Cyclone Biparjoy: ಪ್ರವಾಸಿಗರೇ ಗಮನಿಸಿ: ರಾಜ್ಯದ ಸಮುದ್ರ ತೀರಗಳಿಗೆ ಇಲ್ಲ ಪ್ರವೇಶ
ಬಿಪರ್ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ. ಜೂನ್ 19ರವರೆಗೆ ಸಮುದ್ರ ಅಬ್ಬರಿಸಲಿದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಮೀನುಗಾರರಿಗೆ ಮಾತ್ರವಲ್ಲದೆ ಪ್ರವಾಸಿಗರು ಕೂಡ ಸಮುದ್ರ ತೀರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಮುಂದಿನ ಐದು ದಿನಗಳ ನೀವೇನಾದರೂ ಸಮುದ್ರ ತೀರಕ್ಕೆ ಭೇಟಿ ಕೊಡುವ ಯೋಜನೆ ಹಾಕಿಕೊಂಡಿದ್ದರೆ ಅದನ್ನು ಮುಂದೂಡುವುದು ಉತ್ತಮ.

ದಕ್ಷಿಣ ಕನ್ನಡ ಜಿಲ್ಲೆ 42 ಕಿಲೋ ಮೀಟರ್ ಕರಾವಳಿ ಪ್ರದೇಶವನ್ನು ಹೊಂದಿದ್ದು, ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ. ಚಂಡಮಾರುತದ ಅಲೆಗಳು 3 ರಿಂದ 4 ಮೀಟರ್ ನಷ್ಟು ಇರಲಿದ್ದು ಸಮುದ್ರದ ಸನಿಹ ಹೋಗುವುದು ಕೂಡ ಅಪಾಯಕಾರಿ.
ಜೂನ್ 19ರವರೆಗೆ ಸಮುದ್ರ ಪ್ರಕ್ಷುಬ್ದವಾಗಿರುವ ಕಾರಣ ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು, ಮಕ್ಕಳು, ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಸಮುದ್ರದ ಹತ್ತಿರ ಓಡಾಡುವುದು, ಆಟವಾಡುವುದನ್ನು ಕೂಡ ನಿಷೇಧಿಸಲಾಗಿದೆ. ಸಮುದ್ರ ತೀರದಲ್ಲಿ ಇದಕ್ಕೆ ಸಂಬಂಧಿಸಿದಂತೆ ಎಚ್ಚರಿಕೆಯ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಕಡಲಿನ ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದ್ದು, ಬೃಹತ್ ಕಲ್ಲುಗಳನ್ನು ಹಾಕಿದೆ.
ಜೂನ್ 19ರವರೆಗೆ ನಿರ್ಬಂಧ
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಮುದ್ರದ ಸಮೀಪ ಹೋಗುವದನ್ನೂ ಕೂಡ ನಿಷೇಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 42 ಕಿಮೀ ಕರಾವಳಿ ತೀರವನ್ನು ಹೊಂದಿದೆ. ಸಮುದ್ರದ ಎತ್ತರ 3 ರಿಂದ 4 ಮೀಟರ್ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದ್ದು, ಜೂನ್ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.
ಭಾರಿ ಮಳೆ ಸಾಧ್ಯತೆ
ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಗುಡುಗು, ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications