ಕೊವಿಡ್ ಭೀತಿ: ''ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ'' ಗ್ರಾಮ ವಾಸ್ತವ್ಯಕ್ಕೆ ಬ್ರೇಕ್ !
ಬೆಂಗಳೂರು, ಏಪ್ರಿಲ್ 08: ಬಡ ಜನರ ಮನೆ ಬಾಗಿಲಿಗೆ ಆಡಳಿತ ಎಂಬ ಉದ್ದೇಶದೊಂದಿಗೆ ಕಂದಾಯ ಸಚಿವ ಆರ್. ಅಶೋಕ್ ಜಾರಿಗೆ ತಂದಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೂ ಗಂಡಾಂತರ ಎದುರಾಗಿದೆ. ಕೋವಿಡ್ ಎರಡನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಒಂದು ರಾತ್ರಿ ವಾಸ್ತವ್ಯ ಹೂಡುವುದು. ಸ್ಥಳೀಯ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಮಾಡುವ "ಮಹತ್ವಾಕಾಂಕ್ಷಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯದಲ್ಲಿ ಯಶಸ್ವಿಯಾಗಿತ್ತು. ಪ್ರತಿ ಮಾಹೆಯ ಮೂರನೇ ಶನಿವಾರ ಹಳ್ಳಿಗಳಲ್ಲಿ ವಾಸ್ತವ್ಯ ಹೂಡುತ್ತಿದ್ದ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತಿದ್ದರು. ಕಳೆದ ಫೆಬ್ರವರಿ ಹಾಗೂ ಮಾರ್ಚ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಹೆಸರಿನ ಗ್ರಾಮ ವಾಸ್ತವ್ಯ ರಾಜ್ಯದೆಲ್ಲೆಡೆ ಗಮನ ಸೆಳೆದಿತ್ತು.
ಏಪ್ರಿಲ್ ಮೂರನೇ ಶನಿವಾರ ಕೂಡ ಗ್ರಾಮ ವಾಸ್ತವ್ಯ ನಡೆಯಬೇಕಿತ್ತು. ಆದರೆ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಅಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ರದ್ದು ಪಡಿಸಿ ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮುಂದಿನ ಶನಿವಾರ ನಡೆಯಲಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರದ್ದಾಗಲಿದೆ.

ಹಳ್ಳಿ ವಾಸ್ತವ್ಯದಲ್ಲಿ ಕರೋನಾ ಭಯ: ಕರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಹೆಚ್ಚಳವಾಗಿದೆ. ಗ್ರಾಮ ವಾಸ್ತವ್ಯದಿಂದ ಹಳ್ಳಿಗಳಲ್ಲಿ ಜನರು ಗುಂಪು ಕೂಡಿ ಕೋವಿಡ್ ನಿಯಮ ಉಲ್ಲಂಘನೆ ಮಾಡುವ ಸಾಧ್ಯತೆಯಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸಾಂಕ್ರಾಮಿಕ ರೋಗ ತಡೆಗಟ್ಟಲು ಗ್ರಾಮ ವಾಸ್ತವ್ಯವನ್ನು ಮುಂದಿನ ಆದೇಶದ ವರೆಗೆ ರದ್ದು ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶಿಸಿದ್ದಾರೆ.
Recommended Video
ಕೋವಿಡ್ ಎರಡನೆ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಚಿತ್ರಮಂದಿರ ಮತ್ತು ಸಾರ್ವಜನಿಕರ ಪ್ರದೇಶದಲ್ಲಿನ ಸಂಚಾರದ ಮೇಲೂ ಸರ್ಕಾರ ನಿರ್ಬಂಧ ವಿಧಿಸಿತ್ತು. ಇದೀಗ ಹಳ್ಳಿ ಜನರ ಪಾಲಿಗೆ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕೂಡ ರದ್ದಾಗಿದೆ.












Click it and Unblock the Notifications