ಹರಿಪ್ರಸಾದ್ ಟಾರ್ಗೆಟ್ 17 ಜನ ಶಾಸಕರಲ್ಲ, ಸಿದ್ದರಾಮಯ್ಯರೇ ಇವರಿಗೆ ಟಾರ್ಗೆಟ್: ಸಿ.ಟಿ.ರವಿ
ಬೆಂಗಳೂರು,ಜನವರಿ18: ವೇಶ್ಯೆಯರಂತೆ 17 ಜನ ಶಾಸಕ ಸ್ಥಾನವನ್ನ ಮಾರಿಕೊಂಡು ಬಿಜೆಪಿಗೆ ಹೋಗಿ ಸರ್ಕಾರ ರಚಿಸಿದ್ದರು ಎಂದು ಹೇಳಿಕೆ ನೀಡಿದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಧದಷ್ಟು ಕಾಂಗ್ರೆಸ್ಸಿಗರು ಮೂಲ ಕಾಂಗ್ರೆಸ್ಸಿಗರಲ್ಲ. ಅವರಿಗೆಲ್ಲಾ ಇವರು ಏನು ಹೇಳಲು ಬಯಸುತ್ತಾರೆ. ಹರಿಪ್ರಸಾದ್ ಟಾರ್ಗೆಟ್ 17 ಜನ ಶಾಸಕರಲ್ಲ ಬದಲಾಗಿ ಸಿದ್ದರಾಮಯ್ಯರೇ ಇವರಿಗೆ ಟಾರ್ಗೆಟ್ ಆಗಬೇಕು. ಇದೇ ಪದ ಅವರ ಪಕ್ಷದ ಲೀಡರ್ ಗೂ ಅನ್ವಯವಾಗುತ್ತಾ..? ಸಿದ್ದರಾಮಯ್ಯರನ್ನ ಟಾರ್ಗೆಟ್ ಮಾಡಲು ಇಂತಹ ಹೇಳಿಕೆ ನೀಡಿದ್ದಾರೆ. ಸಿದ್ಧರಾಮಯ್ಯ ಅವರು ಕೂಡ ಜನತಾ ಪರಿವಾರ ಬಿಟ್ಟು ಬಂದವರಲ್ಲವೇ ..? ಎಂದು ಟಾಂಗ್ ನೀಡಿದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದೇನು.?
ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನದಲ್ಲಿ ನೀವು ಐದು ವರ್ಷಗಳಲ್ಲಿ ತಮಗೆ ಬೇಕಾದ ಸರ್ಕಾರವನ್ನು ಆರಿಸಿ ಕಳುಹಿಸಬಹುದು. ಹಿಂದೆ ಬಹುಮತ ಬಾರದೆ ಬಿಜೆಪಿಯನ್ನು ನೀವು ತಿರಸ್ಕರಿಸಿದ್ದಾಗ ನಾವು ಸಮ್ಮಿಶ್ರ ಸರ್ಕಾರವನ್ನು ಮಾಡಿದ್ದೆವು. ಆದರೆ ಮೈ ಮಾರಿಕೊಳ್ಳುವ ಮಹಿಳೆಯನ್ನು ವೇಶ್ಯೆ ಎಂದು ಕರೆಯುತ್ತಾರೆ. ಆದರೆ ತಮ್ಮ ಸ್ವಾಭಿಮಾನ ಸೇರಿದಂತೆ ಎಲ್ಲವನ್ನು ಮಾರಟ ಮಾಡಿರುವ ಶಾಸಕರನ್ನು ನೀವು ಏನೆಂದು ಕರೆಯುತ್ತೀರಿ? ಈ ಶಾಸಕರಿಗೆ ನೀವು ಬರುವ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು. ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ, ಜನರ ಆರೋಗ್ಯ, ಶಿಕ್ಷಣ, ಉದ್ಯೋಗದ ಬಗ್ಗೆ ನಾವು ಮಾತನಾಡುತ್ತೇವೆ. ಜಾತಿ, ಮತ, ಧರ್ಮ, ಭಾಷೆ ವಿಚಾರವಾಗಿ ಮಾತನಾಡುವುದಿಲ್ಲ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದುರಂತದಂತೆ ಜಾತಿ, ಧರ್ಮ, ಭಾಷೆ ವಿಚಾರ ಪ್ರಮುಖವಾಗಿ ಚರ್ಚೆಯಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ ಎಂದು ಪಡೆದಿದ್ದ ಕೀರ್ತಿಯನ್ನು ಮತ್ತೆ ಪುನಸ್ಥಾಪಿಸಲು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಭಾರಿ ಬಹುಮತದಿಂದ ಆರಿಸಿ ಕಳುಹಿಸಬೇಕು. ಪ್ರಜಾಧ್ವನಿಗೆ ನೀವೆಲ್ಲರೂ ಆಶೀರ್ವಾದ ಮಾಡಬೇಕು ಎಂದು ಹೇಳಿದ್ದಾರೆ.












Click it and Unblock the Notifications