯೆ ಮಾಡಿದ್ದು!
ಆರೋಪಿಗಳಾದ ಅಮೋಲ್ ಕಾಳೆ, ಅಮಿತ್ ದೇಗ್ವೇಕರ್, ಗಣೇಶ್ ಮಿಸ್ಕಿನ್, ಅಮಿತ್ ಬದ್ದಿ, ವಿಜಯಪುರದ ಪರುಶರಾಮ್ ವಾಗ್ಮೋರೆ, ಮಹೋಹರ್ ಯಡವೆ, ಕೆ.ಟಿ.ನವೀನ್ ಕುಮಾರ್ ಮತ್ತು ಮೋಹನ್ ನಾಯಕ್ ವಿಚಾರಣೆಯನ್ನು ಸಿಐಡಿ ತಂಡ ನಡೆಸಲಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸ್ಐಟಿ ತಂಡ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುವಾಗ ಈ ಆರೋಪಿಗಳು ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಿದ್ದರು ಎಂಬ ಅಂಶ ಬೆಳಕಿಗೆ ಬಂದಿತ್ತು.
ಚಿಂತಕ ಕಲಬುರ್ಗಿ ಕೊಂದದ್ದು ಹುಬ್ಬಳ್ಳಿಯ ಗಣೇಶ ವಿಸ್ಕಿನ್?
ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರನ್ನು 2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ಮನೆಯಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 12 ಆರೋಪಿಗಳನ್ನು ಬಂಧಿಸಲಾಗಿದೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಮುಂದೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು. ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.