ಎತ್ತಿನಹೊಳೆ ಯೋಜನೆ ಚಾಲನೆ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಡಿಸಿಎಂ ಡಿಕೆಶಿ
Yettinahole Project: ಗಣೇಶ ಚತುರ್ಥಿಗೆ ಇನ್ನೂ ಕೆಲವೇ ದಿನಗಳಷ್ಟೇ ಬಾಕಿ ಇದೆ. ಹಬ್ಬದ ದಿನದಂದೇ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 1) ಮಾತನಾಡುತ್ತಾ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸೆಪ್ಟೆಂಬರ್ 6ರಂದು ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಜಲಸಂಪನ್ಮೂಲ ಹೇಳಿದರು. ಗೌರಿಹಬ್ಬದ ದಿನ ಮಧ್ಯಾಹ್ನದ ವೇಳೆಗೆ ಈ ಯೋಜನೆಗೆ ಚಾಲನೆ ನೀಡುತ್ತೇವೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ನೀರು ಹರಿಯಲಿದೆ. ಪಕ್ಷ ಭೇದ ಮರೆತು ರೈತರಿಗೆ ಒಳ್ಳೆಯದಾಗಲಿ ಎಂದು ಕೈಜೋಡಿಸಬೇಕು ಎಂದು ಹೇಳಿದರು.

"ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರು ನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ," ಎಂದು ತಿಳಿಸಿದರು.
ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಇದೀಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ಹೇಳಿದರು.
"ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.












Click it and Unblock the Notifications