Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಾಹಿತಿ ಇಲ್ಲಿದೆ
ಬೆಂಗಳೂರು, ಫೆಬ್ರವರಿ 18: ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಆರೋಪ ಸುಳ್ಳು. ಸರ್ಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ. ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು, ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆಯಾಗಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವರಾದ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದ ಅವರು, ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರ ಜತೆಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ ಎಂದು ಹೇಳಿದರು.
ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.
ಕರ್ನಾಟಕವು ಪರಿಣಾಮಕಾರಿ ನಿರ್ವಹಣೆ ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸಾಧಿಸಲು ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಿಂದ ಅಕ್ರಮವಾಗಿ ನೀರು ಬಳಸಿಕೊಳ್ಳುವುದನ್ನು ತಡೆಯಲು ಕರ್ನಾಟಕ ನೀರಾವರಿ ಕಾಯ್ದೆಗೆ 1965ಕ್ಕೆ, 2024ರ ಆಗಸ್ಟ್ ನಲ್ಲಿ ತಿದ್ದುಪಡಿ ಮಾಡಲಾಯಿತು. ಕಾಲುವೆಗಳ ಮೂಲಕ ಅಕ್ರಮವಾಗಿ ನೀರು ಮೇಲೆತ್ತುವುದನ್ನು ತಪ್ಪಿಸಿ, ಕಾಲುವೆ ಕೊನೆ ಭಾಗದ ರೈತರಿಗೆ ನೀರು ಹೋಗುವಂತೆ ಮಾಡಲು ಈ ತಿದ್ದುಪಡಿ ಮಾಡಲಾಗಿದೆ. ಇದರ ವ್ಯಾಜ್ಯಗಳ ವಿಚಾರಣೆಗೆ ನೀರಾವರಿ ನ್ಯಾಯಾಲಯ ಸ್ಥಾಪನೆಗೆ ಅಗತ್ಯ ಸೆಕ್ಷನ್ ಗಳನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ, ಅಕ್ರಮಗಳ ವಿಚಾರಣೆ ನಡೆಸಲು ಅಧಿಕಾರಿಗಳಿಗೆ ಸೂಕ್ತ ಅಧಿಕಾರ ನೀಡಲಾಗಿದ್ದು, ಪೊಲೀಸರನ್ನು ಒಳಗೊಂಡ ಕಾರ್ಯಪಡೆಗೆ ಅವಕಾಶ ನಿಡುವ ಕುರಿತು ಈ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದರು.
ನೀರಾವರಿ ವಲಯದ ಪರಿಣಾಮಕಾರಿ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನೂತನ ರಾಜ್ಯ ಜಲ ನೀತಿಯನ್ನು 2022 ರಲ್ಲಿ ಜಾರಿಗೆ ತರಲಾಯಿತು. ಜಲ ಸಂರಕ್ಷಣೆ ಹಾಗೂ ಆರೋಗ್ಯ, ಆಹಾರ, ಇಂಧನ, ಪರಿಸರ ಉದ್ದೇಶಕ್ಕೆ ನೀರಿನ ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಕೆಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಅವುಗಳೆಂದರೆ, ಪ್ರಸ್ತುತ ಜಲ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 29 ವಿವಿಧ ಶಾಸನಗಳಿದ್ದು, ಆ ಪೈಕಿ 14 ಕೇಂದ್ರ ಸರ್ಕಾರ ಹಾಗೂ 15 ರಾಜ್ಯ ಸರ್ಕಾರಗಳ ಕಾಯ್ದೆಗಳಾಗಿವೆ. ಮುಂದಿನ ದಿನಗಳಲ್ಲಿ ನೀರಿನ ಪರಿಣಾಮಕಾರಿ ಬಳಕೆಗೆ ಇನ್ನಷ್ಟು ತಿದ್ದುಪಡಿ ಮಾಡುವುದರ ಜತೆಗೆ ಹೊಸ ಕಾಯ್ದೆಗಳನ್ನು ಜಾರಿಗೆ ತರಬೇಕು. ಅಧಿಕಾರಗಳು, ಪ್ರಾಧಿಕಾರಗಳು, ಸಿಬ್ಬಂದಿ ಮತ್ತು ಸಂಪನ್ಮೂಲಗಳೊಂದಿಗೆ ಹೊಸ ಆಡಳಿತ ಸಂಸ್ಥೆಗಳ ಸ್ಥಾಪನೆ ಮಾಡಬೇಕು. ಸರ್ಕಾರಿ ಇಲಾಖೆಗಳ, ಸಂಸ್ಥೆಗಳ ಪುನರ್ ರಚನೆ. ಇವುಗಳ ನಿರ್ವಹಣೆಗಾಗಿ ನೂತನ ನಿರ್ದಿಷ್ಟ ಕಾರ್ಯಾಚರಣಾ ಪ್ರಕ್ರಿಯೆಗಳ (Standard Operating Procedures) ಅಭಿವೃದ್ಧಿ ಮತ್ತು ಅಳವಡಿಕೆ ಮಾಡಿಕೊಳ್ಳಬೇಕಿದೆ ಎಂದರು.












Click it and Unblock the Notifications