Cyclone: ಇನ್ನು ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ-7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕ, ಮೇ, 23: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಲೇ ಇದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಅವಾಂತರಗಳೇ ಸೃಷ್ಟಿಯಾಗಿ, ಜನರು ಪರದಾಡುವಂತಹ ಪರಿಸ್ಥಿತಿಗಳು ನಿರ್ಮಾಣವಾಗಿವೆ. ಇನ್ನು ಇಂದು ಇಂದು (ಮೇ 23) ಕೆಲವೇ ಕ್ಷಣಗಳಲ್ಲಿ ಚಂಡಮಾರುತದ ಪರಿಚಲನೆಯ ತೀವ್ರತೆಯ ಪರಿಣಾಮದಿಂದಾಗಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬೆಳಗ್ಗೆ ಇಲ್ಲ ಸಂಜೆ ವೇಳೆಗೆ ಮಳೆರಾಯ ಬಿಟ್ಟುಬಿಡದೇ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಮುಂದಿನ ದಿನಗಳಲ್ಲಿ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ತಿಳಿಸಿದೆ.

ಅದರಲ್ಲೂ ಚಂಡಮಾರುತ ಪರಿಣಾಮದಿಂದಾಗಿ ಇಂದು (ಮೇ 23) ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಬುಧವಾರ (ಮೇ 22) ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳ, ಸುಳ್ಯ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ತಲಾ 6 ಸೆಂ.ಮೀ. ಮಳೆ ಸುರಿದಿದೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರ 5, ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ 5, ಶಿವಮೊಗ್ಗದ ಹುಂಚದಕಟ್ಟೆಯಲ್ಲಿ 5 ಸೆಂಟಿ ಮೀಟರ್ ಮಳೆಯಾಗಲಿದೆ.
ಉತ್ತರ ಕನ್ನಡದ ಗೇರುಸೊಪ್ಪ 4, ಕೊಡಗು ಜಿಲ್ಲೆಯ ಹಾರಂಗಿ 4, ಶಿವಮೊಗ್ಗದ ತಾಳಗುಪ್ಪ 4, ಕೊಡಗು ಜಿಲ್ಲೆಯ ನಾಪೋಕ್ಲು 3, ಹಾಸನದ ಕೊಣನೂರು 3, ರಾಮನಗರ ಜಿಲ್ಲೆಯ ಮಾಗಡಿಯಲ್ಲಿ 3, ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ 3, ಉತ್ತರ ಕನ್ನಡದ ಗೋಕರ್ಣದಲ್ಲಿ 2, ಉಡುಪಿಯ ಕೊಲ್ಲೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ.












Click it and Unblock the Notifications