E Khata: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಜು.1 ರಿಂದ ಮನೆ ಬಾಗಿಲಿಗೆ ಇ-ಖಾತಾಅಭಿಯಾನ ಆರಂಭ.!
ಬೆಂಗಳೂರು, ಜೂನ್ 18: ಬೆಂಗಳೂರಿನಲ್ಲಿ ಆಸ್ತಿ ಖಾತಾ ದಾಖಲೆ ಆಂದೋಲನ ರೂಪಿಸಲಾಗಿದ್ದು, ಜುಲೈ ತಿಂಗಳಿನಿಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದ್ದು, 25 ಸಾವಿರ ಆಸ್ತಿಗಳ ಖಾತಾ ದಾಖಲೆಗಳು ಸಿದ್ಧಗೊಂಡಿದ್ದು, ಜುಲೈ ಒಂದರಿಂದ ಇಡೀ ತಿಂಗಳು ಈ ಆಸ್ತಿ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಮನೆಗಳು ಆಸ್ತಿಗಳಿದ್ದು, ಈ ಪೈಕಿ 5 ಲಕ್ಷ ಮಂದಿ ದಾಖಲೆ ಅಪ್ ಲೋಡ್ ಮಾಡಿದ್ದಾರೆ. ಇನ್ನು 20 ಲಕ್ಷ ಆಸ್ತಿಗಳ ದಾಖಲೆ ಬಾಕಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜುಲೈ 1 ರಿಂದ ಇ ಖಾತಾ ವಿಚಾರವಾಗಿ ಆಂದೋಲನ ಮಾಡಲಾಗುವುದು. ಆಮೂಲಕ ಖಾಸಗಿ ಆಸ್ತಿ ಮಾಲೀಕರು ಜಾಗೃತಿ ವಹಿಸಿ, ತಮ್ಮ ದಾಖಲೆಗಳನ್ನು ನೀಡಿ ಇ ಖಾತಾ ಮಾಡಿಸಿಕೊಳ್ಳಲು ಒಂದು ತಿಂಗಳ ಕಾಲ ಆಂದೋಲನ ಹಮ್ಮಿಕೊಳ್ಳಲಾಗುವುದು. ಈ ವಿಚಾರವಾಗಿ ಮನೆ ಮನೆ ಪ್ರಚಾರ, ಜಾಹೀರಾತು ಸೇರಿದಂತೆ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು.

ಬಿ ಖಾತಾ ನೀಡುವ ವಿಚಾರವಾಗಿ ಚರ್ಚೆ ಮಾಡಲಾಯಿತೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಕಾನೂನು ಆಯಾಮಗಳ ಚರ್ಚೆ ಮಾಡಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್ ಸಿಎಲ್ ಗೆ ಅರ್ಜಿ ಹಾಕಲು ಕೆಎಂಎಫ್ ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್ ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್ ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.
ಇಂದು ಬೆಂಗಳೂರು ನಗರದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಪಕ್ಷ ಸಂಘಟನೆ ವಿಚಾರ ಹಾಗೂ ಪಾಲಿಕೆ ಚುನಾವಣೆ ಸೇರಿದಂತೆ ಇಂದು ನಮ್ಮ ಪಕ್ಷದ ಶಾಸಕರ ಜತೆ ಚರ್ಚೆ ಮಾಡಿದ್ದೇನೆ. ಜಿಬಿಎಯಲ್ಲಿ ಎಷ್ಟು ಪಾಲಿಕೆ ರಚನೆ ಮಾಡಬೇಕು ಎನ್ನುವ ವಿಚಾರವಾಗಿ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿದ್ದು, ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಬಾಕಿ ಇದೆ. ಅವರ ವಿಶ್ವಾಸ ಪಡೆದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಸ್ವಚ್ಛ ಬೆಂಗಳೂರು ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕಸವಿರುವ ಜಾಗದ ಫೋಟೋ ತೆಗೆದು ಅದನ್ನು ಈ ಸಂಖ್ಯೆಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸ ವಿಲೇವಾರಿ ಮಾಡಲಾಗುವುದು. ಇನ್ನು ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಶಾಸಕರು ತಮ್ಮ ಕ್ಷೇತ್ರಗಳ ವಾರ್ಡ್ ಗಳ ಬಗ್ಗೆ ಗಮನಹರಿಸಿ ರಸ್ತೆ ಕಾಮಗಾರಿಗೆ ಅನುದಾನವನ್ನು ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.












Click it and Unblock the Notifications