ದತ್ತಪೀಠ ವಿವಾದ: ಪರಿಹಾರಕ್ಕಾಗಿ ಸರ್ಕಾರಕ್ಕೆ ಆರು ವಾರ ಕಾಲಾವಕಾಶ
ಬೆಂಗಳೂರು,ಜೂ.1: ಚಿಕ್ಕಮಗಳೂರಿನ ಬಾಬಾಬುಡನಗಿರಿ ದತ್ತಾತ್ರೇಯ ಪೀಠದ ವಿವಾದ ಸಂಬಂಧ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಹೈಕೋರ್ಟ್ ಸರ್ಕಾರಕ್ಕೆ ಆರು ವಾರ ಕಾಲಾವಕಾಶ ನೀಡಿದೆ. ಹಾಗಾಗಿ ಅಷ್ಟರಲ್ಲಿ ಸರ್ಕಾರ ಯಾವುದಾದರೊಂದು ತೀರ್ಮಾನವನ್ನು ಕೈಗೊಳ್ಳಲೇಬೇಕಾಗಿದೆ.
ಸರ್ಕಾರವೇ ಆರು ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ನ್ಯಾಯಪೀಠಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಆಷ್ಟು ಸಮಯವನ್ನು ನೀಡಿ, ಆ ಸಂಬಂಧ ಸಮಿತಿ ಕೈಗೊಳ್ಳುವ ನಿರ್ಣಯದ ವರದಿ ಸಲ್ಲಿಸಲು ಆದೇಶ ನೀಡಿದೆ.
ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯಕ್ಕಾಗಿ ಮುಜಾವರ್ ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಿ ಏಕಸದಸ್ಯಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಷಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಕುರಿತು ಹಿರಿಯ ನ್ಯಾಯಮೂರ್ತಿ ಆಲೋಕ್ ಆರಾಧೆ ಮತ್ತು ನ್ಯಾ. ಜೆ.ಎಂ. ಖಾಜಿ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಹೈಕೋರ್ಟ್ ಏನು ಹೇಳಿದೆ?
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು 6 ವಾರಗಳ ಮುಂದೂಡಿ ರಾಜ್ಯ ಸರ್ಕಾರ ಸಲ್ಲಿಸುವ ನಿರ್ಣಯವು ಮೇಲ್ಮನವಿಯ ಅಂತಿಮ ಫಲಿತಾಂಶಕ್ಕೆ ಒಳಪಡಲಿದೆ. ಸರ್ಕಾರದ ನಿರ್ಣಯದ ಬಗ್ಗೆ ಆಕ್ಷೇಪ ಎತ್ತಲು ಉಭಯ ಪಕ್ಷಗಾರರು ಮುಕ್ತರಾಗಿರುತ್ತಾರೆ. ವಿವಾದಿತ ಸ್ಥಳದಲ್ಲಿ ಈಗಿರುವ ಸ್ಥಿತಿಯಲ್ಲಿ ಏನಾದರೂ ಬದಲಾವಣೆಯಾದರೆ ಆ ಬಗ್ಗೆ ಸೂಕ್ತ ಮನವಿ ಸಲ್ಲಿಸಲು ಸ್ವತಂತ್ರರು ಎಂದು ನ್ಯಾಯಪೀಠ ಹೇಳಿದೆ.
ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ಕೆ. ನಾವದಗಿ ಸರ್ಕಾರದ ಪರ ವಾದಿಸಿ, ಏಕಸದಸ್ಯಪೀಠದ ಆದೇಶ ಪಾಲನೆ ಮಾಡಲು ರಾಜ್ಯ ಸರ್ಕಾರ ಮೂವರು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿ ರಚಿಸಿದೆ. ಈ ಉಪ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಗೃಹ ಹಾಗೂ ಮುಜರಾಯಿ ಇಲಾಖೆ ಸಚಿವರಿದ್ದಾರೆ. ಈ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ಕೊಟ್ಟು ಎರಡೂ ಕಡೆಯ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿದೆ. ಎರಡೂ ಪಕ್ಷಗಾರರ ನಡುವಿನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ 6 ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಆದ್ದರಿಂದ ಪ್ರಕರಣದ ವಿಚಾರಣೆ 6 ವಾರ ಮುಂದೂಡಬೇಕೆಂದು ಮನವಿ ಮಾಡಿದರು.
ಮೇಲ್ಮನವಿದಾರರ ಪರ ವಕೀಲರು, ಈಗಿರುವ ರೀತಿಯಲ್ಲಿಯೇ ಜಾತ್ಯಾತೀತ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಅನುಮತಿಸಬೇಕು ಎಂದು ಕೋರಿದರು.
ಅದಕ್ಕೆ, ಅಡ್ವೋಕೇಟ್ ಜನರಲ್ , ಸಚಿವ ಸಂಪುಟದ ಉಪ ಸಮಿತಿಯ ನಿರ್ಣಯ ಸಲ್ಲಿಕೆಯಾಗುವ ತನಕ ವಿವಾದ ಪೂಜಾ ಸ್ಥಳದ ಧಾರ್ಮಿಕ ಚಟುವಟಿಕೆಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪವೂ ಮಾಡುವುದಿಲ್ಲ, ಈಗಿರುವುದನ್ನು ಬದಲಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿವಾದ ಹಿನ್ನೆಲೆ:
ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಹಿಂದೂ ಸಂಪ್ರದಾಯದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಸ್ಲಿಂ ಸಮುದಾಯದ ಮುಜಾವರ್ ನೇಮಕ ಮಾಡಿ ರಾಜ್ಯ ಸರ್ಕಾರ 2018 ರ ಮಾ.19ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಸರ್ಕಾರದ ಆದೇಶವನ್ನು ರದ್ದುಪಡಿಸಿ 2021ರ ಫೆ 28ರಂದು ಆದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ನ್ಯಾ. ನಾಗಮೋಹನ್ದಾಸ್ ಸಮಿತಿಯ ವರದಿಯನ್ನು ಪರಿಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಕಾನೂನು ರೀತಿ ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಷಾ ಖಾದ್ರಿ ಮೇಲ್ಮನವಿ ಸಲ್ಲಿಸಿದ್ದರು.