ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಕುಣಿಗಲ್ ಶಾಸಕರಿಗೆ ತಾತ್ಕಾಲಿಕ ರಿಲೀಫ್..!
ಬೆಂಗಳೂರು ಮೇ 23. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣದಲ್ಲಿ ಕುಣಿಗಲ್ ಶಾಸಕ ಡಾ.ಎಚ್. ಡಿ.ರಂಗನಾಥ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಹಾಗಾಗಿ ಅವರು ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆರೋಪ ಸಂಬಂಧ ಕುಣಿಗಲ್ ಶಾಸಕ ಡಾ.ಎಚ್.ಡಿ. ರಂಗನಾಥ್ ವಿರುದ್ಧದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಕುಣಿಗಲ್ ಜೆಎಂಎಫ್ಸಿ ಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಶಾಸಕ ರಂಗನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಜತೆಗೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಕುಣಿಗಲ್ ಪೊಲೀಸ್ ಠಾಣಾಧಿಕಾರಿ ಮತ್ತು ದೂರುದಾರ ಪಿ.ಎಚ್.ಗೋವಿಂದರಾಜು ಅವರಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.
ಅರ್ಜಿದಾರರ ಪರ ವಕೀಲರು, ಜನಪ್ರತಿನಿಧಿಯೂ ಆಗಿರುವ ಅರ್ಜಿದಾರರು ಯಾವುದೇ ಕೋವಿಡ್ ನಿಯಮ ಉಲ್ಲಂಘನೆ ಮಾಡಿಲ್ಲ. ಆದರೆ ವಾಸ್ತವವಾಗಿ ಅವರು ಕೋವಿಡ್ ನಿಯಮ ಪಾಲನೆ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದವರಿಗೆ ಸೂಚನೆ ನೀಡಿ ಅವರ ಮನವೊಲಿಸಿದ್ದಾರೆ. ಆದರೆ ತಮ್ಮ ಅಲ್ಲಿನ ಉಪಸ್ಥಿತಿಯನ್ನು ತಪ್ಪಾಗಿ ಅರ್ಥೈಸಿಕೊಂಡು ದೂರು ನೀಡಲಾಗಿದೆ, ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ಹಿನ್ನೆಲೆ:
2021ರ ಜೂ.18ರಂದು ರಮೇಶ್ ಎಂಬುವವರು ಕುಣಿಗಲ್ ಸಮೀಪದ ಹುಲಿಯೂರು ದುರ್ಗ ಬೈಪಾಸ್ ರಸ್ತೆಯಲ್ಲಿ ಅಪಘಾತಕ್ಕೆ ಗುರಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತರ ಶವಪರೀಕ್ಷೆ ನಡೆಸಲು ಮತ್ತು ತಕ್ಷಣಕ್ಕೆ ಕೈಗೊಳ್ಳಬೇಕಾದ ಯಾವುದೇ ಕ್ರಮ ಕೈಗೊಳ್ಳದ ಕುಣಿಗಲ್ ಠಾಣಾಧಿಕಾರಿಯ ನಡೆ ವಿರೋಧಿಸಿ ಜೂ.19ರಂದು ಮೃತರ ಕುಟುಂಬಸ್ಥರು, ಸಂಬಂಧಿಕರು ಮತ್ತು ಹಿತೈಷಿಗಳು ಪೊಲೀಸ್ ಠಾಣೆ ಮಂದೆ ಪ್ರತಿಭಟನೆ ನಡೆಸಿದ್ದರು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಪ್ರತಿಭಟನೆ ವಿಷಯ ತಿಳಿದು ಶಾಸಕರು ಸ್ಥಳಕ್ಕೆ ಧಾವಿಸಿದ್ದರು. ಅಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘನೆ ಕಂಡುಬಂದ ಕಾರಣ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದರು. ಜತೆಗೆ, ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿ ಸ್ಥಳದಿಂದ ತೆರಳುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದರು.
ಆದರೆ, ಗೋವಿಂದ ರಾಜು ಎಂಬುವರು ಅವರ ವಿರುದ್ಧವೇ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪ ಕುರಿತು ಸುಳ್ಳು ದೂರು ನೀಡಿದ್ದರು. ಅದನ್ನು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆದ್ದರಿಂದ ಪ್ರಕರಣ ಕುರಿತ ತಮ್ಮ ವಿರುದ್ಧ ಕುಣಿಗಲ್ ಜೆಎಂಎಫ್ಸಿ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಶಾಸಕ ರಂಗನಾಥ್ ಹೈಕೋರ್ಟ್ ಮೊರೆ ಹೋಗಿದ್ದರು.