40 ವರ್ಷ ರಾಜಕೀಯ ಅನುಭವವಿರುವ ಸಿದ್ದರಾಮಯ್ಯ ಕ್ಷೇತ್ರ ಹುಡುಕುತ್ತಿರುವುದು ದುರಂತ: ಸಿ.ಟಿ.ರವಿ
ಚಿಕ್ಕಮಗಳೂರು,ಜನವರಿ 12: ಸಿದ್ಧರಾಮಯ್ಯಗೆ 40 ವರ್ಷದ ರಾಜಕೀಯ ಅನುಭವವಿದೆ. ಈಗಲೂ ಕ್ಷೇತ್ರದ ಹುಡುಕಾಟ ನಡೆಸುತ್ತಿರುವುದು ದುರಂತದ ವಿಚಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯಗೆ ಮೈಸೂರು ಭಾಗದಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ವಿಶ್ವಾಸ ಕಳೆದು ಕೊಂಡಿದ್ದಾರೆ. ಈಗ ಬಾದಾಮಿ ಕ್ಷೇತ್ರದಲ್ಲಿ ಎರಡನೇ ಬಾರಿ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿ ಕೋಲಾರ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಹೇಳಿದರು.
ಬಾದಾಮಿಯಲ್ಲಿ ಎರಡನೇ ಬಾರೀ ಗೆಲ್ಲುತ್ತೇನೆಂಬ ವಿಶ್ವಾಸ ಅವರಿಗಿಲ್ಲ. ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆ ಜನರು ತೀರ್ಮಾನ ಮಾಡುತ್ತಾರೆ. ಜನರ ತೀರ್ಮಾನಕ್ಕೆ ನಾನೇನು ಹೇಳೋಕೆ ಆಗುವುದಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಬಸ್ ಯಾತ್ರೆಗೆ ಸಿದ್ದರಾಮಯ್ಯ ಅವರು ಪೊರಕೆಯಲ್ಲಿ ಗುಡಿಸುವ ಮೂಲಕ ಚಾಲನೆ ನೀಡಿರುವ ಸಂಬಂಧ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಕಾಂಗ್ರೆಸನ್ನು ದೇಶದ ಜನರು ಗುಡಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ರಾಜ್ಯಗಳನ್ನೂ ಜನರು ಗುಡಿಸುತ್ತಿದ್ದಾರೆ ಎಂದು ಟೀಕಿಸಿದರು.

ಸ್ಯಾಂಟ್ರೋ ರವಿ ಪ್ರಕರಣ ಕುರಿತು ಮಾತನಾಡಿ ಅವರು, ಸ್ಯಾಂಟ್ರೋ ರವಿ ಬಿಜೆಪಿಯಲ್ಲಿದ್ದರೋ ಇಲ್ವೋ ನನ್ನ ಬಳಿ ಮಾಹಿತಿ ಇಲ್ಲ. ಆನ್ಲೈನ್ ಮೂಲಕ ಬಿಜೆಪಿ ಸದಸ್ಯತ್ವ ಪಡೆದಿರಬಹುದು(ಅದು ಮಾಹಿತಿ ಇಲ್ಲ) ಆದರೆ, ಪಕ್ಷದಲ್ಲಿ ಯಾವುದೇ ಜವಬ್ದಾರಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಾನೂನು ಬಿಜೆಪಿಯವರಿಗೊಂದು ಕಾಂಗ್ರೆಸ್ನವರಿಗೊಂದು ಎಂದು ಎಲ್ಲೂ ಇಲ್ಲ. ತಪ್ಪು ಯಾರು ಮಾಡಿದರೂ ಅದು ತಪ್ಪೇ, ಶಿಕ್ಷೆಯಾಗಲೇಬೇಕು. ಪೊಲೀಸ್ ತನಿಖೆ ಬಳಿಕ ಅವರ ಹಿಂದೆ ಯಾರು ಇದ್ದಾರೆ. ಯಾವ ಪಕ್ಷ ಇದೆ ಅನ್ನುವುದು ಗೊತ್ತಾಗುತ್ತದೆ. ಪ್ರಕರಣ ಮುಚ್ಚಿ ಹಾಕುವ ಅಥವಾ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನಿಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದರು.












Click it and Unblock the Notifications