ಚಿಕ್ಕಮಗಳೂರು; ಬಿಜೆಪಿ ತೊರೆದ ಶಾಸಕ ಸಿ. ಟಿ. ರವಿ ಆಪ್ತ!
ಚಿಕ್ಕಮಗಳೂರು ಬಿಜೆಪಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಆಪ್ತ ಹೆಚ್. ಡಿ. ತಮ್ಮಯ್ಯ ಬಿಜೆಪಿ ತೊರೆದಿದ್ದಾರೆ.
ಬೆಂಗಳೂರು, ಫೆಬ್ರವರಿ 16; ವಿಧಾನಸಭೆ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ಚಿಕ್ಕಮಗಳೂರು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ. ಟಿ. ರವಿ ಆಪ್ತರೊಬ್ಬರು ಪಕ್ಷ ತೊರೆದಿದ್ದಾರೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹೆಚ್. ಡಿ. ತಮ್ಮಯ್ಯ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾಗಿದ್ದ ತಮ್ಮಯ್ಯ ಶಾಸಕ ಸಿ. ಟಿ. ರವಿ ಆಪ್ತರು. ಸ್ಥಳೀಯ ರಾಜಕೀಯದಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಚಿಕ್ಕಮಗಳೂರು ನಗರಸಭೆ ಮಾಜಿ ಅಧ್ಯಕ್ಷರಾದ ಹೆಚ್. ಡಿ. ತಮ್ಮಯ್ಯ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೆಲವು ದಿನಗಳ ಹಿಂದೆ ಬೆಂಬಲಿಗರ ಜೊತೆ ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ ತಮಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದರು.

ಗುರುವಾರ ಹೆಚ್. ಡಿ. ತಮ್ಮಯ್ಯ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್. ಸಿ. ಕಲ್ಮುರುಡಪ್ಪಗೆ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. 17 ವರ್ಷಗಳಿಂದ ತಮ್ಮಯ್ಯ ಬಿಜೆಪಿಯಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು.
ರಾಜೀನಾಮೆ ಪತ್ರ; ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರು ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡುವ ಬಗ್ಗೆ ಎಂದು ವಿಷಯವನ್ನು ಪ್ರಸ್ತಾಪಿಸಿ ಹೆಚ್. ಡಿ. ತಮ್ಮಯ್ಯ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು 2007 ರಿಂದ ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಿಕೊಂಡು ಬಂದಿರುತ್ತೇನೆ. ಆದರೆ ನನಗೆ ಈಗಿನ ರಾಜಕೀಯ ವಿದ್ಯಮಾನಗಳು ಬೇಸರ ತರಿಸಿದ್ದು, ಆದ್ದರಿಂದ ಜಿಲ್ಲಾ ಪ್ರಕೋಷ್ಟಕ ಸಂಯೋಜಕರ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುತ್ತೇನೆ.
ನನಗೆ 17 ವರ್ಷಗಳಿಂದ ಸಹಕಾರ ನೀಡಿದ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಮಂಡಲ, ಮೋರ್ಚಾ ಪ್ರಕೋಷ್ಟಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಬಿಜೆಪಿಯ ಎಲ್ಲಾ ನನ್ನ ನೆಚ್ಚಿನ ಕಾರ್ಯಕರ್ತರು ಹಾಗೂ ಬಿಜೆಪಿಯ ಹಿರಿಯ ನಾಯಕರುಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೆಚ್. ಡಿ. ತಮ್ಮಯ್ಯ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಕೇಳಿದ್ದರು; ಹೆಚ್. ಡಿ. ತಮ್ಮಯ್ಯ ನಾಲ್ಕು ಬಾರಿ ನಗರಸಭೆ ಸದಸ್ಯರಾಗಿದ್ದರು. ಒಂದು ಬಾರಿ ನಗರಸಭೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಸಕ್ರಿಯವಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ ಅವರು ಮನವಿ ಮಾಡಿದ್ದರು.
ಹೆಚ್. ಟಿ. ತಿಮ್ಮಯ್ಯ ಮನವಿಗೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್. ಸಿ. ಕಲ್ಮುರುಡಪ್ಪ, "ಪ್ರಜಾಪ್ರಭುತ್ವದ ವ್ಯವಸ್ಥೆ ಇದು. ಪಕ್ಷ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಮುಂಬರುವ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಎಲ್ಲರೂ ಹುಮ್ಮಸ್ಸಿನಿಂದ ಕೆಲಸ ಮಾಡೋಣ" ಎಂದು ಹೇಳಿದ್ದರು.
ಸಿ. ಟಿ. ರವಿ ದೆಹಲಿಯಲ್ಲಿದ್ದು ತಮ್ಮ ಆಪ್ತ ಹೆಚ್. ಟಿ. ತಮ್ಮಯ್ಯ ರಾಜೀನಾಮೆ ಕುರಿತು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ರಾಜೀನಾಮೆ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರಲಿದೆಯೇ? ಎಂದು ಕಾದು ನೋಡಬೇಕಿದೆ.
ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಶಾಸಕ, ಮಾಜಿ ಸಚಿವ ಸಿ. ಟಿ. ರವಿಗೆ ಮತ್ತೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಸಿ. ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರು ಸದ್ಯ ರಾಜ್ಯ ರಾಜಕೀಯದಿಂದ ದೂರವಾಗಿದ್ದಾರೆ.












Click it and Unblock the Notifications