ಬೀದರ್: ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ?
ಬೀದರ್: ರಾಜ್ಯದ ಉತ್ತರ ಭಾಗದ ತುತ್ತತುದಿಯ ಜಿಲ್ಲೆ ಬೀದರ್ನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಚಡಪಡಿಕೆ ಹೆಚ್ಚಾಗಿದೆ. ಜಿಲ್ಲೆಯ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಇನ್ನು ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಎಲ್ಲರ ಕುತೂಹಲ ಮೂಡಿಸಿದೆ.
ಬಸವ ಕಲ್ಯಾಣ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಂದ ಮಲ್ಲಿಕಾರ್ಜುನ ಖೂಬಾ ಅವರಿಗೆ ಬಿಜೆಪಿ ಮಣೆ ಹಾಕಿದೆ. ಇನ್ನು ಔರಾದ್ನಲ್ಲಿ ಶಾಸಕ ಪ್ರಭು ಚವಾಣ್ ಮತ್ತೆ ಅಖಾಡಕ್ಕಿಳಿದಿದ್ದಾರೆ.
ಬೀದರ್ ದಕ್ಷಿಣ ಕಾಂಗ್ರೆಸ್ ಟಿಕೆಟ್ಗೆ ಖೇಣಿ, ಚಂದ್ರಾಸಿಂಗ್ ಪೈಪೋಟಿ!
ಉಳಿದಂತೆ ಹುಮ್ನಾಬಾದ್, ಭಾಲ್ಕಿ, ಬೀದರ್ ಉತ್ತರ, ಬೀದರ್ ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಹೆಚ್ಚಿದೆ.
ಬಸವ ಕಲ್ಯಾಣದಲ್ಲಿ ಮಾರುತಿ ಮೂಳೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮರಾಠಾ ಸಮುದಾಯದ ಮತಗಳು ಇಲ್ಲಿ ಕೆಲಸ ಮಾಡುವುದರಿಂದ ಅವರಿಗೇ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ, ಮಲ್ಲಿಕಾರ್ಜುನ ಖೂಬಾ ಅವರ ಸೇರ್ಪಡೆಯಿಂದ ಟಿಕೆಟ್ ಅವರ ಕೈತಪ್ಪಿದೆ.
ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!
ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಅಶೋಕ್ ಖೇಣಿ ಅವರಿಗೆ ಎದುರಾಳಿಯಾಗುವ ಸಾಧ್ಯತೆ ಇದೆ.
ಹುಮ್ನಾಬಾದ್ನಲ್ಲಿ ಮಾಜಿ ಶಾಸಕ ಸುಭಾಷ್ ಕಲ್ಲೂರು, ಭಾಲ್ಕಿಯಲ್ಲಿ ಡಿ.ಕೆ. ಸಿದ್ರಾಮ ಮತ್ತು ಪ್ರಕಾಶ್ ಖಂಡ್ರೆ ಹೆಸರು ಚಾಲ್ತಿಯಲ್ಲಿದೆ.
ಬೀದರ್ ಉತ್ತರ ಕ್ಷೇತ್ರದಿಂದ ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಅವರ ಮಗ ಸೂರ್ಯಕಾಂತ ನಾಗಮಾರಪಳ್ಳಿ ಅವರ ಹೆಸರು ಬಹುತೇಕ ಖಚಿತವಾಗಿದೆ.
ಈಗಾಗಲೇ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿರುವ ಬಿಜೆಪಿ ಹಲವೆಡೆ ಟಿಕೆಟ್ ಆಕಾಂಕ್ಷಿಗಳ ಬಂಡಾಯ, ಪ್ರತಿಭಟನೆಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಉಳಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಾಗ ಮತ್ತಷ್ಟು ಎಚ್ಚರಿಕೆ ವಹಿಸಬೇಕಿರುವುದು ಅನಿವಾರ್ಯವಾಗಿದೆ.
ಸಂಭಾವ್ಯ ಹೆಸರುಗಳು ಚಾಲ್ತಿಯಲ್ಲಿದ್ದರೂ, ಕೆಲವೆಡೆ ಅಚ್ಚರಿಯ ಬದಲಾವಣೆಗಳನ್ನು ಅಲ್ಲಗಳೆಯುವಂತಿಲ್ಲ. ಗಡಿ ಜಿಲ್ಲೆಯಲ್ಲಿ ಬಿಜೆಪಿ ರಾಜಕೀಯ ನಡೆ ಏನಿರಲಿದೆ ಎಂಬ ಕುತೂಹಲ ಹೆಚ್ಚಿದೆ.