ಹೆಚ್ಚುವರಿ ಡಿಸಿಎಂ ಹುದ್ದೆ ಬೇಡಿಕೆ: ಖರ್ಗೆ ಜೊತೆ ಡಿಕೆಶಿ ಮಹತ್ವದ ಮಾತುಕತೆ!
ಬೆಂಗಳೂರು, ಜೂನ್ 30: ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್ನಲ್ಲಿ ಹೊಸ ಹೊಸ ಬೇಡಿಕೆ ಕೇಳಿ ಬರುತ್ತಿದೆ. ಡಿ. ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ, ಹೆಚ್ಚುವರಿ ಡಿಸಿಎಂಗಳ ನೇಮಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಗಳು ಆರಂಭವಾಗಿವೆ.
ಭಾನುವಾರ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದ ಡಿ. ಕೆ. ಶಿವಕುಮಾರ್ ದೆಹಲಿಯಲ್ಲಿಯೇ ಉಳಿದಿದ್ದರು.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ. ಕೆ. ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಈ ಮೂಲಕ ಡಿಸಿಎಂಗಳ ನೇಮಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ದೆಹಲಿಗೆ ವರಿಷ್ಠರ ಅಂಗಳ ತಲುಪಿದೆ.
ರಾಜ್ಯ ರಾಜಕೀಯ ಬಲ್ಲ ಖರ್ಗೆ: ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರು. ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕೀಯವನ್ನು ಚೆನ್ನಾಗಿ ಬಲ್ಲರು. ಆದ್ದರಿಂದ ಉಭಯ ನಾಯಕರ ಬಳಿ ಖರ್ಗೆ ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ ಎಂಬ ಮಾಹಿತಿ ಇದೆ.
ಡಿ. ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ಆಗಿದ್ದಾರೆ. ಆದ್ದರಿಂದ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು. ಉತ್ತರ ಕರ್ನಾಟಕ ಭಾಗದ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ವಿವಿಧ ಶಾಸಕರು ಬೇಡಿಕೆ ಇಡುತ್ತಿದ್ದಾರೆ.
ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿ ಬರುತ್ತಿದೆ. ಆದರೆ ಈ ಚುನಾವಣೆಗಳು ಮುಗಿಯುವ ತನಕ ಅಧ್ಯಕ್ಷರ ಬದಲಾವಣೆ ಬೇಡ ಎಂದು ಡಿ. ಕೆ. ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆಗೆ ಮನವರಿಕೆ ಮಾಡಿ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ.
ಮಾಧ್ಯಮಗಳ ಮೂಲಕ ಹೆಚ್ಚುವರಿ ಡಿಸಿಎಂ ನೇಮಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬಾರದು. ಇಂತಹ ವಿಚಾರಗಳ ಕುರಿತು ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈಗಾಗಲೇ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
"ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಮಾತನಾಡುವವರು ಮಾಧ್ಯಮಗಳ ಮುಂದೆ ಮಾತನಾಡುವುದರ ಬದಲು ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ. ಈ ಕುರಿತು ಮಾತನಾಡುವವರು ತಮ್ಮ ಯಾವುದೇ ಆಸೆ, ಆಕಾಂಕ್ಷೆಗಳೇನು ಇದ್ದರೂ ಹೈಕಮಾಂಡ್ ಮುಂದೆ ಹೋಗಿ ಪರಿಹಾರ ಕಂಡುಕೊಳ್ಳಲಿ. ಮಾಧ್ಯಮಗಳಿಂದ ಪ್ರಚಾರ ಸಿಗುತ್ತದೆ, ಪರಿಹಾರ ಸಿಗುವುದಿಲ್ಲ" ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ ಮಾತನಾಡಿ, "ಯಾವುದೇ ಬದಲಾವಣೆ ಇದ್ದರೆ ವರಿಷ್ಠರು ವೀಕ್ಷಕರನ್ನು ಕಳಿಸಿ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ. ಅವರು ಕೊಡುವ ವರದಿಯನ್ನು ಪಡೆದು ಅಗತ್ಯವಿದ್ದರೆ ಬದಲಾವಣೆ ಮಾಡುತ್ತಾರೆ" ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಡಿ. ಕೆ. ಶಿವಕುಮಾರ್ ಡಿಸಿಎಂ ಮಾಡುವಾಗ ಲೋಕಸಭೆ ಚುನಾವಣೆ 2024ರ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಸೂಚನೆ ನೀಡಲಾಗಿತ್ತು ಎಂಬ ಮಾಹಿತಿ ಇದೆ. ಈಗ ಚುನಾವಣೆ ಮುಗಿದಿದ್ದು, ಅವರು ಉಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಹೊಸ ನಾಯಕರಿಗೆ ಕೆಪಿಸಿಸಿ ಸಾರಥ್ಯ ವಹಿಸಬಹುದು ಎಂಬುದು ಸದ್ಯದ ಸುದ್ದಿ.












Click it and Unblock the Notifications