ಯೋಗೇಶ್ವರ್ ಮಂತ್ರಿಯಾಗುವುದು ನೂರಕ್ಕೆ ನೂರು ಖಚಿತ: ಯಡಿಯೂರಪ್ಪ!
ಬೆಂಗಳೂರು, ಡಿ. 01: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ವಿಚಾರವಾಗಿ ರಾಜ್ಯ ಬಿಜೆಪಿ ಒಡೆದ ಮನೆಯಾಗಿದೆ. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಆಪ್ತ ಹಾಗೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಎಂದು ಅಭಿಯಾನವನ್ನೇ ನಡೆಸಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿಯನ್ನೂ ಮಾಡಿಕೊಂಡಿದ್ದರು. ಜೊತೆಗೆ ಯೋಗೇಶ್ವರ್ ಅವರನ್ನು ಮಂತ್ರಿ ಮಾಡಿದರೆ ನಾವಂತೂ ಸುಮ್ಮನಿರಲ್ಲ ಎಂದು ಬಹಿರಂಗ ಹೇಳಿಕೆಯನ್ನೂ ರೇಣುಕಾಚಾರ್ಯ ನೀಡಿದ್ದರು.
ಆದರೆ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕು ಎಂಬ ಬೇಡಿಕೆಯೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಯೋಗೇಶ್ವರ್ ಅವರ ವಿಚಾರವಾಗಿ ರಾಜ್ಯ ಬಿಜೆಪಿ ಎರಡು ಹೋಳಾಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ.
Recommended Video
ಈ ಮಧ್ಯೆ ವಿಧಾನಸೌಧದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಮಾತನಾಡಿದ್ದಾರೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವುದು ಖಚಿತ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ತಮ್ಮದೇ ಪಕ್ಷದಲ್ಲಿನ ವಿರೋಧಿಗಳಿಗೆ ಡೋಂಟ್ ಕೇರ್ ಎಂದಿರುವ ಸಿಎಂ, ಯೋಗೇಶ್ವರ್ ಅವರಿಗೆ ಅಭಯ ಹಸ್ತ ಚಾಚಿದ್ದಾರೆ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮೂಲ ಬಿಜೆಪಿಗರಿಂದ ಕೇಳಿ ಬಂದಿದ್ದ ವಿರೋಧದ ಬಗ್ಗೆ ಯಡಿಯೂರಪ್ಪ ಒಂದೇ ವಾಕ್ಯದಲ್ಲಿ ಉತ್ತರ ನೀಡಿದ್ದಾರೆ.
ಇನ್ನು ಮಾಜಿ ಸಚಿವ, ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರ ಕುರಿತು ಪ್ರಶ್ನೆ ಮಾಡಿದಾಗ ಏನನ್ನು ಉತ್ತರಿಸದೆ ಕೈ ಮುಗಿದು ತೆರಳಿದರು.