ಕೆಲ ನಾಯಕರ ಹೊಂದಾಣಿಕೆ ರಾಜಕಾರಣ ಬಿಜೆಪಿಗೆ ಮುಳುವಾಯಿತು: ಸಿಟಿ ರವಿ ಬೆರಳು ತೋರಿಸಿದ್ದು ಯಾರ ಕಡೆಗೆ?
ಬೆಂಗಳೂರು, ಜೂನ್ 10: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಬಿಜೆಪಿಯಲ್ಲಿ ಪರಾಮರ್ಶೆಗಳು ನಡೆಯುತ್ತಿವೆ. ಸೋಲಿನ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಕರ್ನಾಟಕ ಕೆಲ ಬಿಜೆಪಿ ನಾಯಕರ ಹೊಂದಾಣಿಕೆ ರಾಜಕೀಯದಿಂದ ತಮ್ಮ ಪಕ್ಷವು ಸೋಲು ಅನುಭವಿಸಿದೆ ಎಂದು ಆರೋಪಿಸಿದ್ದಾರೆ.
ಸಿಟಿ ರವಿ ಅವರ ಈ ಹೇಳಿಕೆಯು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿಯೊಳಗಿನ ಆಂತರಿಕ ಬೇಗುದಿ ಹೊರಬರುತ್ತಿದೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಪರಾಭವಗೊಂಡ ರವಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಅರ್ಕಾವತಿ ಲೇಔಟ್ ಡಿನೋಟಿಫಿಕೇಶನ್ ಮತ್ತು ಸೋಲಾರ್ ಹಗರಣದ ಬಗ್ಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಿಂದ ತನಿಖೆಗೆ ಏಕೆ ಆದೇಶಿಸಲಿಲ್ಲ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ. ಆ ಮೂಲಕ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ.
'ನಮ್ಮ ನಾಯಕರ ಹೊಂದಾಣಿಕೆ ಮತ್ತು ಹೊಂದಾಣಿಕೆ ರಾಜಕಾರಣ ಪಕ್ಷಕ್ಕೆ ಹಾನಿ ಮಾಡಿದೆ. ಕಾಂಗ್ರೆಸ್ ನಾಯಕರನ್ನು ಬಯಲಿಗೆಳೆದು ರಾಜಕೀಯ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ' ಎಂದು ಹೇಳಿದ್ದಾರೆ.
ವಿರೋಧ ಪಕ್ಷಗಳೊಂದಿಗಿನ ಹೊಂದಾಣಿಕೆ ರಾಜಕಾರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಕೇಳಿದಾಗ, 'ನಾನು ಅವರನ್ನು ಹೆಸರಿಸಲು ಸಾಧ್ಯವಿಲ್ಲ' ಎಂದು ತಿಳಿಸಿದ್ದಾರೆ.
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಕುರಿತು ನ್ಯಾಯಮೂರ್ತಿ ಕೆ ಎಸ್ ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿದ್ದೆವು. ಹಿಂದಿನ ಕಾಂಗ್ರೆಸ್ ಸರಕಾರ ಅರ್ಕಾವತಿ ಲೇಔಟ್ ಅಥವಾ ಸೋಲಾರ್ ಪಾರ್ಕ್ಗಳ ಹಂಚಿಕೆ ಬಗ್ಗೆ ನಮ್ಮ ಸರ್ಕಾರ ತನಿಖೆಗೆ ಆದೇಶಿಸಿದ್ದರೆ, ಈಗ ಪರಿಸ್ಥಿತಿ ವಿಭಿನ್ನವಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ.
ಅರ್ಕಾವತಿ ಹಗರಣ ಸೇರಿದಂತೆ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಎಲ್ಲ ಹಗರಣಗಳ ತನಿಖೆಗೆ ಆದೇಶಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಬಾರಿ ಹೇಳಿರುವುದನ್ನು ಗಮನಿಸಬಹುದು.
ಅರ್ಕಾವತಿ ಲೇಔಟ್ ಡಿನೋಟಿಫಿಕೇಶನ್ ಅಥವಾ ಲೇಔಟ್ ಮರುನಿರ್ಮಾಣದಲ್ಲಿ 8 ಸಾವಿರ ಕೋಟಿ ರೂ.ಗಳ ಹಗರಣವಾಗಿದೆ ಎಂದು ಅವರು ಆರೋಪಿಸಿದ್ದರು. ಆದರೆ, ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ತನಿಖೆಗೆ ಆದೇಶಿಸಿರಲಿಲ್ಲ.












Click it and Unblock the Notifications