Breaking; ಅನರ್ಹತೆ ದೂರು, ಜೆಡಿಎಸ್ನ ಇಬ್ಬರು ಶಾಸಕರಿಗೆ ನೋಟಿಸ್
ಬೆಂಗಳೂರು, ಅಕ್ಟೋಬರ್ 02; ಕರ್ನಾಟಕ ಜೆಡಿಎಸ್ನ ಇಬ್ಬರು ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಶಾಸಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಸೋಮವಾರ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಇಬ್ಬರು ಶಾಸಕರಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದಾರೆ. ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10ರಂದು ನಡೆದ ಚುನಾವಣೆಯಲ್ಲಿ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ಆರೋಪವಾಗಿದೆ.
ಕೋಲಾರದ ಶಾಸಕ ಕೆ. ಶ್ರೀನಿವಾಸ ಗೌಡ ಮತ್ತು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್. ಆರ್. ಶ್ರೀನಿವಾಸ್ಗೆ ನೋಟಿಸ್ ನೀಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಬಗ್ಗೆ ವಿವರಣೆ ಕೇಳಲಾಗಿದೆ.

ಅಡ್ಡ ಮತದಾನ ಮಾಡಿದ ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಜೆಡಿಎಸ್ ದೂರು ನೀಡಿತ್ತು. ಈ ದೂರಿನ ಹಿನ್ನಲೆಯಲ್ಲಿ ಶಾಸಕರಿಗೆ ನೋಟಿಸ್ ಕೊಡಲಾಗಿದೆ.
ವಿಧಾನಸಭೆಯಲ್ಲಿ ಜೆಡಿಎಸ್ ಸಚೇತಕರಾಗಿರುವ ವೆಂಕಟರಾವ್ ನಾಡಗೌಡ ವಿಧಾನಸಭೆ ಸ್ಪೀಕರ್ಗೆ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ದೂರು ನೀಡಿದ್ದರು. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಬೇರೆ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಿರುವುದಕ್ಕೆ ದಾಖಲೆಗಳನ್ನು ಲಗತ್ತಿಸಿದ್ದರು.
ಇಬ್ಬರು ಶಾಸಕರು ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಶ್ರೀನಿವಾಸ ಗೌಡ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.
ಕಾಂಗ್ರೆಸ್ ಸೇರುವ ಸುದ್ದಿ; ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ಕೋಲಾರದ ಶಾಸಕ ಕೆ. ಶ್ರೀನಿವಾಸ ಗೌಡ ಮತ್ತು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್. ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
ಸುಮಾರು 100ಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು ಎಸ್. ಆರ್. ಶ್ರೀನಿವಾಸ್ ಬೆಂಬಲಿಸಿ ಕಳೆದ ವಾರ ಜೆಡಿಎಸ್ ಸದ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಗುಬ್ಬಿಯಲ್ಲಿ ಕೆಲವು ತಿಂಗಳ ಹಿಂದೆ ಜೆಡಿಎಸ್ನ ಬೃಹತ್ ಸಮಾವೇಶ ನಡೆದಿತ್ತು. ಎಸ್. ಆರ್. ಶ್ರೀನಿವಾಸ್ ಈ ಸಮಾವೇಶದಲ್ಲಿ ಭಾಗವಹಿಸಿರಲಿಲ್ಲ.












Click it and Unblock the Notifications