ದಲಿತರಿಗೆ ಸಿಎಂ ಸ್ಥಾನ, ಸಿಎಂ ಸಿದ್ದರಾಮಯ್ಯ ಹೇಳುವುದೇನು?
ಬೆಂಗಳೂರು, ಫೆ. 20 : ದಲಿತರನ್ನು ಮುಖ್ಯಮಂತ್ರಿ ಮಾಡುವ ಬೇಡಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬೇಡಿಕೆ ಇಡುತ್ತಿರುವುದು ಮತ್ತು ಸಭೆ ನಡೆಸಿದವರು ಕಾಂಗ್ರೆಸ್ ಪಕ್ಷದವರಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 'ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಲು ಸಭೆ ನಡೆಸಿದವರು ಕಾಂಗ್ರೆಸ್ಸಿಗರಲ್ಲ. ಹೀಗಾಗಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ' ಎಂದರು. [ದಲಿತರಿಗೆ ಸಿಎಂ ಪಟ್ಟ, ಕಾಂಗ್ರೆಸ್ ನಾಯಕರು ಹೇಳುವುದೇನು?]

ಪಕ್ಷಕ್ಕೆ ಸಂಬಂಧಪಡದವರು ಸಭೆ ನಡೆಸಿದರೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಆದ್ದರಿಂದ ಈ ವಿಚಾರವನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತರುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. ಪಕ್ಷದ ಒಳಗಿನಿಂದ ದಲಿತ ಮುಖ್ಯಮಂತ್ರಿ ಬೇಡಿಕೆ ಬಂದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. [ಪರಮೇಶ್ವರ್ ಸಿಎಂ ಮಾಡಲು ದಲಿತ ಸಂಘಟನೆಗಳ ಗಡುವು]
ಉತ್ತರಿಸಲು ನಿರಾಕರಣೆ : ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ದಲಿತ ಸಂಘಟನೆಗಳ ಸಭೆಯ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದರು.
ಸಿಎಂ ಬೆಂಬಲಕ್ಕೆ ನಿಂತ ಸಚಿವರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಸಚಿವರು ನಿಂತಿದ್ದಾರೆ. 'ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆಗಾಗಿ ನಡೆಸಿದ ದಲಿತ ಸಂಘಟನೆಗಳ ಸಭೆಯಲ್ಲಿ ಪಾಲ್ಗೊಂಡವರಿಗೂ ಮತ್ತು ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಕಾಣದ ಕೈಗಳ ಕೈವಾಡ : 'ದಲಿತರನ್ನು ಸಿಎಂ ಮಾಡಿ ಎಂದು ಬೇಡಿಕೆ ಇಟ್ಟ ನಾಯಕರನ್ನು ನಾನು ಎಂದೂ ಕಾಂಗ್ರೆಸ್ ಕಚೇರಿಯಲ್ಲಿ ನೋಡಿಲ್ಲ. ಐಷಾರಾಮಿ ಹೋಟೆಲ್ನಲ್ಲಿ ಸಭೆ ನಡೆಸುವುದರ ಹಿಂದೆ ಕಾಣದ ಕೈಗಳ ಪ್ರಚೋದನೆ, ಪ್ರೋತ್ಸಾಹವಿರಬಹುದು' ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಇಂತಹ ಸಮಯದಲ್ಲಿ ಇಂತಹ ಚರ್ಚೆ ಅಪ್ರಸ್ತುತ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications