ಮಳೆಗೆ ಬೆಳೆ ಹಾನಿ: ಪ್ರವಾಹ ಬಗ್ಗೆ ಉಡಾಫೆ ಮಾತು ಬಿಟ್ಟು ಕ್ರಮ ಕೈಗೊಳ್ಳಿ: ಆರ್.ಅಶೋಕ
ಬೆಂಗಳೂರು, ಅಕ್ಟೋಬರ್ 20: ಒಂದೆಡೆ ಕಾಂಗ್ರೆಸ್ ಸರ್ಕಾರ ಬಂದರೆ ಮಳೆ ಆಗಲ್ಲ ಎಂಬುದನ್ನು ವಿಪಕ್ಷಗಳು ನೆನಪಿಸುತ್ತವೆ. ಇದೀಗ ಅತೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ರೈತರು ಬೆಳ ಹಾನಿ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ವಿಪಕ್ಷಗಳ ಟೀಕೆ ಮಾಡಿದ ಮೇಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಮತ್ತೊಂದೆಡೆ ಶಾಸಕರೇ ಅನುದಾನ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಆರ್.ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹೌದು, ಭಾನುವಾರ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ ಅವರು, ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ವಿಪಕ್ಷಗಳ ಟೀಕೆ ಮಾಡಿದ ಮೇಲಾದರೂ ಎಚ್ಚೆತ್ತುಕೊಳ್ಳಂಡು ಕಾರ್ಯೋನ್ಮುಖವಾಗುವ ಬದಲು ವಿಪಕ್ಷಗಳ ಮೇಲೆಯೇ ಹರಿಹಾಯುವುದೂ ಯಾವ ಸೀಮೆ ನ್ಯಾಯ ಸ್ವಾಮಿ? ಎಂದು ಅವರು ಗುಡುಗಿದ್ದಾರೆ.

ಸರ್ಕಾರದ ತಪ್ಪು, ನ್ಯೂನ್ಯತೆ ಸಕಾರಾತ್ಮಕವಾಗಿ ತೆಗೆದುಕೊಳ್ಳಿ
ಸರ್ಕಾರದ ತಪ್ಪುಗಳನ್ನು, ಆಡಳಿತದಲ್ಲಿರುವ ನ್ಯೂನ್ಯತೆಗಳನ್ನು ಎತ್ತಿ ತೋರಿಸಿ, ಜನರ ದನಿಯನ್ನು ಸರ್ಕಾರಕ್ಕೆ ತಲುಪಿಸುವುದೇ ವಿರೋಧ ಪಕ್ಷದ ಕೆಲಸ. ವಿರೋಧ ಪಕ್ಷದ ನಾಯಕನಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳದೇ ನಮ್ಮ ಮೇಲೆ ಸರ್ಕಾರ ಕಿಡಿ ಕಾರುತ್ತಿರುತ್ತಿರುವುದು ಸರಿಯಲ್ಲ ಎಂದರು.
ನಿಮ್ಮ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುವುದಿರಲಿ. ಸ್ವತಃ ಕಾಂಗ್ರೆಸ್ ಶಾಸಕರೇ ಅನೇಕ ಸಂದರ್ಭಗಳಲ್ಲಿ ಸರ್ಕಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಲೋಡ್ ಶೆಡ್ಡಿಂಗ್ ಬಗ್ಗೆ ಶಾಸಕರೇ ಹೇಳಿದ್ದಾರಲ್ಲ
''ಕಾಂಗ್ರೆಸ್ ಸರ್ಕಾರ ರೈತರ ಪರ ಯಾವುದೇ ವಿಶೇಷ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ. ಸರಕಾರದ ಧೋರಣೆ ನೋಡಿದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎನಿಸುವಷ್ಟು ಬೇಸರವಾಗಿದೆ'' ಎಂದು ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ತಿಳಿಸಿದ್ದರು.
ನಿಮ್ಮ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಹಾಗೂ ಲೋಡ್ ಶೆಡ್ಡಿಂಗ್ ಕಣ್ಣಾಮುಚ್ಚಾಲೆಯನ್ನು ಸಹ ನಿಮ್ಮದೇ ಪಕ್ಷದ ಶಾಸಕ ಕಾಗವಾಡದ ರಾಜು ಕಾಗೆಯವರು ಈ ಹಿಂದೆ ಎಳೆ ಎಳೆಯಾಗಿ ಬಿಚ್ಟಿಟ್ಟಿದ್ದಾರೆ. ಶಾಸಕರಿಗೆ ಕನಿಷ್ಠ ಅನುದಾನ ಸಹ ಸರ್ಕಾರದಿಂದ ಲಭಿಸುತ್ತಿಲ್ಲ, ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದಲ್ಲಿ ವಿದ್ಯುತ್ ನೀಡಿದ್ದಕ್ಕಿಂತ ತೆಗೆದದ್ದೇ ಹೆಚ್ಚು ಎಂಬುದನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿರುಗೇಟು ಕೊಟ್ಟರು.
ಧಾರವಾಡ ಜಿಲ್ಲೆಯ ನವಲಗುಂದದ ಶಾಸಕರಾದ ಎನ್.ಎಚ್.ಕೋನರೆಡ್ಡಿ ಅವರು ತಮ್ಮ ಕ್ಷೇತ್ರದಲ್ಲಿ ಬಹುತೇಕ ರೈತರಿಗೆ ಮುಂಗಾರು ಬರ ಪರಿಹಾರವೇ ವಿತರಣೆ ಆಗಿಲ್ಲ ಎಂದು ಅಳಲು ತೋಡಿಕೊಂಡಿದ್ದನ್ನು ಉಲ್ಲೇಖಿಸಿ ಸರ್ಕಾರ ನಡೆ ಮೇಲೆ ಕಿಡಿ ಕಾರಿದ್ದಾರೆ.
ಮಳೆ ಹಾನಿ: ಉಡಾಫೆ ಉತ್ತರ ಕೊಡುತ್ತಿದ್ದೀರಿ: ಆರ್.ಅಶೋಕ
ಉತ್ತರ ಕರ್ನಾಟಕದಲ್ಲಿ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಬಗ್ಗೆ ತಮ್ಮ ಸರ್ಕಾರಕ್ಕೆ ಅರಿವಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಉಡಾಫೆ ಮಾತುಗಳು, ಹಾರಿಕೆ ಉತ್ತರಗಳು ರೈತರ ಸಮಸ್ಯೆ ಬಗೆಹರಿಸುವುದಿಲ್ಲ. ಕೃಷಿ ಸಚಿವರಾಗಿ ತಾವು ಎಷ್ಟು ಜಿಲ್ಲೆಗಳಿಗೆ ಭೇಟಿ ನೀಡಿದ್ದೀರಿ? ಯಾವ್ಯಾವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದೀರಿ?, ಬೆಳೆ ಹಾನಿ ಸಮೀಕ್ಷೆ ನಡೆಸಲು ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಆರ್.ಅಶೋಕ ಪ್ರಶ್ನಿಸಿದರು.
ಈ ಹಿಂದೆ ಅನೇಕ ಮುತ್ಸದ್ದಿಗಳು, ಹಿರಿಯರು ನಿರ್ವಹಿಸಿದ ಕೃಷಿ ಇಲಾಖೆ ಸಚಿವ ಸ್ಥಾನದಲ್ಲಿ ನೀವಿದ್ದೀರಿ. ಇಲಾಖೆಯ ಗಂಭೀರತೆ ಅರಿತು ಸ್ವಲ್ಪ ಜವಾಬ್ದಾರಿಯಿಂದ ನಡೆದುಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಅಭದ್ರವಾಗಿರುವ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯನವರ ಜೊತೆ ಇರಬೇಕೋ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಇರಬೇಕೋ ಎನ್ನುವ ತಳಮಳ, ಗೊಂದಲ ತಮ್ಮನ್ನು ಕಾಡುತ್ತಿದೆ ಎಂದು ಗೊತ್ತಿದೆ. ತಮಗೆ ನನ್ನ ಕಿವಿಮಾತು ಏನೆಂದರೆ ತಾವು ನಾಡಿನ ರೈತರ ಜೊತೆಗೆ ಇರಿ. ಆಗ ಎಲ್ಲವೂ ತಾನಾಗಿಯೇ ಸರಿಹೋಗುತ್ತದೆ. ತಮ್ಮ ಕರ್ತವ್ಯ ನಿರ್ವಹಣೆ ಮಾಡಿ ರೈತರಿಗೆ ನೆರವಾಗಿ. ಅದೇ ನಿಮ್ಮನ್ನು ಕಾಪಾಡುತ್ತದೆ ಎಂದು ಲೇವಡಿ ಮಾಡಿದರು.
ಕೃಷಿ ಸಚಿವರು ಹೇಳಿದ್ದೇನು?
ಮಳೆಯಿಂದ ಆದ ಹಾನಿ ಕುರಿತು ಮಾತನಾಡಿ ಬಿಜೆಪಿ ಕುರಿತು ಪ್ರತಿಕ್ರಿಯಿಸಿದ್ದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ನಮ್ಮ ಸರ್ಕಾರದ ಮೊದಲ ವರ್ಷದಲ್ಲಿ ಸಿದ್ದರಾಮಯ್ಯ ಅವರು ಆಗಿದ್ದಕ್ಕೆ ಬರಗಾಲ ಬಂದಿದೆ ಎನ್ನುತ್ತಿದ್ದವರು, ಈ ವರ್ಷ ಉತ್ತಮ ಮಳೆ ಆಗಿರುವುದನ್ನು ಸಹಿಸಲಾಗದೇ ಮೊಸರಲ್ಲಿ ಕಲ್ಲು ಹುಡುಕುವ ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು.
ಎಲ್ಲ ವಿಷಯದಲ್ಲಿಯೂ ರಾಜಕೀಯ ಮಾಡುವ ಸಂಕುಚಿತ ಮನಸ್ಥಿತಿಯನ್ನು ದಯವಿಟ್ಟು ಬಿಡಿ. ಪ್ರಕೃತಿಯ ಸಹಜ ಗುಣದಿಂದಾಗಿ ಇಂತಹ ಹವಾಮಾನ ವ್ಯತ್ಯಾಸಗಳಾಗುವುದು ಸಹಜ. ಅಕಾಲಿಕ ಮಳೆಯಿಂದಾದ ಪರಿಣಾಮದ ಬಗ್ಗೆ ನಮ್ಮ ಸರ್ಕಾರಕ್ಕೆ ಹಾಗೂ ಕೃಷಿ ಇಲಾಖೆಗೆ ಅರಿವಿದೆ. ಅಗತ್ಯ ಕ್ರಮವನ್ನೂ ಕೈಗೊಳ್ಳಲಾಗುತ್ತಿದೆ ಎಂದು ಸಬೂಬು ಹೇಳಿದ್ದರು.












Click it and Unblock the Notifications