ಡಬಲ್ ಎಂಜಿನ್ ಸರ್ಕಾರದಿಂದ 'ಡಬಲ್ ಧೋಕಾ'- ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ನಿಂದ ಸ್ಪೋಟಕ ಮಾಹಿತಿ ಬಹಿರಂಗ
ಬೆಂಗಳೂರು, ಏಪ್ರಿಲ್ 26: ಡಬಲ್ ಇಂಜಿನ್ ಸರ್ಕಾರ ರಾಜ್ಯದ ಜನರಿಗೆ 'ಡಬಲ್-ಧೋಕಾ' ನೀಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆರೋಪಿಸಿದರು.
ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುರ್ಜೇವಾಲಾ, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದೆ. ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಲಾಗಿದ್ದ ಮೀಸಲಾತಿಯನ್ನು ಹಿಂಪಡೆದಿರುವುದಾಗಿ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ ಎಂದು ತಿಳಿಸಿದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ ಮೋಸ ಮಾಡಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಬಗ್ಗೆ ಒತ್ತಾಯ ಮಾಡಿದ್ದರು. ಅದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಅವರು ( ಬಿಜೆಪಿ ನಾಯಕರು ) ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸುರ್ಜೇವಾಲಾ ಹೇಳಿದರು.
'ಕಾಂಗ್ರೆಸ್ ಹೇಳಿದ್ದು ಯಾವಾಗಲೂ ನಿಜವಾಗಿದೆ. ಬೊಮ್ಮಾಯಿ ಮತ್ತು ಮೋದಿ ಸರ್ಕಾರಗಳು ಡಬಲ್ ಎಂಜಿನ್ 'ಧೋಕಾ' (ದ್ರೋಹ) ಮಾಡಿದೆ. ಲಿಂಗಾಯತರು, ಒಕ್ಕಲಿಗರು, ಎಸ್ಸಿ ಮತ್ತು ಎಸ್ಟಿಗಳು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರನ್ನು ಮೀಸಲಾತಿ ಹೆಸರಿನಲ್ಲಿ ದಾರಿ ತಪ್ಪಿಸಲಾಗಿದೆ' ಎಂದು ಸುರ್ಜೇವಾಲಾ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಹೇಳಿದ್ದೇನು?
ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕರ್ನಾಟಕದ ಜನರಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮೇ 13 ರಂದು ಬಿಜೆಪಿಯ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದರು.
ಮೀಸಲಾತಿ ವಿಚಾರದಲ್ಲಿ ಬಿಜೆಪಿ ವಿವಾದ ಸೃಷ್ಟಿಸಿದ್ದು, ಎಲ್ಲಾ ಸಮುದಾಯಗಳಿಗೆ ಮೋಸ ಮಾಡಲಾಗಿದೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ಕೇವಲ 40 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಹೇಳಿದರು.
ಬೊಮ್ಮಾಯಿ ಸರ್ಕಾರವು 'ವೋಟ್ ಬ್ಯಾಂಕ್ ರಾಜಕೀಯ' ಮಾಡುತ್ತಿದೆ. ಯಾರಿಗೂ ಮೀಸಲಾತಿ ಕೊಡದೇ ನಕಲಿ ಆಶ್ವಾಸನೆಗಳನ್ನು ನೀಡುತ್ತಿದೆ ಎಂದು ಶಿವಕುಮಾರ್ ಆರೋಪಿಸಿದರು.
ಬಿಜೆಪಿ ನಾಯಕರು ಮೀಸಲಾತಿ ವಿಚಾರದಲ್ಲಿ ಕರ್ನಾಟಕದ ಜನತೆಯನ್ನು ವಂಚಿಸುತ್ತಿದ್ದಾರೆ. ಸಮುದಾಯಗಳು ದಾನವನ್ನು ಬಯಸುತ್ತಿಲ್ಲ, ಆದರೆ ಕೋಟಾದ ಮೇಲಿನ ಹಕ್ಕಿಗಾಗಿ ಒತ್ತಾಯಿಸುತ್ತಿವೆ ಎಂದು ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications