Breaking: ಸಿಎಂ ನೇತೃತ್ವದ ವರ್ಚ್ಯುವಲ್ ಸಭೆ ಕುರಿತು ಸಚಿವ ಆರಗ ಮಾಹಿತಿ
ಬೆಂಗಳೂರು, ಜನವರಿ 11: ತಜ್ಞರ ಸಲಹೆ ಮೇರೆಗೆ ದಿನಕ್ಕೆ ಒಂದೂವರೆ ಲಕ್ಷ ಕೋವಿಡ್ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋವಿಡ್ ಸೋಂಕು ಹೆಚ್ಚಳ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚ್ಯುವಲ್ ಸಭೆಯ ಕುರಿತು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಹೋಂ ಐಸೋಲೇಷನ್ನಲ್ಲಿರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ವಸತಿ ಶಾಲೆಗಳು, ಹಾಸ್ಟೆಲ್ ಬಂದ್ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳಬಹುದು. ಸಂಕ್ರಾಂತಿ, ವೈಕುಂಠ ಏಕಾದಶಿ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವೆಂದು ತಿಳಿಸಿದರು.

ಆರೋಗ್ಯ ಕಾರ್ಯಕರ್ತರು, ಪೊಲೀಸರು, ವಯೋವೃದ್ಧರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ರಾಜ್ಯದಾದ್ಯಂತ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತಿಭಟನೆ, ಮೆರವಣಿಗೆಗೆ ಅನುಮತಿ ಇಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ವೈಕುಂಠ ಏಕಾದಶಿಯಂದು ಹೆಚ್ಚಿನ ಜನ ಸೇರಬಾರದು
ನ.13ರ ಗುರುವಾರ ವೈಕುಂಠ ಏಕಾದಶಿಯಂದು ಸಂಪ್ರದಾಯದಂತೆ ದೇಗುಲಗಳಲ್ಲಿ ಪೂಜೆಗೆ ಅವಕಾಶವಿದೆ. ಆದರೆ ಹೆಚ್ಚಿನ ಜನ ಸೇರಬಾರದು ಎಂಬ ನಿಯಮ ಜಾರಿಗೊಳಿಸಲಾಗಿದೆ. ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು ಮಕ್ಕಳ ವಾರ್ಡ್, ಬೆಡ್ಗಳನ್ನು ಮೀಸಲಿಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿಯೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದರು.
ಕಳೆದ ಬಾರಿಯಂತೆ ಈ ಮಾರುಕಟ್ಟೆಗಳನ್ನು ವಿಕೇಂದ್ರೀಕರಣ ಮಾಡಲು ನಿರ್ಧರಿಸಲಾಗಿದೆ. ಈ ಆದೇಶ ನಾಳೆಯಿಂದಲೇ (ಜ.12) ಜಾರಿಗೆ ಬರಲಿದೆ. ಮಾರುಕಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ಕ್ರಮ ತೆಗೆದುಕೊಳ್ಳಲಾಗುವುದು. ಮಾಸ್ಕ್ ಮತ್ತು ದೈಹಿಕ ಅಂತರ ಕಡ್ಡಾಯವಾಗಿ ಕಾಪಾಡಬೇಕು.
ಜ.14ರಂದು ಪ್ರಧಾನಿ ಸಭೆ
ಮಕ್ಕಳಿಗೆ ಯಾವುದೇ ರೀತಿಯ ಔಷಧ ಕೊರತೆಯಾಗಬಾರದು. ಆಕ್ಸಿಜನ್, ಔಷಧವನ್ನು ಎಲ್ಲಾ ಆಸ್ಪತ್ರೆಗಳಲ್ಲಿ ಸಂಗ್ರಹಿಸಡಬೇಕು. ವೀಕೆಂಡ್ ಕರ್ಫ್ಯೂ ಮುಂದುವರಿಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಜ.14ರಂದು ಪ್ರಧಾನಿ ಸಭೆ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಿಯಮ ಉಲ್ಲಂಘನೆ ಬಗ್ಗೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು. ಪಾದಯಾತ್ರೆಯಲ್ಲಿ ಭಾಗಿಯಾದ ಬಹುತೇಕರಿಗೆ ಸೋಂಕು ಬಂದಿದೆ. ಸೋಂಕು ಬಂದಿದ್ದರೂ ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ. ಮೇಕೆದಾಟು ವಿಚಾರವಾಗಿ ಸಿದ್ದರಾಮಯ್ಯ ದಾರಿ ತಪ್ಪಿಸುತ್ತಿದ್ದಾರೆ. ಮೇಕೆದಾಟು ಜಾರಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದರು.
Recommended Video
ಬಾರ್, ವೈನ್ಶಾಪ್ಗಳ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಐಟಿ- ಬಿಟಿ ಕಚೇರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯ ಅನ್ವಯವೇ ಕಾರ್ಯನಿರ್ವಹಿಸಲಿವೆ. ಹಾಲಿ ಮಾರ್ಗಸೂಚಿ ಯಥಾವತ್ತಾಗಿ ಮುಂದುವರಿಯುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.












Click it and Unblock the Notifications