ಸಿಎಂ ಯಡಿಯೂರಪ್ಪ ಹೇಳಿಕೆಗೆ ಯೋಗೇಶ್ವರ್ ಮಹತ್ವದ ಪ್ರತಿಕ್ರಿಯೆ!
ಬೆಂಗಳೂರು, ಡಿ. 01: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರಿಗೆ ಮಂತ್ರಿಸ್ಥಾನದ ಕುರಿತು ಎಲ್ಲ ಗೊಂದಲಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆರೆ ಎಳೆದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಪ್ರತಿಕ್ರಿಯೆ ಕೊಟ್ಟಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಯೋಗೇಶ್ವರ್ ಅವರನ್ನು ಮಂತ್ರಿ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿಕೆ ನೀಡಿದ್ದರು. ಆ ಮೂಲಕ ತಮ್ಮದೇ ಪಕ್ಷದಲ್ಲಿನ ಯೋಗೇಶ್ವರ್ ಅವರ ವಿರೋಧಿಗಳಿಗೆ ಸ್ಪಷ್ಟವಾದ ಸಂದೇಶ ರವಾನೆ ಮಾಡಿದ್ದರು. ಇದೀಗ ಮುಖ್ಯಮಂತ್ರಿಗಳ ಹೇಳಿಕೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ರಾಮನಗರದಲ್ಲಿ ಮಾತನಾಡಿದ್ದಾರೆ.
ತಮ್ಮನ್ನು ಮಂತ್ರಿ ಮಂಡಲಕ್ಕೆ ಸೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಯೋಗೇಶ್ವರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿರುವ ಅವರು, ಪಕ್ಷದಲ್ಲಿ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತವೆ. ಆದರೆ ಪಕ್ಷದೊಳಗಿನ ಗೊಂದಲಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವೆ ಎಂದು ಹೇಳಿದ್ದಾರೆ.
ಯೋಗೇಶ್ವರ್ ಮಂತ್ರಿಯಾಗುವುದು ನೂರಕ್ಕೆ ನೂರು ಖಚಿತ: ಯಡಿಯೂರಪ್ಪ!
ಯೋಗೇಶ್ವರ್ ಅವರಿಗೆ ಮಂತ್ರಿಸ್ಥಾನ ಕೊಡುವುದನ್ನು ಬಿಜೆಪಿಯಲ್ಲಿಯೇ ಹಲವು ವಿರೋಧಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಬ ಆಪ್ತ, ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರೂ ಸೇರಿದಂತೆ ಅನೇಕರು ಯೋಗೇಶ್ವರ್ ಅವರಿಗೆ ಮಂತ್ರಿ ಪದವಿ ಕೊಟ್ಟಲ್ಲಿ ಸುಮ್ಮನಿರುವುದಿಲ್ಲ ಎಂದಿದ್ದರು, ಇದೀಗ ಸ್ವತಃ ಯಡಿಯೂರಪ್ಪ ಅವರೇ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಆದರೆ ಇದನ್ನು ಯಡಿಯೂರಪ್ಪ ಅವರ ಆಪ್ತರು ಹೇಗೆ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಯೋಗೇಶ್ವರ್ ಅವರು ಮಂತ್ರಿಯಾಗುವುದು ನಿಂತಿದೆ ಎನ್ನಬಹುದು.