'ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ; ಇನ್ನೆಷ್ಟು ದಿನ ಸುಮ್ಮನೆ ಕೂರಬೇಕು?'
ಬೆಂಗಳೂರು, ಫೆಬ್ರವರಿ 05: ಕೋವಿಡ್ ಸಮಯದಲ್ಲಿ, ರೈತರು ಹಾಗೂ ಜಿಎಸ್ ಟಿ ವಿಚಾರದಲ್ಲಿ, ಕೇಂದ್ರದ ಯೋಜನೆಗಳ ಅನುದಾನದಲ್ಲಿ, ಬರ ಪರಿಹಾರ, ನರೇಗಾ ಯೋಜನೆ ಹಾಗೂ ನಿರಾವರಿ ಇಲಾಖೆ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯವನ್ನು ನೋಡಿಕೊಂಡು ಇನ್ನೆಷ್ಟು ದಿನ ಸುಮ್ಮನೆ ಕೂರಬೇಕು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಪತ್ರಿಕಾಗೋಷ್ಠಿ ನಡೆಸಿದ ಶಿವಕುಮಾರ್ ಅವರು ಮಾತನಾಡಿ, "ರಾಜ್ಯದ ಹಿತ ಕಾಯುವ ಹೋರಾಟಕ್ಕೆ ನಾವೆಲ್ಲರೂ ಒಟ್ಟಾಗಿ ಹೆಜ್ಜೆ ಇಡಬೇಕಿದೆ. ರಾಜ್ಯದ ಜನ ನಮಗೆ ಅವಕಾಶ ಕೊಟ್ಟಿದ್ದು ಅವರಿಗೆ ನ್ಯಾಯ ಒದಗಿಸಿ ಋಣ ತೀರಿಸುವುದು ನಮ್ಮ ಕರ್ತವ್ಯ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ ಸಮನ್ವಯತೆಯಿಂದ ನಡೆದುಕೊಂಡು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಮಾಡುತ್ತಿರುವ ಅನ್ಯಾಯವನ್ನು ಪ್ರತಿ ವರ್ಷ ಗಮನಿಸುತ್ತಿದ್ದೇವೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲೂ ಡಬಲ್ ಇಂಜಿನ ಸರ್ಕಾರ ಬಂದರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಹೇಳುತ್ತಿದ್ದರು. ಮಧ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಕೂಡ ಇತ್ತು. ನಮ್ಮ ಸರ್ಕಾರ ಬಂದ ನಂತರ ಕೇಂದ್ರ ಬಜೆಟ್ ನಲ್ಲಿ ನ್ಯಾಯ ಒದಗಿಸುತ್ತಾರೆ ಎಂದು ನಾವು ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಘೋಷಣೆಯಾದ ನೀರಾವರಿ ಇಲಾಖೆಯ ಅನುದಾನವನ್ನಾದರೂ ಬಿಡುಗಡೆ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಅವರು ನುಡಿದಂತೆ ನಡೆಯುತ್ತಾರೆ ಎಂದು ನಂಬಿಕೆ ಇಟ್ಟಿದ್ದೆವು. ಆದರೆ ನಮ್ಮ ನಂಬಿಕೆ, ನಿರೀಕ್ಷೆ ಹುಸಿಯಾಯಿತು.
ರಾಜ್ಯದಿಂದ ಕೇಂದ್ರಕ್ಕೆ ಹೋಗುತ್ತಿರುವ ಸಂಪನಲ್ಲಿ ರಾಜ್ಯಕ್ಕೆ ಸಿಗಬೇಕಾದ ಪಾಲು ನ್ಯಾಯಯುತವಾಗಿ ಸಿಗುತ್ತದೆ ಎಂದು ಭಾವಿಸಿದ್ದೆವು. ನಾವು ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದರೂ ನಮಗೆ ಕೇಂದ್ರದಿಂದ ಸಿಗುವ ಅನುದಾನದಲ್ಲಿ ತೀರಾ ಅನ್ಯಾಯವಾಗಿದೆ. ನಮಗಿಂತ ಕಡಿಮೆ ತೆರಿಗೆ ಪಾವತಿಸುವ ಉತ್ತರ ಭಾರತದ ರಾಜ್ಯಗಳಿಗೆ ನಮಗಿಂತ ಹೆಚ್ಚಿನ ಪಾಲು ನೀಡಲಾಗುತ್ತಿದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತಿ ಈ ಬಗ್ಗೆ ದೇಶ ಹಾಗೂ ರಾಜ್ಯದ ಜನರಿಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಫೆ.7ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ.
ಈ ಪ್ರತಿಭಟನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ಸಂಸದರು ಭಾಗವಹಿಸಬೇಕು ಎಂದು ಆಹ್ವಾನ ನೀಡುತ್ತೇನೆ. ಆಮೂಲಕ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಈಗಲಾದರೂ ಕೇಂದ್ರ ಸರ್ಕಾರದ ಕಣ್ಣು ಹಾಗೂ ಹೃದಯ ತೆರೆಸಬೇಕು. ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸರ್ಕಾರದ ವತಿಯಿಂದ ಪತ್ರ ಬರೆದಿದ್ದೇವೆ. ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ನಾವು ಕೇಂದ್ರ ಸಚಿವರನ್ನು ಭೇಟಿ ಮಾಡಿ ವಿವರಿಸಿ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಬರಗಾಲದಿಂದ 223 ತಾಲೂಕುಗಳು ಬರಕ್ಕೆ ತುತ್ತಾಗಿವೆ. ಇದುವರೆಗೂ ಬರಗಾಲದ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು.

ನರೇಗಾ ಯೋಜನೆಯಲ್ಲಿ ನೀಡಲಾಗುವ 100 ಮಾನವ ಕೂಲಿ ದಿನಗಳ ಪ್ರಮಾಣವನ್ನು ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳಿಗೆ ಏರಿಕೆ ಮಾಡಬಹುದು ಎಂದು ಕಾನೂನಿನಲ್ಲಿ ಇದೆ. ಅದನ್ನೂ ಅವರು ನೀಡುತ್ತಿಲ್ಲ. ನಿರಂತರವಾಗಿ ಇಷ್ಟೋಂದು ಅನ್ಯಾಯವಾದರೂ ನಾವು ಇನ್ನೆಷ್ಟು ದಿನ ನೋಡಿಕೊಂಡು ಸುಮ್ಮನೆ ಕೂರಬೇಕು. ನ್ಯಾಯಕ್ಕಾಗಿ, ಜನರ ಬದುಕಿಗಾಗಿ, ಜನರಿಗೆ ಆರ್ಥಿಕ ಶಕ್ತಿ ತುಂಬಲು ಈ ಹೋರಾಟಕ್ಕೆ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು.












Click it and Unblock the Notifications