ಕೋವಿಡ್-19 : ಏಳು ಜಿಲ್ಲಾಡಳಿತಗಳೊಂದಿಗೆ ಸಿಎಂ ವಿಡಿಯೋ ಸಂವಾದ
ಬೆಂಗಳೂರು, ಜೂನ್ 02: ''ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ತಾಲ್ಲೂಕುಗಳನ್ನು ವಿಭಾಗಿಸಿಕೊಂಡು, ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದರು.
ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಇಂದು ಕಲಬುರ್ಗಿ, ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ವಿಡಿಯೋ ಸಂವಾದದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

ಮಹಾರಾಷ್ಟ್ರದಿಂದ ಕೋವಿಡ್-19 ಪ್ರಕರಣ ಜಾಸ್ತಿ
ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ವಲಸಿಗರಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದರು.

ಕಿಟ್ ಗಳ ಪೂರೈಕೆ ಬಗ್ಗೆ ಸಿಎಂ ಮಾತು
ಕೋವಿಡ್-19 ಪರೀಕ್ಷಾ ಕಿಟ್ ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಗೃಹ ಬಂಧನದಲ್ಲಿದ್ದವರ (ಹೋಮ್ ಕ್ವಾರಂಟೈನ್) ಮೇಲೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು. ಪೋಲೀಸ್ ಇಲಾಖೆ ವತಿಯಿಂದ ಗೃಹ ಬಂಧನದಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಬೇಕಲ್ಲದೆ, ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ನಿಗಾ ವಹಿಸಬೇಕು. ಗ್ರಾಮ ಪಂಚಾಯತಿಗಳ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ ನೀಡಲಾಗಿದ್ದು, ಬೂತ್ ಮಟ್ಟದ ತಂಡಗಳು ಪ್ರತಿ ದಿನ ವರದಿ ಸಲ್ಲಿಸುವಂತೆ ಸಿಎಂ ತಿಳಿಸಿದರು.

ಕಾವಲು ಸಮಿತಿ ರಚಿಸಿ
ಪ್ರತಿ ಗ್ರಾಮ ಹಾಗೂ ನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಬೇಕಲ್ಲದೆ, ಈ ಸಮಿತಿಗಳು ಕ್ರಿಯಾಶೀಲವಾಗಿದ್ದು, ಹೋಮ್ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್ ದಾಖಲಿಸಬೇಕು ಎಂದು ನಿರ್ದೇಶಿಸಿದರು.

ಗಡಿ ಪ್ರದೇಶದಲ್ಲಿ ಎಚ್ಚರವಿರಲಿ
ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾಯ್ದು, ಅಕ್ರಮ ಪ್ರವೇಶವನ್ನು ತಡೆಯಬೇಕು. ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ಸಿಎಂ ನಿರ್ದೇಶಿಸಿದರು.
ಎಸ್.ಎಸ್.ಎಲ್.ಸಿ / ಪಿ.ಯು.ಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ನಿಗಾ ವಹಿಸಲು ಮುಖ್ಯಮಂತ್ರಿಗಳು ಸೂಚಿಸಿದರು.












Click it and Unblock the Notifications