Darshan: ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಸತ್ಕಾರ: ಗೃಹ ಸಚಿವ ಪರಮೇಶ್ವರ್ ಹೇಳಿದೇನು?
ಬೆಂಗಳೂರು, ಜುಲೈ 02: ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡುತ್ತಿರುವ ಆರೋಪ ಕೇಳಿ ಬರುತ್ತಿದ್ದು, ದರ್ಶನ್ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ. ಬಿರಿಯಾನಿ ಅವೆಲ್ಲ ಏನೂ ಕೊಡುತ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ನನ್ನ ಜತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಪರಮೇಶ್ವರ್ ಹೇಳಿದರು.
ಈ ಕುರಿತು ಸದಾಶಿವನಗರದಲ್ಲಿ ಹೊಸ ಮೂರು ಅಪರಾಧ ಕಾನೂನು ಜಾರಿಯಾಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ ಅವರು, ಹೊಸ ಕಾನೂನುಗಳು ಒಂದು ರಾಜ್ಯಕ್ಕೆ ಮಾತ್ರ ಸಂಬಂಧಪಟ್ಟಿದ್ದರೆ ವಾಪಸ್ ಪಡೆಯುವಂತೆ ಹೇಳಬಹುದಿತ್ತು. ಇದು ಇಡೀ ದೇಶಕ್ಕೆ ಸಂಬಂಧಿಸಿದ್ದು. ಹೊಸ ಕಾನೂನು ಅಡಿ ರಾಜ್ಯದಲ್ಲಿ 80 ಪ್ರಕರಣಗಳು, ಬೆಂಗಳೂರು ನಗರದಲ್ಲಿ 25ಕ್ಕು ಹೆಚ್ಚು ಪ್ರಕರಣಗಳು ನಿನ್ನೆ ದಾಖಲಾಗಿವೆ. ಮುಂದೆ ಲಕ್ಷಾಂತರ ಕೇಸ್ಗಳು ದಾಖಲಾಗುತ್ತವೆ. ಇದೆಲ್ಲವನ್ನು ಹೊಸ ಕಾನೂನಿನ ಅಡಿ ದಾಖಲಿಸಬೇಕು. ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು ಕಲಿತುಕೊಳ್ಳುತ್ತಾರೆ ಎಂದರು.

ಉಪವಾಸ ಸತ್ಯಾಗ್ರಹ ಮಾಡಿದರೆ ಆತ್ಮಹತ್ಯೆ ಪ್ರಕರಣ ದಾಖಲಾಗುವ ಕುರಿತು ಮಾತನಾಡಿ, ಹೀಗೆ ಅನೇಕ ವಿಚಾರಗಳ ಕುರಿತು ಡಿಬೇಟ್ ಮಾಡಬಹುದು. ಕೆಲವು ಉತ್ತಮವಾದ ಅಂಶಗಳು ಇವೆ. ಎಲ್ಲವನ್ನು ತೆಗೆದು ಹಾಕಲು ಆಗುವುದಿಲ್ಲ. ಬ್ರಿಟಿಷ್ ಕಾಲದಲ್ಲಿ ಇದ್ದ ಕಾನೂನುಗಳನ್ನು ಬದಲಾವಣೆ ಮಾಡಿ, ಆಧುನಿಕ ಜಗತ್ತಿಗೆ ಬೇಕಾದ ಕಾನೂನುಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಕೆಲವನ್ನು ನಾನು ಈಗಲೇ ಹೇಳುವುದಿಲ್ಲ. ಹೇಳಿದರೆ ಬೇರೆ ರೀತಿಯ ಅರ್ಥ ಬರುತ್ತದೆ. ಕೆಲವು ಕಾನೂನಿನ ಪ್ರಾವಿಷನ್ಸ್ ಸರಿಯಾಗಿ ಕಾಣಿಸುವುದಿಲ್ಲ. ಈ ಹಿಂದೆ ದಾಖಲಿಸುತ್ತಿದ್ದ ಪ್ರಕರಣಗಳು, ಈಗ ದಾಖಲಿಸಬೇಡಿ ಎಂಬರ್ಥದಲ್ಲಿವೆ. ಅವುಗಳ ಬಗ್ಗೆ ಚರ್ಚೆಯಾಗಬೇಕಿದೆ ಎಂದರು. ನಾವು ಕೆಲವು ವ್ಯಕ್ತಿಗಳನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ತನಿಖೆ ನಡೆಯುತ್ತಿದೆ. ಅಂತವುಗಳನ್ನು ಬಿಟ್ಟು ಬಿಡಬೇಕು ಎಂದು ಹೊಸ ಕಾನೂನಿನಲ್ಲಿ ಬಂದಿದೆ. ಮುಂದೆ ಅಂತಹ ಪ್ರಕರಣ ಬಂದಾಗ ದಾಖಲಿಸಬೇಡಿ ಎಂಬ ಲೆಕ್ಕದಲ್ಲಿವೆ. ಆದ್ದರಿಂದ ಇಂತಹ ವಿಚಾರಗಳ ಬಗ್ಗೆ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಾಗುತ್ತದೆ. ಇದರಂತೆ ಸರಿಪಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಮೂಡಾ ಅಕ್ರಮದ ಕುರಿತು ಮಾತನಾಡಿ, ಸಾಕ್ಷ್ಯಗಳನ್ನು ನಾಶ ಮಾಡುತ್ತಾರೆ ಎಂಬ ಕಾರಣದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ. ಆರೋಪಗಳು ಕೇಳಿ ಬಂದಾಗ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದು. ಮುಂದೆ ಇಲಾಖಾ ವಿಚಾರಣೆಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದರೆ, ಪೊಲೀಸ್ ತನಿಖೆಗೆ ವಹಿಸುವ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೆಚ್.ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿ, ಕೆಲವರು ಹೇಳಿದ್ದೆಲ್ಲವು ಸತ್ಯವಲ್ಲ. ತನಿಖೆ ಮಾಡಿ, ಸತ್ಯಾಂಶಗಳು ಬೆಳಕಿಗೆ ಬಂದ ನಂತರ ಯೋಚಿಸೋಣ ಎಂದರು.












Click it and Unblock the Notifications