ದೆಹಲಿಯತ್ತ ಸಿಎಂ, ಡಿಸಿಎಂ: ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿವರೆಗೂ ರಹಸ್ಯ ಸಭೆ: ಚರ್ಚೆಯಾಗಿದ್ದೇನು?
ಬೆಂಗಳೂರು, ಜನವರಿ 5: ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಪದೇ ಪದೇ ಹಿರಿಯ ನಾಯಕರ ಮುನಿಸು ಹೆಚ್ಚಾಗುತ್ತಿದೆ. ಈಗಾಗಲೇ 3 ಡಿಸಿಎಂ ಸೃಷ್ಟಿ ವಿಚಾರವಾಗಿ ಹೆಚ್ಚು ಚರ್ಚೆಯಾಗುತ್ತಿದ್ದು, ಸದ್ಯ ಈ ವಿಚಾರವಾಗಿ ಹೈಕಮಾಂಡ್ ಸೈಲೆಂಟ್ ಆಗಿದೆ.
ಕಾಂಗ್ರೆಸ್ ಹೈಕಮಾಂಡ್ ಮುಂದಿನ ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಗೆ ತಯಾರಿ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಸಿದ್ದತೆ ನಡೆಸಿದೆ. ಇತ್ತ ರಾಜ್ಯದಲ್ಲಿ ಲೋಕಸಭಾ ಚುನಾವಣೆ ವಿಚಾರ ಹಾಗೂ ನಿಗಮ ಮಂಡಳಿ ವಿಚಾರವಾಗಿ ಹೈಕಮಾಂಡ್ ನಾಯಕರ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಗುರುವಾರ ದೆಹಲಿಗೆ ತೆರಳಿದ್ದಾರೆ. ಆದರೆ, ಗುರುವಾರ ತಡರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ರಹಸ್ಯ ಸಭೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ಅಸಮಾಧಾನಗೊಂಡಿರುವ ಸತೀಶ್ ಜಾರಕಿಹೊಳಿ ಈ ಹಿಂದೆಯೂ ಹಲವು ಶಾಸಕರ ಜೊತೆಗೆ ದುಬೈ ಪ್ರವಾಸ ಕೈಗೊಂಡಿದ್ದರು ಎಂಬ ಸುದ್ದಿಯಾಗಿತ್ತು. ಇತ್ತೀಚಿಗಷ್ಟೇ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿಮಾಡಿದ್ದ ಸತೀಶ್ ಜಾರಕಿಹೊಳಿ ಮೂರು ಡಿಸಿಎಂ ಹುದ್ದೆಯ ದಾಳ ಉರುಳಿಸಿದ್ದರು. ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಡಿಸಿಎಂ ಆಗಬೇಕು ಎಂದು ಚರ್ಚೆ ನಡೆಸಿದ್ದೇನೆ. ನಾನು ಡಿಸಿಎಂ ಆಗಬೇಕು ಎಂದು ಕಾರ್ಯಕರ್ತರು ಹಾಗೂ ಮಠಾಧೀಶರು ಒತ್ತಾಯಿಸುತ್ತಿರೋದನ್ನು ವರಿಷ್ಠರ ಗಮನಕ್ಕೆ ತಂದಿರೋದಾಗಿ ಹೇಳಿದ್ದರು.
ಇದೀಗ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ದೆಹಲಿ ಹೈಕಮಾಂಡ್ ನಾಯಕ ಭೇಟಿಗೆ ತೆರಳುತ್ತಿದ್ದಂತೆ ಇತ್ತ ರಾತ್ರೋರಾತ್ರಿ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಾ.ಹೆಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾತ್ರಿ 9 ಗಂಟೆಯಿಂದ 11 ಗಂಟೆಯವೆರೆಗೆ ರಹಸ್ಯವಾಗಿ ಮಾತುಕತೆ ನಡೆದಿದೆ.ಈ ಸಭೆಯಲ್ಲಿ ಭಾಗವಹಿಸಿದವರಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಪರಮೇಶ್ವರ್ ಅವರು ಡಿಸಿಎಂ ರೇಸ್ ನಲ್ಲಿ ನಲ್ಲಿದ್ದಾರೆ.
ಇನ್ನೂ ಕೆಲ ದಿನಗಳ ಹಿಂದೆಯಷ್ಟೇ ಸಹಕಾರ ಸಚಿವ ರಾಜಣ್ಣ ಕೂಡ ಬಹಿರಂಗವಾಗೇ ಮೂರು ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಒತ್ತಾಯಿಸುತ್ತಿದ್ದಾರೆ. ವೀರಶೈವ ಲಿಂಗಾಯತ, ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ವರ್ಗದವರಿಗೆ ಡಿಸಿಎಂ ಹುದ್ದೆ ನೀಡಬೇಕು. ಇದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಹೇಳೀದ್ದರು. ಇದೀಗ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿರುವವ ನಾಯಕರಲ್ಲಿ ಹಲವರು ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಡಿ ಕೆ ಶಿವಕುಮಾರ್ ಓಟಕ್ಕೆ ಬ್ರೇಕ್ ಹಾಕುವ ಕುರಿತು ಪ್ಲಾನ್ ನಡೆದಿದ್ಯಾ ಎಂಬ ಅನುಮಾನ ಶುರುವಾಗಿದೆ.
ಈ ಹಿಂದೆ ಸಿಎಂ ಹಾಗೂ ಡಿಸಿಎಂ ಆಯ್ಕೆ ವಿಚಾರದಲ್ಲಿ ಒಂದೇ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂದು ಡಿ ಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಮೇಲೆ ಸಾಕಷ್ಟು ಒತ್ತಡ ಹಾಕಿದ್ರು, ಅದರಂತೆಯೇ ಹೈಕಮಾಂಡ್ ಡಿ ಕೆ ಶಿವಕುಮಾರ್ ಒಬ್ಬರಿಗೆ ಡಿಸಿಎಂ ಸ್ಥಾನವನ್ನ ನೀಡಿತ್ತು. ಹೀಗಾಗಿ ಡಿಸಿಎಂ ಸ್ಥಾನದ ಮೇಲೆ ಕಣ್ಣೀಟ್ಟ ಸತೀಶ್ ಜಾರಕಿಹೊಳಿ ಅಸಮಾಧಾನಕ್ಕೆ ಕಾರಣವಾಗಿದ್ದು, ಡಿ ಕೆ ಶಿವಕುಮಾರ್ ಓಟಕ್ಕೆ ಬ್ರೇಕ್ ಹಾಕಲು ಚರ್ಚೆ ನಡೆದಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಕೊಳಿ, ರಾಜಣ್ಣ ಮೂರು ಡಿಸಿಎಂ ದಾಳ ಉರುಳಿಸಿದ್ದಾರೆ. ಒಂದು ವೇಳೆ ಮೂರು ಡಿಸಿಎಂ ಹುದ್ದೆ ಸೃಷ್ಟಿಯಾದ್ರೆ ಡಿಕೆ ಶಿವಕುಮಾರ್ ನಾಗಾಲೋಟಕ್ಕೆ ಬ್ರೇಕ್ ಬೀಳಲಿದೆ ಎಂಬುದು ಸಿದ್ದರಾಮಯ್ಯ ಬಣದ ಲೆಕ್ಕಾಚಾರವಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.












Click it and Unblock the Notifications