ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಮಾಕನೂರ್ಗೆ ಜಾಮೀನು
ಬೆಂಗಳೂರು, ಮೇ 12: ಕಾಂಗ್ರೆಸ್ ನಾಯಕರನ್ನು ಕೀಳಾಗಿ ಬಿಂಬಿಸಿ ಧರ್ಮ, ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ರೀತಿಯಲ್ಲಿ ಅನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಮಾಕನೂರ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹಾಗಾಗಿ ಅವರು ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಪ್ರಶಾಂತ್ ಮಾಕನೂರು ಸಲ್ಲಿಸಿದ್ದ ಅರ್ಜಿಯನ್ನು, ಪುರಸ್ಕರಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಕಾಂಗ್ರೆಸ್ ಪಕ್ಷದ ನಾಯಕರನ್ನು ಸಮಾಜಗಳ ನಡುವೆ ದ್ವೇಷ ಹರಡುವ ರೀತಿ ಬಿಂಬಿಸಿ ಅನಿಮೇಟೆಡ್ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ ಎಂದು ಆಕ್ಷೇಪಿಸಿ ಕಾಂಗ್ರೆಸ್ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಇದೇ ಮೇ 5 ರಂದು ಬಿಜೆಪಿ ರಾಷ್ಟ್ರೀಯ ಮುಖಂಡರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರನ್ವಯ ಐಪಿಸಿ-1860ರ ಕಲಂ 505 (2) ಮತ್ತು ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 125ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
'ಎರಡು ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಅನುದಾನ ನೀಡಿಲ್ಲ. ಆದರೆ, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಮರಿಗೆ 10 ಸಾವಿರ ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಂಬಿಸಿ ಬಿಜೆಪಿ ಅನಿಮೇಟೆಡ್ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ' ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ರಾಷ್ಟ್ರೀಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಪ್ರಶಾಂತ್ ಮಾಕನೂರು ರಾಜ್ಯ ಘಟಕದ ಐಟಿ ಸೆಲ್ ಸೆಲ್ ಸಂಚಾಲಕನಾದ ಕಾರಣ ಬಂಧನ ಭೀತಿಯಲ್ಲಿ ಈ ನಿರೀಕ್ಷಣಾ ಜಾಮೀನು ಕೋರಿದ್ದರು. ಈಗ ಜಾಮೀನು ನೀಡಿ ಕೋರ್ಟ್ ಆದೇಶ ಹೊರಡಿಸಿದೆ.












Click it and Unblock the Notifications