D.K Shivakumar:'ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶ್ವವಿದ್ಯಾನಿಲಯಗಳ ಭವಿಷ್ಯ ನಿರ್ಧಾರ'
ಬೆಂಗಳೂರು, ಫೆಬ್ರವರಿ 14: ಈ ಹಿಂದಿನ ಸರ್ಕಾರ ಸ್ಥಾಪಿಸಿರುವ 10 ವಿಶ್ವವಿದ್ಯಾಲಯಗಳನ್ನು ಮುಚ್ಚಬೇಕೋ? ಬೇಡವೋ? ಎನ್ನುವುದರ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದು, ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ರಾಜ್ಯದ ವಿಶ್ವವಿದ್ಯಾನಿಲಯಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆಯ ತೀರ್ಮಾನಗಳ ಬಗ್ಗೆ ಮಾತನಾಡಿದ ಅವರು, ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ ವಿಶ್ವವಿದ್ಯಾನಿಲಯಗಳಿಗೆ ಕೇವಲ 2 ಕೋಟಿ ಹಣ ಮೀಸಲಿಟ್ಟಿದ್ದರು. ಯಾವುದೇ ಜಮೀನು ನೀಡಿರಲಿಲ್ಲ. ಮಂಡ್ಯ, ಚಾಮರಾಜನಗರ ಭಾಗದಲ್ಲಿ ಎಲ್ಲರೂ ಮೈಸೂರು ವಿವಿಗೆ ಮೊದಲ ಆದ್ಯತೆ ನೀಡಿದ ಪರಿಣಾಮ ಇತರೇ ವಿವಿಗಳಲ್ಲಿ ಪ್ರವೇಶಾತಿ ಕುಸಿತವಾಗಿತ್ತು. ಈ ಬಗ್ಗೆ ಆಂತರಿಕ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು.

ಮುಖ್ಯಮಂತ್ರಿಗಳು ನನ್ನ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ರಚಿಸಿದ್ದರು. ಈ ಬಗ್ಗೆ ನಾವು ಚರ್ಚೆ ಮಾಡಿ, ಬಂದಿರುವ ಸಲಹೆಗಳನ್ನು ಪರಾಮರ್ಶಿಸಿದ್ದೇವೆ. ಈ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು. ಸದ್ಯ ಮಾಹಿತಿ ನೀಡಲು ಆಗಿಲ್ಲ. ಮಾಹಿತಿ ನೀಡಿದ ನಂತರ ಸಚಿವ ಸಂಪುಟ ಸಭೆಯಲ್ಲಿ ಇಡುತ್ತೇವೆ. ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದರು.
ರಾಜ್ಯ, ವಿವಿಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ. ಈ ವಿಚಾರದಲ್ಲಿ ಯಾವುದೇ ವೈಯಕ್ತಿಕ ಉದ್ದೇಶವಿಲ್ಲ. ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯ. ಪ್ರಾಧ್ಯಾಪಕರು ಮಂಡ್ಯ, ಚಾಮರಾಜನಗರಕ್ಕೆ ಹೋಗಲು ತಯಾರಿಲ್ಲ. ಅವರು ತಮ್ಮ ಹಿರಿತನ ಹಾಗೂ ಪಿಂಚಣಿ ವ್ಯವಸ್ಥೆ ಗಮನದಲ್ಲಿಟ್ಟಕೊಂಡು ಹಿಂಜರಿಯುತ್ತಿದ್ದಾರೆ. ಈ ವಿಚಾರವಾಗಿ ಬಂದಿರುವ ಸಲಹೆಗಳನ್ನು ಚರ್ಚೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.












Click it and Unblock the Notifications