ಕೊರೋನಾ ಮಾರ್ಗಸೂಚಿ ಉಲ್ಲಂಘನೆ: ಈಶ್ವರ್ ಖಂಡ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್
ಬೆಂಗಳೂರು, ಏಪ್ರಿಲ್ 13: ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಮೂವರ ವಿರುದ್ಧ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ವಾರೆಂಟ್ ಜಾರಿಯಾಗಿರುವ ಇತರೆ ಕಾಂಗ್ರೆಸ್ ಮುಖಂಡರೆಂದರೆ ಎನ್.ಎಸ್. ಮಂಜುನಾಥ್ ಮತ್ತು ಬಸವನಗೌಡ ಬಾದರ್ಲಿ. ನಾರಾಯಣಿ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನ ನ್ಯಾಯಾಧೀಶ ಜೆ.ಪ್ರೀತ್ ಈ ಆದೇಶ ಮಾಡಿದ್ದಾರೆ.
ಗೈರು ಹಾಜರಿಗೆ ಗರಂ: ಅಲ್ಲದೆ, ನ್ಯಾಯಾಲಯದ ಆದೇಶದ ಹೊರತಾಗಿಯೂ ಬುಧವಾರವೂ ವಿಚಾರಣೆಗೆ ಈಶ್ವರ್ ಖಂಡ್ರೆ, ಎನ್.ಎಸ್. ಮಂಜುನಾಥ್ ಮತ್ತು ಬಸವನಗೌಡ ಬಾದರ್ಲಿಗೆ ಗೈರು ಹಾಜರಾಗಿದ್ದಕ್ಕೆ ನ್ಯಾಯಾಲಯ ಗರಂ ಆಗಿತ್ತು. ಹಾಗಾಗಿ ಅವರ ವಿರುದ್ಧ ಮತ್ತೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿ ಆದೇಶಿಸಿತು.
ಏ.27ಕ್ಕೆ ಡಿಕೆಶಿ ಹಾಜರಿಗೆ ಆದೇಶ: ಇದೇ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಏ.27ಕ್ಕೆ ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ವಕೀಲರು ವಿಚಾರಣೆಗೆ ಹಾಜರಾಗಿ, ಈ ಒಂದು ದಿನ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಡಿ.ಕೆ.ಶಿವಕುಮಾರ್ಗೆ ವಿನಾಯ್ತಿ ನೀಡಬೇಕು ಎಂದು ಮನವಿ ಮಾಡಿದರು.

ಅದನ್ನು ಪರಿಗಣಿಸಿದ ನ್ಯಾಯಾಲಯ, ಇಂದಿನ ವಿಚಾರಣೆಗೆ ವಿನಾಯ್ತಿ ಇದೆ, ಆದರೆ ಏ.27ರಂದು ನಡೆಯುವ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಡಿ.ಕೆ.ಶಿವಕುಮಾರ್ ಗೆ ನಿರ್ದೇಶನ ನೀಡಿತು.
ಈ ಮಧ್ಯೆ ಕಳೆದ ವಿಚಾರಣೆ ವೇಳೆ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದ ಇತರೆ ಆರೋಪಿಗಳಾಗಿರುವ ಶಫೀವುಲ್ಲಾ ಮತ್ತು ಸಲೀಂ ಮೊಹಮ್ಮದ್ ಅವರು ವಿಚಾರಣೆಗೆ ಖುದ್ದು ಹಾಜರಾಗಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿತು. ಹಾಗೆಯೇ, ಭದ್ರತಾ ಖಾತರಿಯಾಗಿ ಈ ಇಬ್ಬರು ತಲಾ ಐದು ಸಾವಿರ ರೂ. ಠೇವಣಿ ಇಡಬೇಕು ಎಂದು ಆದೇಶಿಸಿತು.
ನಾರಾಯಣಿ ಎಂಬುವವರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕ್ರಿಮಿನಲ್ ದೂರು ನೀಡಿ, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಂಗ್ರೆಸ್ ಮುಖಂಡರಾದ ಎನ್.ಎಸ್. ಮಂಜುನಾಥ್, ಬಸವನಗೌಡ ಬಾದರ್ಲಿ, ಶಫೀವುಲ್ಲಾ ಮತ್ತು ಸಲೀಂ ಮೊಹಮ್ಮದ್ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಬೇಕು ಎಂದು ಕೋರಿದ್ದರು.
ಪ್ರಕರಣವನ್ನು 42ನೇ ಎಸಿಸಿಎಂ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಪ್ರಕರಣವನ್ನು ಕಳೆದ ಮಾ.23ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಎಲ್ಲಾ ಆರೋಪಿಗಳಿಗೂ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿತ್ತು.












Click it and Unblock the Notifications