ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ ರಾಜ್ಯಪಾಲರ ಅಂಕಿತಕ್ಕೆ ರವಾನೆ
ಬೆಂಗಳೂರು, ಡಿ. 30: ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಇಂದು ಡಿಸೆಂಬರ್ 30ರಂದು ಕಳುಹಿಸಲಾಗುತ್ತಿದೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವ ಸಲುವಾಗಿ, ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿಯ 'ಕರ್ನಾಟಕ ಜಾನುವಾರು ಹತ್ಯೆೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ'ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಿದೆ.
ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಗೋಹತ್ಯೆೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಲಾಗಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಜ್ಯಪಾಲರ ಅಂಕಿತ ಹಾಕಿದ ನಂತರ ಸುಗ್ರೀವಾಜ್ಞೆ ಅಧಿಕೃತ ಕಾಯ್ದೆಯಾಗಿ ಜಾರಿಗೆ ಬರಲಿದೆ.
ನಂತರ ಆರು ತಿಂಗಳೊಳಗಾಗಿ ಸರ್ಕಾರ ಸುಗ್ರೀವಾಜ್ಞೆಯನ್ನು ವಿಧಾನ ಮಂಡಲದ ಎರಡೂ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕಾಗುತ್ತದೆ. ಕಳೆದ ವಿಧಾನ ಮಂಡಳ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು. ಆದರೆ ಜೆಡಿಎಸ್ ಬೆಂಬಲ ಕೊಡದೇ ಇದ್ದುದರಿಂದ ವಿಧಾನ ಪರಿಷತ್ನಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಿರಲಿಲ್ಲ.
Recommended Video
ಹೀಗಾಗಿ ಸುಗ್ರೀವಾಜ್ಞೆ ಮೂಲಕ ಇದೀಗ ಕಾಯ್ದೆ ಜಾರಿಗೆ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದ್ದು, ಹೊಸ ವರ್ಷದ ವಿಧಾನ ಮಂಡಳ ಜಂಟಿ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ್ಕೆ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.