ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ಕೋವಿಡ್ ಸಲಹಾ ಸಮಿತಿ ಮಹತ್ವದ ಸೂಚನೆ!
ಬೆಂಗಳೂರು, ಡಿ. 17: ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಗುರುವಾರ ನೀಡಿರುವ ವರದಿ ಆಧಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಪ್ರಸ್ತುತ ವರ್ಷದಲ್ಲಿ ಶಾಲಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ನಂತರ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿ ಕುರಿತಂತೆ ಶಾಲೆಗಳ ಆರಂಭದ ಹಿನ್ನೆಲೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಪ್ರಸರಣ, ಕೋವಿಡ್ ಪಾಸಿಟಿವ್ ಪ್ರಕರಣಗಳ ದಾಖಲು, ಮರಣ ಪ್ರಮಾಣ ಸೇರಿದಂತೆ ಕೋವಿಡ್ಗೆ ಸಂಬಂಧಿಸಿದಂತೆ ಎಲ್ಲ ಸ್ತರಗಳಲ್ಲಿ ಚರ್ಚೆ ನಡೆಸಿ ಶಾಲೆಗಳ ಆರಂಭದ ವಿಚಾರದಲ್ಲಿ ಕೈಗೊಳ್ಳಬಹುದಾದ ಎಲ್ಲ ಸಂಗತಿಗಳನ್ನು ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಲಾಯಿತು ಎಂದು ವಿವರಿಸಿದ್ದಾರೆ.

ತಾಂತ್ರಿಕ ಸಹಲಾ ಸಮಿತಿ
ಪರಿಸ್ಥಿತಿಯನ್ನು ಅವಲೋಕಿಸಿ ತಾಂತ್ರಿಕ ಸಲಹಾ ಸಮಿತಿ ಯಾವ ಯಾವ ತರಗತಿಗಳನ್ನು ಯಾವ ದಿನಗಳಲ್ಲಿ ಪ್ರಾರಂಭಿಸಬಹುದು, ಪ್ರಾರಂಭಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಮಾಣಿತ ಕಾರ್ಯಾಚರಣೆ ವಿಧಾನ-ಎಸ್ ಒ ಪಿಗಳನ್ನು ಸಿದ್ಧಪಡಿಸಿಕೊಟ್ಟಿದ್ದು, ಅದರ ಆಧಾರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶಾಲಾರಂಭಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ಎಸ್ಎಸ್ಎಲ್ಸಿ, ಪಿಯುಸಿ ತರಗತಿ
ಮೊದಲಿಗೆ ಮುಂದಿನ ವ್ಯಾಸಂಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅಗತ್ಯವಾದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಮತ್ತು ಪರಿಷ್ಕೃತ ವಿದ್ಯಾಗಮ ಆರಂಭಿಸುವ ಸಂಬಂಧದಲ್ಲಿ ಕ್ರಮಗಳ ಕುರಿತು ಸಲಹಾ ಸಮಿತಿ ಸಲಹೆ ನೀಡಿದೆ. ನಂತರ ಉಳಿದ ತರಗತಿಗಳ ಆರಂಭಕ್ಕೆ ಕ್ರಮವಹಿಸಲೂ ಸಹ ಸಮಿತಿ ಅಭಿಪ್ರಾಯಪಟ್ಟಿದೆ ಎಂದು ಸುರೇಶ್ ಕುಮಾರ್ ಅವರು ಹೇಳಿದರು.

ಸಮಿತಿ ಸದಸ್ಯರ ಅಭಿಪ್ರಾಯ
ಅಗತ್ಯ ಮುನ್ನೆಚ್ಚರಿಕೆಯ ಸುರಕ್ಷಾ ಕ್ರಮಗಳನ್ನು ಕೈಗೊಂಡು ಪರಿಣಾಮಕಾರಿಯಾಗಿ ಅನುಸರಿಸುತ್ತಿರುವುದರಿಂದ ಪದವಿ ಹಾಗೂ ಉನ್ನತ ಶಿಕ್ಷಣದ ತರಗತಿಗಳು ಸುಸೂತ್ರವಾಗಿ ನಡೆಯುತ್ತಿವೆ. ವಿದ್ಯಾರ್ಥಿಗಳು ಪಾಳಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಾರದಲ್ಲಿ ಎರಡು ದಿನಗಳು ಮಾತ್ರವೇ ಬರುವುದರಿಂದ ಸುರಕ್ಷಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬಹುದು ಎಂದು ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಪರೀಕ್ಷಾ ಸಂದರ್ಭ ಹರಡಲಿಲ್ಲ
ಜುಲೈನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಯಾವುದೇ ಸಂದರ್ಭದಲ್ಲೂ ಕೋವಿಡ್ ಹರಡಲಿಲ್ಲ ಎಂಬುದನ್ನು ಸಮಿತಿ ಈ ಸಂದರ್ಭದಲ್ಲಿ ಉಲ್ಲೇಖಿಸಿದೆ. ಶಾಲಾರಂಭಕ್ಕೂ ಮುನ್ನ ಇದೇ ತಿಂಗಳಿನಲ್ಲಿ ಶಾಲಾಡಳಿತಗಳು, ಶಾಲಾ ಮೇಲುಸ್ತುವಾರಿ ಸಮಿತಿಗಳು ಪೋಷಕರು, ಮಕ್ಕಳು ಸೇರಿದಂತೆ ಇನ್ನಿತರೆ ಶೈಕ್ಷಣಿಕ ಪಾಲುದಾರರನ್ನು ಸಭೆ ನಡೆಸಿ ಶಾಲೆಗಳ ಪುನರಾರಂಭ ಕುರಿತು ವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವರಿಸಿದ್ದಾರೆ.
Recommended Video

ಡಾ. ಸುದರ್ಶನ್ ನೇತೃತ್ವದ ಸಮಿತಿ
ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಸುದರ್ಶನ್, ಸದಸ್ಯರಾದ ಡಾ. ವಿ. ರವಿ, ಡಾ. ಎಂ. ಶರೀಫ್, ಡಾ. ಶಶಿಭೂಷಣ್ ಬಿ.ಎಲ್., ಡಾ. ಲೋಕೇಶ್ ಅಲ್ಹಾರಿ ಸೇರಿದಂತೆ ಕೋವಿಡ್ ಸಲಹಾ ಸಮಿತಿ ಸದಸ್ಯರಾದ ಹಲವಾರು ಸದಸ್ಯರು, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಪಿಯು ನಿರ್ದೇಶಕಿ ಸ್ನೇಹಲ್ ಸೇರಿದಂತೆ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.












Click it and Unblock the Notifications