ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಕಾಂಗ್ರೆಸ್ ಶಾಸಕ ಭವಿಷ್ಯ
ರಾಮನಗರ, ಜೂನ್ 22: ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿ ಅಂತಾ ಅವರ ಬೆಂಬಲಿಗರು ಹೇಳುತ್ತಿದ್ದಾರೆ. ಈ ನಡುವೆಯೇ ಇದೀಗ ರಾಮನಗರ ಕಾಂಗ್ರೆಸ್ ಶಾಸಕ ಮಾದಪ್ಪನ ಆಣೆಗೂ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂದು ಅಚ್ಚರಿ ಹೇಳಿಕೆ ನೀಡಿ ಕುತೂಹಲ ಹುಟ್ಟುಹಾಕಿದ್ದಾರೆ.
ರಾಜ್ಯದ ಮತ್ತೆ ಸಿಎಂ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಇನ್ನುಳಿದ ಎರಡೂವರೇ ವರ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು ಎಂದು ಹೇಳುತ್ತಿದ್ದಾರೆ. ಇದೇ ವಿಚಾರಕ್ಕೆ ಇದೀಗ ಪಕ್ಷದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಈ ನಡುವೆಯೇ ರಾಮನಗರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮುಂದಿನ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ 140 ಸೀಟ್ಗಳನ್ನು ಗೆದ್ದು ಸರ್ಕಾರ ರಚಿಸುತ್ತೇವೆ. ಆಗ ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಅಲ್ಲದೆ, ಗ್ಯಾರಂಟಿ ಯೋಜನೆಗಳನ್ನು ಕೊಡಲು ಸಾಧ್ಯವಿಲ್ಲ ಅಂತಲೂ ಹೇಳಿದ್ದರು. ಆದರೆ ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ ಎಂದು ಹೇಳಿದರು.
ನಮ್ಮ ಅವಧಿಯಲ್ಲಿ ನಾವು ಹೇಳಿದಂತೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಆದರೆ, ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ಏನು ಕೊಡುಗೆ ಕೊಟ್ಟಿದ್ದಾರೆ ಅದನ್ನ ಸಾಕ್ಷಿ ಮೂಲಕ ಹೇಳಲಿ ಸಾಕು. ಹೇಳಿಲಿಕ್ಕೆ ಇದ್ದರೆ ತಾನೇ ಹೇಳೊದು. ಏನು ಇಲ್ಲ ಬರಿ ಝಿರೋ ಅವರ ಕೊಡುಗೆ ಎಂದು ವಾಗ್ದಾಳಿ ನಡೆಸಿದರು.
ಚನ್ನಗಿರಿ ಕ್ಷೇತ್ರದ ಶಾಸಕ ಹೇಳಿದ್ದೇನು?: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ಹಲವು ಕಾಂಗ್ರೆಸ್ ಶಾಸಕರ ಆಸೆಯೂ ಸಹ ಆಗಿದೆ. ಈ ಹಿಂದೆಯಷ್ಟೇ ಚನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್ ಅವರು ಕೂಡ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ಕಷ್ಟ ಪಟ್ಟಿದ್ದಾರೆ. ಆದ್ದರಿಂದ ಅವರು ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದರು.
ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿ 136 ಕ್ಷೇತ್ರ ಗೆಲ್ಲುವಂತೆ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಅವರ ಸಾಮರ್ಥ್ಯ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅವರು ಪಕ್ಷಕ್ಕಾಗಿ ತುಂಬಾ ಕಷ್ಟಪಟ್ಟಿದ್ದು, ಅದಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗಲಿದೆ. ಹೈಕಮಾಂಡ್ ಈ ಎಲ್ಲವನ್ನೂ ಗಮನಿಸುತ್ತಿದೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಬೇಕೆಂದು ಎಂದು ಹೇಳಿ ಕುತೂಹಲ ಹುಟ್ಟುಹಾಕಿದ್ದರು.
ಇನ್ನೂ ಇದೀಗ ಕೆಲವರು ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು ಎಂದು ಹೇಳಿದರೆ, ಇನ್ನೂ ಕೆಲವರು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು ಎರಡೂವರೇ ವರ್ಷ, ಉಳಿದ ದಿನಗಳಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಮಾತು ಆಗಿತ್ತು. ಅದು ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.












Click it and Unblock the Notifications