ಚನ್ನಪಟ್ಟಣ ಟಿಕೆಟ್‌ ನಿರೀಕ್ಷೆಯಲ್ಲಿರುವ ಸಿ ಪಿ ಯೋಗೇಶ್ವರ್‌ ಕೈ ಸಂಪರ್ಕದಲ್ಲಿ : ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಅಕ್ಟೋಬರ್‌ 21: ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೇ ಗೊತ್ತು. ನಮಗೆ ಗೊತ್ತಿಲ್ಲ. ಅವರ ರಾಜಕೀಯವೇ ಬೇರೆ, ಅವರ ಪಕ್ಷ ಹಾಗೂ ಕಾರ್ಯಕರ್ತರ ರಾಜಕಾರಣವೇ ಬೇರೆ. ಎನ್ ಡಿಎ ಮೈತ್ರಿ ರಾಜಕಾರಣವೇ ಬೇರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ, ಮಾತೂ ಆಡಿಲ್ಲ. ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ನೀಡಬೇಕಾದ ಗೌರವ ಕೊಟ್ಟಿದ್ದೇನೆ. ಅದರ ಹೊರತಾಗಿ ನಮ್ಮ ಮಧ್ಯೆ ಯಾವುದೇ ಭೇಟಿ, ಚರ್ಚೆ ನಡೆದಿಲ್ಲ ಎಂದು ಅಧಿಕೃತವಾಗಿ ಹೇಳುತ್ತಿದ್ದೇನೆ.

CP Yogeshwar in touch with Congress leaders DK Shivakumar Reaction

ಕುಮಾರಸ್ವಾಮಿ ಅವರಿಗೆ ಮಾಹಿತಿ ಇದ್ದರೆ ಮಾತನಾಡಿಕೊಳ್ಳಲಿ. ನನಗೂ ಬೇಕಾದಷ್ಟು ಮಾಹಿತಿಗಳಿವೆ. ಬೇರೆ ಪಕ್ಷದವರನ್ನು ಸಂಪರ್ಕಿಸುವ ಅವಶ್ಯಕತೆ ಸಧ್ಯಕ್ಕಿಲ್ಲ ಎಂದು ನಾನು ನಮ್ಮ ಪಕ್ಷದವರಿಗೂ ಹೇಳಿದ್ದೇನೆ. ಯೋಗೇಶ್ವರ್ ಅವರು ಹಾಲಿ ವಿಧಾನಪರಿಷತ್ ಸದಸ್ಯರು. ಚನ್ನಪಟ್ಟಣದಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದ ನಾವು ಕೆಲಸ ಮಾಡಿಕೊಂಡು ಕಾರ್ಯಕರ್ತರನ್ನು ಸಜ್ಜುಮಾಡಿಕೊಂಡು ಬಂದಿದ್ದೇನೆ ಎಂದು ತಿಳಿಸಿದರು.

ಟಿಕೆಟ್ ಸಿಗದಿದ್ದರೆ ಯೋಗೇಶ್ವರ್ ಅತಂತ್ರವಾಗುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಾನು ಅವರ ಪಕ್ಷ ಹಾಗೂ ಎನ್ ಡಿಎ, ಕುಮಾರಸ್ವಾಮಿ, ಯೋಗೇಶ್ವರ್, ದಳದ ವಿಚಾರವಾಗಿ ಮಾತನಾಡುವುದಿಲ್ಲ. ಕಳೆದ ಐದು ವರ್ಷಗಳಿಂದ ಕುಮಾರಸ್ವಾಮಿ ಅವರು ಆಡಿರುವ ಮಾತುಗಳನ್ನು ನೋಡಿಕೊಂಡು ಬನ್ನಿ. ಅವರು ಎಂದಿಗೂ ತಮ್ಮ ಮಾತಿಗೆ ಬದ್ಧವಾಗಿ ನಿಂತಿಲ್ಲ. ಹೀಗಾಗಿ ಅವರ ನಿಲುವಿನ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಸಾರ್ವಜನಿಕವಾಗಿ ಮಾತನಾಡುವುದೇ ಬೇರೆ, ಆಂತರಿಕವಾಗಿ ಮಾತನಾಡುವುದೇ ಬೇರೆ. ಆ ರೀತಿ ಮಾತನಾಡುವುದೇ ಅವರ ತಂತ್ರಗಾರಿಕೆ ಇರಬಹುದು. ಅದಕ್ಕೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಹೇಳಿದರು.

ನಮ್ಮ ಕಾರ್ಯಕರ್ತರನ್ನು ಕರೆಸಿ ಯಾರೇ ನಿಂತರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಅವರಿಗೆ ಸೂಚನೆ ನೀಡಿದ್ದೇವೆ. ಮುಂದಿನ ಮೂರುವರೆ ವರ್ಷ ಹಾಗೂ ನಂತರದ ಮುಂದಿನ ಸರ್ಕಾರವೂ ನಾವೇ ಅಧಿಕಾರಕ್ಕೆ ಬರುವ ನಿರೀಕ್ಷೆ ಇದ್ದು, ಈ ಅವಧಿಯಲ್ಲಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಜೆಡಿಎಸ್ ಗೆ ಚನ್ನಪಟ್ಟಣದಲ್ಲಿ ಅಭ್ಯರ್ಥಿಯಿಲ್ಲವೇ ಎಂದು ಕೇಳಿದಾಗ, "ಜೆಡಿಎಸ್ ಪಕ್ಷ ದುರ್ಬಲ ಎಂದು ನಾನು ಭಾವಿಸಿದರೆ ನನ್ನಂತ ಮೂರ್ಖ ಇನ್ಯಾರು ಇಲ್ಲ. ಆದರೆ ಕುಮಾರಸ್ವಾಮಿ ಇಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೇಂದ್ರ ಸಚಿವರಾಗಿರುವ ಅವರು ಎಲ್ಲರ ಕೈಕಾಲು ಕಟ್ಟಿಕೊಂಡು ನಮ್ಮ ಚಿಹ್ನೆಯಿಂದ ಸ್ಪರ್ಧೆ ಮಾಡಿ ಎಂದು ಬಿಜೆಪಿಯವರಿಗೆ ಹೇಳುವಷ್ಟು ದುರ್ಬಲರಾಗಿದ್ದಾರೆ ಎಂದು ಭಾವಿಸಿರಲಿಲ್ಲ ಎಂದು ಲೇವಡಿ ಮಾಡಿದರು.

ಉಪಚುನಾವಣೆ ನಾಮಪತ್ರ ಸಲ್ಲಿಕೆಗೆ ಮೂರ್ನಾಲ್ಕು ದಿನಗಳು ಬಾಕಿ ಇದ್ದು ನಿನ್ನೆ ಸಿಎಂ ಜತೆಗಿನ ಸಭೆ ಬಗ್ಗೆ ಕೇಳಿದಾಗ, "ಸಚಿವರುಗಳ ಜತೆ ಚರ್ಚೆ ಮಾಡಿ ಅಭಿಪ್ರಾಯ ಪಡೆದಿದ್ದೇವೆ. ಚುನಾವಣಾ ಸಮಿತಿ ಸಭೆ ಬದಲು ಚುನಾವಣೆ ಉಸ್ತುವಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಪಕ್ಷದ ಅಭ್ಯರ್ಥಿಗಳ ತೀರ್ಮಾನ ಆಗಿದೆ. ನಾವು ದೆಹಲಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಅವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದು ತಿಳಿಸಿದರು.

ಪ್ರತಿ ಕ್ಷೇತ್ರಕ್ಕೆ ಒಬ್ಬರ ಹೆಸರನ್ನೇ ಹೈಕಮಾಂಡ್ ಗೆ ಕಳುಹಿಸುತ್ತೀರಾ ಎಂದು ಕೇಳಿದಾಗ, "ನಾವು ಒಂದು ಹೆಸರನ್ನು ಕಳುಹಿಸುತ್ತೇವೋ, ಎರಡು ಹೆಸರು ಕಳುಹಿಸುತ್ತೇವೋ, ಅರ್ಜಿ ಹಾಕಿದವರೆಲ್ಲರ ಹೆಸರು ಕಳುಹಿಸುತ್ತೀವೋ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಬಿಜೆಪಿ- ಜೆಡಿಎಸ್ ಅಲ್ಲಿ ಅನೇಕ ಗೊಂದಲಗಳಿವೆ ಎಂದು ಕೇಳಿದಾಗ, "ಅವರ ನಡುವೆ ಗೊಂದಲಗಳಿರುವ ಬಗ್ಗೆ ನನಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಚನ್ನಪಟ್ಟಣ ಸ್ವಾಭಾವಿಕವಾಗಿ ಜೆಡಿಎಸ್ ಕ್ಷೇತ್ರ. ಕುಮಾರಸ್ವಾಮಿ ಹಾಲಿ ಕ್ಷೇತ್ರ. ಆದರೆ ಅವರು ಬಿಜೆಪಿಗೆ ಬಿಟ್ಟುಕೊಟ್ಟಿರುವ ಬಗ್ಗೆ ಮಾಧ್ಯಮಗಳ ವರದಿ ಬರುತ್ತಿವೆ. ಈ ಕ್ಷೇತ್ರ ಬಿಟ್ಟುಕೊಟ್ಟರೆ ಅವರು ಪಕ್ಷದ ಅಸ್ಥಿತ್ವ ಕಳೆದುಕೊಂಡಂತಾಗುತ್ತದೆ. ಈಗಾಗಲೇ ಅವರ ಬಾಮೈದರನ್ನು ಬಿಜೆಪಿ ಚಿಹ್ನೆ ಅಡಿ ನಿಲ್ಲಿಸಿದ್ದಾರೆ. ಈಗ ಇದನ್ನೂ ಬಿಟ್ಟುಕೊಟ್ಟರೆ ಅವರು ಅಸ್ಥಿತ್ವ ಕಳೆದುಕೊಳ್ಳುತ್ತಾರೆ. ಇದು ಎಲ್ಲರಿಗೂ ಅರ್ಥವಾಗುವ ವಿಚಾರ. ಇದರಲ್ಲಿ ನಾವ್ಯಾಕೆ ಹಸ್ತಕ್ಷೇಪ ಮಾಡೋಣ? ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಡಿ.ಕೆ. ಸುರೇಶ್ ಅವರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದಾಗ, "ಶೇ 80 ರಷ್ಟು ಕಾರ್ಯಕರ್ತರು ಸುರೇಶ್ ಅವರ ಸ್ಪರ್ಧೆಗೆ ಬೇಡಿಕೆ ಇಟ್ಟಿದ್ದಾರೆ. ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತಾರೆ ಅವರ ಪರವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸ್ಪಷ್ಟಪಡಿಸಿದ್ದೇನೆ. ಲೋಕಸಭೆ ಚುನಾವಣೆ ಸೋಲಿನ ಆಘಾತದಿಂದ ನಾವಿನ್ನೂ ಹೊರಗೆ ಬಂದಿಲ್ಲ. ಸುರೇಶ್ ಅಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ. ಕಡಿಮೆ ಅಂತರದಲ್ಲಿ ಸೋತಿದ್ದರೆ ಒಂದು ಪಕ್ಷ ಸುಧಾರಿಸಿಕೊಳ್ಳಬಹುದಿತ್ತು. ಹೀಗಾಗಿ ನಾವು ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ಮಾತ್ರಕ್ಕೆ ಜನರ ಸೇವೆಯನ್ನು ಬಿಡಲು ಆಗುವುದಿಲ್ಲ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+