Rain Alert: ಫೆಂಗಲ್ ಚಂಡಮಾರುತ; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು, ಪುದುಚೆರಿ ತತ್ತರಿಸಿದೆ. ಶನಿವಾರ ರಾತ್ರಿ ತಮಿಳುನಾಡು, ಪುದುಚೆರಿ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತ ಶನಿವಾರ ರಾತ್ರಿ ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಚಳಿ ಹೆಚ್ಚಾಗಲಿದೆ. ತಾಪಮಾನ 20.6 ಡಿಗ್ರಿ ಸೆಲ್ಸಿಯಸ್ಗೆ ಕಡಿಮೆಯಾಗಲಿದೆ ಎಂದು ತಿಳಿಸಿದೆ.

ಎರಡು ದಿನ ಉತ್ತಮ ಮಳೆ
ಬೆಂಗಳೂರು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಫೆಂಗಲ್ ಚಂಡಮಾರುತ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದ್ದು ತಮಿಳುನಾಡು-ಪುದುಚೇರಿ ಕರಾವಳಿಯಲ್ಲಿ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಅಪ್ಪಳಿಸಲಿದೆ. ಈ ಸಂದರ್ಭದಲ್ಲಿ ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಕೆಎಸ್ಎನ್ಡಿಎಂಸಿ ಪ್ರಕಾರ, ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಲಿದೆ. ಆದರೆ 20.6 ಡಿಗ್ರಿ ಸೆಲ್ಸಿಯಸ್ಗೆ ತಾಪಮಾನ ಕಡಿಮೆಯಾಗಲಿದ್ದು ಚಳಿ ಹೆಚ್ಚಲಿದೆ. ಭಾನುವಾರದಂದು ಗರಿಷ್ಠ ತಾಪಮಾನ 24.6 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ 19.9 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಭಾನುವಾರ, ಸೋಮವಾರ ಮಳೆ
ಫೆಂಗಲ್ ಚಂಡಮಾರುತದ ಕಾರಣ ಭಾನುವಾರ ಮತ್ತು ಸೋಮವಾರ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರದಿಂದ ಮಂಗಳವಾರದವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ಶನಿವಾರ ಮಾಹಿತಿ ನೀಡಿದೆ.
ಶನಿವಾರ ಮಧ್ಯಾಹ್ನ ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತಾಪಮಾನ ಕಡಿಮೆಯಾಗಿರುವ ಕಾರಣ ಚಳಿ ಹೆಚ್ಚಾಗಿದೆ.












Click it and Unblock the Notifications