ಪ್ರತ್ಯೇಕ ರಾಜ್ಯದ ಹೇಳಿಕೆ, ಉಮೇಶ್ ಕತ್ತಿಗೆ ತಾತ್ಕಾಲಿಕ ನೆಮ್ಮದಿ
ಬೆಂಗಳೂರು, ಡಿಸೆಂಬರ್ 02 : ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯವಾಗಬೇಕು ಎಂದು ಬೇಡಿಕೆ ಇಟ್ಟಿದ್ದ ಬಿಜೆಪಿ ನಾಯಕ ಉಮೇಶ್ ಕತ್ತಿ ಅವರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಹುಕ್ಕೇರಿ ಶಾಸಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ.
ಜನಪ್ರತಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ಶಾಸಕ ಉಮೇಶ್ ಕತ್ತಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿದಾರರು ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದೆ.
ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಆರ್.ಪಿ.ಪ್ರಸಾದ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು, ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಅರ್ಜಿಯನ್ನು ವಜಾ ಮಾಡುವುದಾಗಿ ಹೇಳಿದರು.

'ಉಮೇಶ್ ಕತ್ತಿ ಅವರ ಹೇಳಿಕೆ ದೇಶದ ಅಖಂಡತೆಗೆ ಧಕ್ಕೆ ತರುವಂತಹದ್ದು.ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ' ಎಂದು ಆರ್.ಪಿ.ಪ್ರಸಾದ್ ಅವರು ತಮ್ಮ ಅರ್ಜಿಯಲ್ಲಿ ದೂರಿದ್ದರು.
2014 ಮತ್ತು 2016ರಲ್ಲಿ ಎರಡು ಬಾರಿ ಉಮೇಶ್ ಕತ್ತಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೇಳಿಕೆ ನೀಡಿದ್ದರು. ಸ್ವತಃ ಬಿಜೆಪಿ ನಾಯಕರು ಉಮೇಶ್ ಕತ್ತಿ ಅವರ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.












Click it and Unblock the Notifications